ಮೂಲಸೌಕರ್ಯಕ್ಕೆ ಒತ್ತಾಯಿಸಿ ಎಐಡಿಎಸ್ಒ ಪ್ರತಿಭಟನೆ

| Published : Jul 10 2024, 12:42 AM IST

ಸಾರಾಂಶ

ಸ್ವಚ್ಛತೆ ಮತ್ತು ಮೂಲ ಸೌಕರ್ಯ ಕಲ್ಪಿಸುವಂತೆ ಎಐಡಿಎಸ್ಒ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕುರುಗೋಡು

ತಾಲೂಕಿನ ಕೋಳೂರು ಗ್ರಾಮದಲ್ಲಿ ಸ್ವಚ್ಛತೆ ಮತ್ತು ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಎಐಡಿಎಸ್ಒ) ಸಂಘಟನೆ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸದ ಪರಿಣಾಮ ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಪರಿಣಾಮ ಸೊಳ್ಳೆಗಳ ಸಂಖ್ಯೆ ಹೆಚ್ಚುತ್ತಿದೆ. ಜನರು ಸೊಳ್ಳೆ ಕಡಿತದಿಂದ ಬರುವ ಡೆಂಘೀ, ಮಲೇರಿಯಾ, ಚಿಕೂನ್‌ಗುನ್ಯಾ ರೋಗ ಭೀತಿಯಲ್ಲಿ ಬದುಕುವಂತಾಗಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎ. ಪಂಪಾಪತಿ ಆರೋಪಿಸಿದರು.

ಕಲುಷಿತ ನೀರಿನ ಜತೆಗೆ ಮಳೆಯ ನೀರು ಗ್ರಾಮದ ತಗ್ಗು ಪ್ರದೇಶಗಳಲ್ಲಿ ಸಂಗ್ರಹವಾಗುತ್ತಿದೆ. ಕೂಡಲೇ ಕಲುಷಿತ ನೀರು ಸಂಗ್ರಹವಾಗದಂತೆ ಕ್ರಮಕೈಗೊಳ್ಳಬೇಕು. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್‌ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಜಗದೀಶ್ ನೇಮಕಲ್, ಕೆ. ಬಸಣ್ಣ, ಶೇಖಣ್ಣ, ನಾಗರಾಜ, ಶಿವಪ್ಪ, ಜಿನ್ನದ ಶೇಖಣ್ಣ, ನಿಂಗಪ್ಪ, ಬಸಣ್ಣ, ಗಂಗಾಧರ, ಮಾರೇಶ್, ಗಾದಿಲಿಂಗಪ್ಪ, ವೆಂಕಟೇಶ ಗೌಡ ಮತ್ತು ಶಂಭು ಇದ್ದರು.