ಕನ್ನಡಪ್ರಭ ವಾರ್ತೆ ಅರಸೀಕೆರೆ ತಾಲೂಕಿನಲ್ಲಿ ಮುಸುಕಿನ ಜೋಳಕ್ಕೆ ಬಿಳಿಸುಳಿ ರೋಗದ ಬಾಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ವಿಶ್ವವಿದ್ಯಾಲಯದ ತಜ್ಞರ ತಂಡ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿತು. ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರ ಜೊತೆಗೆ, ಸೋಂಕು ಕಾಣಿಸಿಕೊಂಡ ಪ್ರದೇಶಗಳಲ್ಲಿ ಬೆಳೆ ಪರಿವರ್ತನೆ ಕೈಗೊಳ್ಳುವಂತೆ ರೈತರಿಗೆ ಸಲಹೆ ನೀಡಲಾಗಿದೆ.ತಾಲೂಕಿನ ಬೋರನಕೊಪ್ಪಲು ಸೇರಿದಂತೆ ವಿವಿಧ ಗ್ರಾ ಈ ಬಾರಿ ಬಿಳಿಸುಳಿ ರೋಗದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದ್ದು, ರೈತರು ಎಚ್ಚರಿಕೆಯಿಂದ ಕೃಷಿ ಚಟುವಟಿಕೆ ನಡೆಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸುಮಾರು 1.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆ ಗುರಿ ಹೊಂದಲಾಗಿದ್ದು, ಈಗಾಗಲೇ 20ರಿಂದ 25 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಉಳಿದ ಪ್ರದೇಶಗಳಲ್ಲಿ ಬಿತ್ತನೆಗೆ ಮುನ್ನ ರೈತರಿಗೆ ಅಗತ್ಯ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ರಂಗನಾಥ್ ಮಾತನಾಡಿ, ಕಳೆದ ವರ್ಷ ಬಿಳಿಸುಳಿ ರೋಗ ಕಾಣಿಸಿಕೊಂಡ ಜಮೀನುಗಳಲ್ಲಿ ಮತ್ತೆ ಮುಸುಕಿನ ಜೋಳ ಬೆಳೆಯುವ ಬದಲು ತೊಗರಿ, ಉದ್ದು, ಆಲಸಂದೆ, ಅವರೆ ಹಾಗೂ ನೆಲಗಡಲೆ ಸೇರಿದಂತೆ ದ್ವಿದಳ ಧಾನ್ಯ ಬೆಳೆಗಳನ್ನು ಬೆಳೆಯುವುದು ಸೂಕ್ತ ಎಂದು ಸಲಹೆ ನೀಡಿದರು. ಮುಸುಕಿನ ಜೋಳ ಕಟಾವಿನ ಬಳಿಕ ಸೆಣಬು ಮತ್ತು ಡಯಾಂಚ ಹಸಿರು ಗೊಬ್ಬರ ಬೆಳೆಗಳನ್ನು ಬೆಳೆಸಿ ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಆರೋಗ್ಯ ಸುಧಾರಿಸುತ್ತದೆ. ಹೆಚ್ಚಿನ ಮಳೆಯಾಗುವ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಬಸಿಕಾಲುವೆ ನಿರ್ಮಾಣಕ್ಕೂ ರೈತರು ಆದ್ಯತೆ ನೀಡಬೇಕು ಎಂದು ತಿಳಿಸಿದರು.ಕೊಟ್ಟಿಗೆ ಗೊಬ್ಬರದೊಂದಿಗೆ ಟ್ರೈಕೋಡರ್ಮಾ ಹಾಗೂ ಸ್ಯೂಡೋಮೊನಾಸ್ ಜೈವಿಕ ಜೀವಾಣುಗಳನ್ನು ಮಿಶ್ರಣ ಮಾಡಿ ಮಣ್ಣಿಗೆ ಸೇರಿಸುವುದು ರೋಗ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಮಣ್ಣಿನಲ್ಲಿ ಹೆಚ್ಚಿನ ತೇವಾಂಶ ಇರುವ ಸಂದರ್ಭದಲ್ಲಿ ಬಿತ್ತನೆ ಕಾರ್ಯವನ್ನು ಮುಂದೂಡುವುದು ಉತ್ತಮ ಎಂದು ತಜ್ಞರು ಅಭಿಪ್ರಾಯಪಟ್ಟರು. ಪರ್ಯಾಯ ಬೆಳೆಯಾಗಿ ಎಂಆರ್-1 ಹಾಗೂ ಎಂಆರ್‌-6 ರಾಗಿ ತಳಿಗಳನ್ನು ಜೂನ್ ತಿಂಗಳಲ್ಲಿ ಬೆಳೆಯಬಹುದಾಗಿದ್ದು, ತೊಗರಿ, ಆಲಸಂದೆ ಮತ್ತು ಅವರೆ ಬೆಳೆಗಳನ್ನು ಅಂತರ ಬೆಳೆಯಾಗಿ ಬೆಳೆಸುವುದು ಲಾಭದಾಯಕ. ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಜಿಪಿಯು-28, ಜಿಪಿಯು-66, ಎಂಎಲ್-365 ಮತ್ತು ಕೆಎಂಆರ್-301 ರಾಗಿ ತಳಿಗಳನ್ನು ಬೆಳೆಯಲು ಶಿಫಾರಸು ಮಾಡಲಾಗಿದೆ.ಈ ಸಂದರ್ಭದಲ್ಲಿ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಉಪ ಕೃಷಿ ನಿರ್ದೇಶಕ ಪ್ರಭಾಕರ್‌, ಡಾ. ಕೋಕಿಲ, ಸಸ್ಯರೋಗ ತಜ್ಞರಾದ ಡಾ. ಮಲ್ಲಿಕಾರ್ಜುನ್, ಡಾ. ಮಂಜುನಾಥ್, ಬೇಸಾಯ ತಜ್ಞ ಸುನಿಲ್ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.