ಸಾರಾಂಶ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಲಕ್ಷ್ಮಣ್ ಹೇಳಿಕೆ
- - -ದಾವಣಗೆರೆ: ಮದ್ಯವರ್ಜನ ಶಿಬಿರ ಪವಿತ್ರ ಕಾರ್ಯಕ್ರಮವಾಗಿದೆ. ಇದು ಕೇವಲ ಧರ್ಮಸ್ಥಳ ಸಂಸ್ಥೆ ಕಾರ್ಯಕ್ರಮ ಅಲ್ಲ. ಬದಲಾಗಿ ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮವಾಗಿದ್ದು, ಜನಮೆಚ್ಚುಗೆ ಪಡೆದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಲಕ್ಷ್ಮಣ್ ಹೇಳಿದರು.
ತಾಲೂಕಿನ ಎಲೆಬೇತೂರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ದಾವಣಗೆರೆ ಗ್ರಾಮಾಂತರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಎಲೆಬೇತೂರು ವಲಯ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ 1927ನೇ ಮದ್ಯವರ್ಜನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮ ಊರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆ ವಿಶ್ವಮಾನ್ಯತೆ ಪಡೆದುಕೊಂಡಿದೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಚಿತ್ರದುರ್ಗ ವಿಭಾಗದ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ಬೇತೂರು ಗ್ರಾಪಂ ಅಧ್ಯಕ್ಷ ಕೆ.ಎಂ. ರೇವಣಸಿದ್ದಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಯೋಧ ಎನ್.ಎಂ ಬಸಪ್ಪ ಅವರನ್ನು ಸನ್ಮಾನಿಸಲಾಯಿತು. ವ್ಯವಸ್ಥಾಪನಾ ಸಮಿತಿ ಎಲೆಬೇತೂರು ಅಧ್ಯಕ್ಷ ಷಡಕ್ಷರಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಸಮಿತಿಯ ಎಲೆಬೇತೂರು ಗೌರವಾಧ್ಯಕ್ಷ ಎಚ್. ಬಸವರಾಜಪ್ಪ, ಮೇಲ್ವಿಚಾರಕ ಕೊಟ್ರೇಶ್, ಸಂಗನಗೌಡ, ಟಿ.ಎಂ.ಸಿದ್ದಯ್ಯ, ಎಂ.ನಾಗರಾಜ್, ವಿಶ್ವನಾಥ ಇತರರು ಇದ್ದರು.
- - --25ಕೆಡಿವಿಜಿ33.ಜೆಪಿಜಿ:
ಎಲೆಬೇತೂರಿನಲ್ಲಿ ನಡೆದ ಮದ್ಯವರ್ಜನ ಶಿಬಿರವನ್ನು ಕೆ.ಎಂ.ರೇವಣಸಿದ್ದಪ್ಪ ಉದ್ಘಾಟಿಸಿದರು.