ಕನ್ನಡಪ್ರಭ ವಾರ್ತೆ ವಿಜಯಪುರ
ಜಾತಿ ಗಣತಿ ವರದಿಯನ್ನು ಸರ್ಕಾರ ಕೂಡಲೇ ಬಹಿರಂಗ ಪಡಿಸಬೇಕು. ಇಲ್ಲವಾದರೆ, ವಿಧಾನಮಂಡಲ ಅಧಿವೇಶನ ವೇಳೆ ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ ಎಚ್ಚರಿಸಿದರು.ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿಗಣತಿ ಬಹಿರಂಗ ಪಡಿಸದೆ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸುಮಾರು ಒಂದು ಸಾವಿರ ಕೋಟಿ ಖರ್ಚು ಮಾಡಿ ಮೂರು ವರದಿಗಳನ್ನು ತಯಾರಿಸಿದ್ದರು. ಈ ವರದಿಗಳನ್ನು ಯಾಕೆ ಬಹಿರಂಗ ಪಡಿಸುತ್ತಿಲ್ಲ ಎಂದು ಪ್ರಶ್ನಿಸಿದರು
ಈಗಲಾದರೂ ಮಧುಸೂಧನ ನಾಯಕ ಅವರು ನೀಡಿರುವ ವರದಿಯನ್ನು ಗೌಪ್ಯವಾಗಿ ಇರಿಸಿದೇ ಅದನ್ನು ಸದನದಲ್ಲಿ ಮಂಡನೆ ಮಾಡಲೇಬೇಕು, ಅದರ ಸಮಗ್ರ ಚರ್ಚೆಗೊಳಪಡಿಸಬೇಕು, ಇಲ್ಲವಾದರೆ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ವಿಧಾನಸಭೆಗೆ ಮುತ್ತಿಗೆ ಹಾಕಲು ನಾವು ಹಿಂದೇಟು ಹಾಕುವುದಿಲ್ಲ ಎಂದರು.ಕೂಡಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಬೇಕು. ಹಿಂದುಳಿದ ವರ್ಗಗಳು ಕಾಂಗ್ರೆಸ್ ಅವಧಿಯಲ್ಲಿ ತತ್ತರಿಸಿ ಹೋಗಿವೆ. ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವುದಾಗಿ ಹೇಳಿ ಅಧಿಕಾರ ನಡೆಸಿದ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗಗಳ ಬಗ್ಗೆ ಚಕಾರ ಎತ್ತದೇ ದೊಡ್ಡ ಅನ್ಯಾಯ ಮಾಡಿದ್ದಾರೆ ಎಂದು ಹೇಳಿದರು.
ಬಿಹಾರ, ತೆಲಂಗಾಣ ಸೇರಿದಂತೆ ಎಲ್ಲ ರಾಜ್ಯಗಳು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿವೆ. ಅಹಿಂದ ವರ್ಗದ ಐಕಾನ್ ಆಗಿದ್ದ ಸಿದ್ದರಾಮಯ್ಯ ಅವರು ಮಾತ್ರ ಎರಡು ಅವಧಿಯಲ್ಲಿಯೂ ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಲೇ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
ಮುಖಂಡ ಶರಣು ತಳಕೇರಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ, ಬಿಜೆಪಿ ಮುಖಂಡರಾದ ಸಾಬು ಮಾಶ್ಯಾಳ, ರಾಜಕುಮಾರ ಸಗಾಯಿ, ಶಿವರುದ್ರ ಬಾಗಲಕೋಟ, ವಿಜಯ ಜೋಶಿ ಇದ್ದರು.