ಸಾರಾಂಶ
ಕನ್ನಡಪ್ರಭ ವಾರ್ತೆ ಹಿರಿಯೂರು
ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ರಾಜ್ಯ ಮಟ್ಟದ ಸಮಾವೇಶದ ಪೋಸ್ಟರ್ ಅನ್ನು ನಗರದ ಭಗತ್ ಸಿಂಗ್ ಪಾರ್ಕ್ ಬಳಿ ಎಐಡಿಎಸ್ಒ ಕಾರ್ಯಕರ್ತರು ಬಿಡುಗಡೆ ಮಾಡಿದರು.ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ 50 ಲಕ್ಷ ಸಹಿಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಎಐಡಿಎಸ್ಒ ಸಿದ್ಧತೆ ನಡೆಸಿದ್ದು, ಆ.21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ರಾಜ್ಯವ್ಯಾಪಿ ಚಳುವಳಿಯ ಸಮಾರೋಪ ಸಭೆ ನಡೆಯಲಿದೆ.
ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಹಮ್ಮಿಕೊಂಡಿದ್ದ ಐತಿಹಾಸಿಕ 50 ಲಕ್ಷ ಸಹಿ ಸಂಗ್ರಹ ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿದ್ದು ಸರ್ಕಾರಿ ಶಾಲೆಗಳನ್ನು ಉಳಿಸಿ ಮತ್ತು ಬಲಪಡಿಸಿ ಎಂಬ ಕರೆಯೊಂದಿಗೆ ಪ್ರಾರಂಭವಾದ ಈ ಅಭಿಯಾನವು ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ವಿದ್ಯಾರ್ಥಿ ಚಳುವಳಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ.50,000ಕ್ಕೂ ಹೆಚ್ಚು ಸ್ವಯಂಸೇವಕರು ರಾಜ್ಯಾದ್ಯಂತ ಈ ಅಭಿಯಾನದಲ್ಲಿ ಭಾಗವಹಿಸಿದ್ದು ಪೋಷಕರು, ವಿದ್ಯಾರ್ಥಿಗಳು, ಸ್ಥಳೀಯ ನಾಗರಿಕರ ಜೊತೆ ಸೇರಿ ನೂರಾರು ಪ್ರತಿಭಟನಾ ಸಭೆಗಳನ್ನು ನಡೆಸಿದ್ದಾರೆ. ರಾಜ್ಯದ 30 ಜಿಲ್ಲೆಗಳ 150 ಕ್ಕೂ ಹೆಚ್ಚು ತಾಲೂಕುಗಳನ್ನು ಈ ಅಭಿಯಾನವು ತಲುಪಿದ್ದು 1000ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.
ಸಂಗ್ರಹಿಸಲಾದ ಸಹಿಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಗೆ ಔಪಚಾರಿಕವಾಗಿ ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣದ ಹಿತೈಷಿಗಳು ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ,ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ, ಚಲನಚಿತ್ರ ನಟ ಕಿಶೋರ್, ಎಐಡಿಎಸ್ಒ ಪ್ರಧಾನ ಕಾರ್ಯದರ್ಶಿ ಶಿಬಾಶಿಷ್ ಪ್ರಹರಾಜ್, ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ರಾಜ್ಯಾಧ್ಯಕ್ಷರಾದ ಅಶ್ವಿನಿ ಕೆ.ಎಸ್.ಹಾಜರಿರುವರು ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ.ಈರಣ್ಣ ಹಾಗೂ ಸದಸ್ಯರಾದ ಎಂ.ಶಾಂತಿ ತಿಳಿಸಿದ್ದಾರೆ.