-ಬಾಲಖೇಡದ ರಸ್ತೆಯಲ್ಲಿ ಅನಧಿಕೃತ ಗೋಡೆ ನಿರ್ಮಾಣ । ದೂರು ನೀಡಿದರೂ ನಿರ್ಲಕ್ಷ್ಯಿಸಿದ ಆರೋಪ
-----ಕನ್ನಡಪ್ರಭ ವಾರ್ತೆ ಆಳಂದ
ತಾಲೂಕಿನ ಬಾಲಖೇಡ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಅನಧಿಕೃತವಾಗಿ ಗೋಡೆ ನಿರ್ಮಿಸಿ ಸಂಚಾರಕ್ಕೆ ಅಡ್ಡಿ ಉಂಟು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದರೂ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಪೀರಪ್ಪ ಎಂಬುವರ ತಂದೆ ಚಂದಪ್ಪ ಮಾಂಗ ಅವರು ಸಾರ್ವಜನಿಕ ರಸ್ತೆಯ ಮೇಲೆ ಗೋಡೆ ನಿರ್ಮಿಸಿದ್ದರಿಂದ, ಹಲವು ವರ್ಷಗಳಿಂದ ಬಳಕೆಯಲ್ಲಿದ್ದ ರಸ್ತೆ ಬಂದ್ ಆಗಿದೆ. ಇದರಿಂದ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ದೂರನಲ್ಲಿ ತಿಳಿಸಿದ್ದಾರೆ.
ಸಮಸ್ಯೆ ಕುರಿತು ಗ್ರಾ.ಪಂ ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈಗಾಗಲೇ ದೂರು ಸಲ್ಲಿಸಿದ್ದು, ಗ್ರಾಮ ಪಂಚಾಯಿತಿ ಅನುಮತಿ ಇಲ್ಲದೆ ನಿರ್ಮಾಣ ಮಾಡಲಾಗಿದೆ ಎಂದು ಉಲ್ಲೇಖಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮನ್ವಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ದೂರು ನೀಡಿದ್ದರೂ ಆಳಂದದ ಪೊಲೀಸರು ಪೂರ್ತಿಯಾಗಿ ನಿರ್ಲಕ್ಷಿಸಿದ್ದಾರೆ. ಸಾರ್ವಜನಿಕರ ರಸ್ತೆ ಒತ್ತುವರಿ ತೆರವುಗೊಳಿಸುವುದರ ಜತೆಗೆ ತಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
....ಕೋಟ್ಸ್...
ಸಾರ್ವಜನಿಕ ರಸ್ತೆ ಒತ್ತುವರಿ ತೆರವುಗೊಳಿಸುವ ಅಧಿಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ. ಈ ಪ್ರಕರಣದಲ್ಲಿ ಪೊಲೀಸರ ನೇರ ಪಾತ್ರವಿಲ್ಲ. ಪಂಚಾಯಿತಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಬಂದೋಬಸ್ತ್ ಕೋರಿದರೆ ಪೊಲೀಸ್ ಇಲಾಖೆ ಅಗತ್ಯ ಭದ್ರತೆ ಒದಗಿಸುತ್ತದೆ.-ಶರಣಬಸಪ್ಪ ಕೊಡ್ಲಾ, ಪಿಐ, ಆಳಂದ ಪೊಲೀಸ್ ಠಾಣೆ
