ಸಾರಾಂಶ
ಕನ್ನಡಪ್ರಭ ವಾರ್ತೆ ತಿಪಟೂರು
ಕೃಷಿ ಮತ್ತು ಋಷಿ ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರೈತರು ಕೃಷಿಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಶ್ರೀ ಧಗ್ರಾಯೋ ಕೃಷಿಗೆ ಪ್ರಾಮುಖ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕಿರಿಯ ಶ್ರೀಗಳಾದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.ತಾಲೂಕು ನೊಣವಿನಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಶ್ರೀ ಕ್ಷೇತ್ರ ಧಗ್ರಾಯೋ ಯಾಂತ್ರಿಕೃತ ಭತ್ತ ನಾಟಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿಗೆ ಕಾರ್ಮಿಕರ ಸಮಸ್ಯೆಯಿಂದ ರೈತರು ನಷ್ಟವನ್ನು ಅನುಭವಿಸುವಂತಾಗಿದೆ. ಕಾರ್ಮಿಕರ ಸಮಸ್ಯೆ ನಿವಾರಣೆಗೆ ಕೃಷಿ ಯಂತ್ರೋಪಕರಣಗಳ ಅವಶ್ಯಕತೆ ಇದ್ದು ಇವುಗಳ ಬಳಕೆಯಿಂದ ರೈತರು ಯಾರ ಮೇಲೂ ಅವಲಂಬಿತರಾಗದೆ ಕೃಷಿ ಕಾಯಕದಲ್ಲಿ ನಿರತರಾಗಬಹುದು ಇದರಿಂದ ಕಾಲ ಕಾಲಕ್ಕೆ ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬಹುದು ಎಂದರು.ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ, ಸುಧೀರ್ ಜೈನ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಮ್ಮ ವಹಿಸಿದ್ದರು. ಈ ವೇಳೆ ಭತ್ತ ನಾಟಿ ಸಸಿ ಬೆಳೆಸಲು ಜಮೀನು ನೀಡಿ ಸಹಕರಿಸಿದ್ದ ರೈತರಾದ ಮಠದ ಪ್ರಕಾಶ್ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಯೋಜನಾಧಿಕಾರಿ ಕೆ. ಸುರೇಶ್, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ದಿವ್ಯ, ಪ್ರಗತಿಪರ ಕೃಷಿಕ ಸ್ವಾಮಿ, ವಲಯದ ಮೇಲ್ವಿಚಾರಕ ಮುನಿಕೃಷ್ಣ, ಸಮನ್ವಯಾಧಿಕಾರಿ ಭಾಗ್ಯಲಕ್ಷ್ಮಿ, ಕೃಷಿ ಅಧಿಕಾರಿ ಪ್ರದೀಪ್ ಕುಮಾರ್ ಮತ್ತಿತರರಿದ್ದರು.