ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಭಾರತದಲ್ಲಿ ಏಡ್ಸ್ 1986 ರಲ್ಲಿ ಮೊದಲು ಕಾಣಿಸಿಕೊಂಡಿತು. 40 ಲಕ್ಷ ಜನರು ಈ ಸೋಂಕಿಗೆ ತುತ್ತಾಗಿದ್ದಾರೆ. ಇದಕ್ಕೆ ಸೂಕ್ತವಾದ ಔಷಧವನ್ನು ವೈದ್ಯ ವಿಜ್ಞಾನಿಗಳು ಕಂಡುಹಿಡಿಯಲು ಸದಾ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯವಾಗಿ ಜನರಲ್ಲಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಆಗ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಏರ್ಪಡಿಸಿದ್ದ ಸಮುದಾಯಗಳು ಮುನ್ನಡೆಸಲಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಮಾತನಾಡಿ, ಏಡ್ಸ್ ಎಂಬ ಮಾರಕ ರೋಗದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರೋಗಕ್ಕೆ ಪೀಡಿತರಾದವರನ್ನು ಮತ್ತು ಅವರ ಕುಟುಂಬದ ಸದಸ್ಯರನ್ನು ನಾವು ಯಾವ ರೀತಿ ನೋಡಿಕೊಳ್ಳಬೇಕು ಎಂಬುದು ಈ ಜಾಥಾದ ಮುಖ್ಯ ಉದ್ದೇಶ. ಎ.ಆರ್.ಟಿ. ಚಿಕಿತ್ಸೆಯನ್ನು ಪಡೆಯುವುದರಿಂದ ಜೀವನವನ್ನು ಸುಧಾರಿಸಿಕೊಳ್ಳಬಹುದು. 2023 ರೊಳಗೆ ಏಡ್ಸ್ನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಬೇಕು ಎಂದು ಹೇಳಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, 2023ರ ವೇಳೆಗೆ ಎಚ್.ಐ.ವಿ ಮತ್ತು ಏಡ್ಸ್ ಪ್ರಕರಣ ಸೊನ್ನೆ ಆಗಬೇಕು. ಯಾವುದೇ ಸಮಸ್ಯೆಯನ್ನು ಆಲಸ್ಯ ಮಾಡಬಾರದಂತೆ ಎಚ್ಚರಿಕೆ ವಹಿಸಬೇಕು ಎಂದರು.
ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜ್ಗಳಲ್ಲಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚು ಅರಿವು ಮೂಡಿಸಬಹುದು. ಜಿಲ್ಲೆಯಲ್ಲಿ ಎಚ್.ಐ.ವಿ ಮತ್ತು ಏಡ್ಸ್ ಕುರಿತು ಜಾಗೃತಿ ಮೂಡಿಸಲು 42 ರೆಡ್ ರಿಬ್ಬನ್ ಕ್ಲಬ್ಗಳು ಸ್ಥಾಪನೆಯಾಗಿವೆ ಎಂದು ಹೇಳಿದರು.ರೋಟರಿ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿದರು. ಎಚ್.ಐ.ವಿ ಮತ್ತು ಏಡ್ಸ್ ಕುರಿತು ಕೆಲಸ ನಿರ್ವಹಿಸುತ್ತಿರುವವರಿಗೆ ಸನ್ಮಾನ ಮಾಡಲಾಯಿತು. ಜಿಲ್ಲಾ ನ್ಯಾಯಾವಾಧಿಗಳ ಸಂಘ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ದಿನೇಶ್ ಜಿ.ಸಿ. ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ರಮೇಶ್ ಸಿ, ಸಿದ್ಧನಗೌಡ, ರವಿಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
- - - -1ಎಸ್ಎಂಜಿಕೆಪಿ02:ವಿಶ್ವ ಏಡ್ಸ್ ದಿನ ಪ್ರಯುಕ್ತ ಸಮುದಾಯಗಳು ಮುನ್ನಡೆಸಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.