ಡಾ. ಬಾಬು ಜಗಜೀವನ್ ರಾಮ್, ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಮುಂಡಗೋಡ

ಸಮಾಜದ ಏಳ್ಗೆಗಾಗಿ ತಮ್ಮ ಜೀವನವನ್ನೇ ಸವೆಸಿದ ಮಹಾನ್ ನಾಯಕರ ಆದರ್ಶವನ್ನು ಕನಿಷ್ಠ 25ರಷ್ಟಾದರೂ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಆಚರಣೆಗೆ ಪೂರ್ಣ ಸಾರ್ಥಕತೆ ಲಭಿಸುತ್ತದೆ ಎಂದು ಮಾಜಿ ಶಾಸಕ ವಿ.ಎಸ್. ಪಾಟೀಲ್ ಹೇಳಿದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ಮಾದರ ಮಹಾಸಭಾ ತಾಲೂಕಾ ಘಟಕ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಪಪಂ ಸಭಾಭವನದಲ್ಲಿ ಆಯೋಜಿಸಲಾದ ಡಾ. ಬಾಬು ಜಗಜೀವನ್ ರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದಿನ ಕಾಲದ ಸಮಾಜದಲ್ಲಿ ಜಾತಿ ತಾರತಮ್ಯ ಅತಿಯಾಗಿತ್ತು. ಕೆಳ ಜಾತಿಗಳನ್ನು ಅತ್ಯಂತ ಕೀಳಾಗಿ ಕಾಣಲಾಗುತ್ತಿತ್ತು. ಇಂತಹ ಅಸಮಾನತೆಯನ್ನು ತೊಡೆದುಹಾಕಿ ಎಲ್ಲರಿಗೂ ನ್ಯಾಯ ಸಿಗುವಂತಾಗಲು ಡಾ. ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ. ಅದರ ಸದುಪಯೋಗವನ್ನು ಪಡೆದುಕೊಂಡು ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಕೂಡ ನಾವು ಪಾಲಿಸಬೇಕಿದೆ ಎಂದು ಹೇಳಿದರು.ಭವ್ಯ ಮೆರವಣಿಗೆ:

ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ೧೧೯ನೇ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ಪ್ರಯುಕ್ತ ರಥೋತ್ಸವ ಮತ್ತು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಸಂಚರಿಸಿತು.

ಶಿವಾಜಿ ಸರ್ಕಲ್ ಮೂಲಕ ಸಾಗಿದ ಮೆರವಣಿಗೆ ಅಂಬೇಡ್ಕರ್ ಓಣಿಯಲ್ಲಿರುವ ಅಂಬೇಡ್ಕರ್ ಅವರ ಮೂರ್ತಿಗೆ ಹೂಮಾಲೆ ಅರ್ಪಿಸಿ ಟೌನ್ ಹಾಲ್ ತಲುಪಿತು. ಜಾಥಾ ಕಾರ್ಯಕ್ರಮದಲ್ಲಿ ಟಿಬೇಟಿಯನ್ ಕ್ಯಾಂಪ್ ನಂ. 3ರ ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ಹಾಗೂ ಕೊಳಲು ನುಡಿಸುವ ಮೂಲಕ ಗಮನ ಸೆಳೆದರೆ, ಡೊಳ್ಳು ಕುಣಿತ ಮೆರವಣಿಗೆಗೆ ಕಳೆ ತಂದಿತು. ಕಾರ್ಯಕ್ರಮದ ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಲಾಯಿತು.ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಸ್. ಫಕ್ಕೀರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಎಲ್.ಟಿ. ಪಾಟೀಲ್ ಮಾತನಾಡಿದರು. ಗಣ್ಯರಾದ ಎಸ್.ಡಿ. ಮುಡೆಣ್ಣವರ ಸ್ವಾಗತಿಸಿದರು. ಪಿ. ನಾಗೇಂದ್ರ ನಿರೂಪಿಸಿದರು.