ಕೆಲವರು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಎಷ್ಟೇ ಷಡ್ಯಂತರ ನಡೆಸಿದರು ಅವೆಲ್ಲವೂ ವಿಫಲಗೊಂಡು ಕೊನೆಗೂ ಸತ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ನುಗ್ಗೇಹಳ್ಳಿ ಪುರ ವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಡಾ. ವೀರೇಂದ್ರ ಹೆಗ್ಗಡೆಯವರು ಸದಾ ಜನರ ಒಳಿತಿಗಾಗಿ ಚಿಂತಿಸುವ ವ್ಯಕ್ತಿಯಾಗಿದ್ದು ಅವರ ಮೇಲೆ ಅಪಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಕೆಲವರು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಎಷ್ಟೇ ಷಡ್ಯಂತರ ನಡೆಸಿದರು ಅವೆಲ್ಲವೂ ವಿಫಲಗೊಂಡು ಕೊನೆಗೂ ಸತ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ನುಗ್ಗೇಹಳ್ಳಿ ಪುರ ವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಹೋಬಳಿ ಕೇಂದ್ರದ ಎಪಿಎಂಸಿ ಆವಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ಗ್ರಾಮಾಂತರ ಯೋಜನಾ ಕಚೇರಿ ಹಾಗೂ ಕಾರೇಹಳ್ಳಿ ವಲಯ ಮತ್ತು ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಅನೇಕರು ಪುಣ್ಯಕ್ಷೇತ್ರದ ಹೆಸರನ್ನು ಹಾಳು ಮಾಡಲು ಹುನ್ನಾರ ನಡೆಸಿದರೂ ಸತ್ಯಕ್ಕೆ ಯಾವಾಗಲೂ ಜಯವೆಂಬತ್ತೆ ಜಯ ಸಿಕ್ಕಿದೆ. ಇದರಿಂದ ಮತ್ತಷ್ಟು ಶ್ರೀ ಕ್ಷೇತ್ರದ ಪವಿತ್ರದ ಹೆಚ್ಚಾಗಿದೆ ಡಾ. ವೀರೇಂದ್ರ ಹೆಗ್ಗಡೆಯವರು ಸದಾ ಜನರ ಒಳಿತಿಗಾಗಿ ಚಿಂತಿಸುವ ವ್ಯಕ್ತಿಯಾಗಿದ್ದು ಅವರ ಮೇಲೆ ಅಪಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತುಮಕೂರು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಮಾತನಾಡಿ, ರಾಜ್ಯದಲ್ಲಿ ಸರಿ ಸುಮಾರು 6.50 ಲಕ್ಷ ಸ್ವಸಹಾಯ ಸಂಘಗಳಿದ್ದು 60 ಲಕ್ಷ ಜನ ಸದಸ್ಯರಿದ್ದಾರೆ. ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಸಹಾಯಮಾಡುವ ದೃಷ್ಟಿಯಿಂದ ಡಾ. ವೀರೇಂದ್ರ ಹೆಗ್ಗಡೆಯವರು ಈಗಾಗಲೇ ರಾಜ್ಯದಲ್ಲಿ 1.25 ಲಕ್ಷ ವಿದ್ಯಾರ್ಥಿಗಳಿಗೆ 120 ಕೋಟಿ ಹಣವನ್ನು ವಿನಿಯೋಗ ಮಾಡಲಾಗುತ್ತಿದೆ. ಜೊತೆಗೆ ಸ್ವಸಹಾಯ ಸಂಘಗಳಿಗೆ ಸುಮಾರು 1000 ಕೋಟಿ ಸಾಲವನ್ನು 6 ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಕೊಡಲಾಗಿದೆ ಎಂದರು.ತಿಪಟೂರು ಗ್ರಾಮಾಂತರ ಯೋಜನಾಧಿಕಾರಿ ಕೆ ಸುರೇಶ್ ಮಾತನಾಡಿ ಕಾರೇಹಳ್ಳಿ ವಲಯದ ವ್ಯಾಪ್ತಿಯಲ್ಲಿ ಎಲ್ಲಾ ಸ್ವ ಸಹಾಯ ಸಂಘಗಳ ಸದಸ್ಯರ ಸಹಯೋಗದೊಂದಿಗೆ ಸಾಮೂಹಿಕ ವರಲಕ್ಷ್ಮಿ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಿಪಟೂರು ಗ್ರಾಮಾಂತರ ಯೋಜನಾ ಕಚೇರಿ 12 ಕೆರೆಗಳನ್ನು ಪುನಶ್ಚೇತನ ಗೊಳಿಸಲಾಗಿದೆ ಇದರಿಂದ ಆ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೃಷಿ ಶಿಕ್ಷಣ ಆರೋಗ್ಯ ಹೈನುಗಾರಿಕೆ ಸೇರಿದಂತೆ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಜನರಿಗೆ ನೆರವಾಗಿದೆ ಎಂದರು.

ತಾಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್ ಚಿರಂಜೀವಿ ಹಾಗೂ ಉಪನ್ಯಾಸಕ ವೇಣುಗೋಪಾಲ್ ಮತ್ತು ಕಾರೇಹಳ್ಳಿ ವಲಯದ ಅಧ್ಯಕ್ಷ ಬಸವರಾಜ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಷ್ಯ ವೇತನ ಹಾಗೂ ಮಾಶಾಸನಕ್ಕೆ ಅರ್ಜಿ ಸಲ್ಲಿಸಿ ಆಯ್ಕೆಗೊಂಡಿದ್ದ ಫಲಾನುಭವಿಗಳಿಗೆ ಆದೇಶ ಪ್ರತಿಯನ್ನು ನೀಡಲಾಯಿತು.ಸಾಮೂಹಿಕ ವರಲಕ್ಷ್ಮಿ ಪೂಜಾ ಹಾಗೂ ಧಾರ್ಮಿಕ ಸಭಾ ಪೂಜಾ ಕಾರ್ಯಕ್ರಮವನ್ನು ಶ್ರೀ ಅಮರಗಿರಿ ರಂಗನಾಥ ಸ್ವಾಮಿ ದೇವಾಲಯದ ಅರ್ಚಕರಾದ ರಂಗನಾಥ್ ಹಾಗೂ ಅನೇಕ ಅರ್ಚಕರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಪೂಜಾ ಕಾರ್ಯಕ್ರಮದ ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರವೀಣ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜ್, ಸದಸ್ಯರಾದ ಎನ್ ಎಸ್ ಮಂಜುನಾಥ್, ಹೊನ್ನೇಗೌಡ, ಧರ್ಮಸ್ಥಳ ಪಾದಯಾತ್ರೆ ಸಮಿತಿ ಅಧ್ಯಕ್ಷ ಹೋಟೆಲ್ ರಾಜಣ್ಣ, ವಲಯದ ಮೇಲ್ವಿಚಾರಕಿ ಕಲ್ಯಾಣಿ ಮಧು ಎನ್, ಸೇರಿದಂತೆ ಒಕ್ಕೂಟದ ಅಧ್ಯಕ್ಷರು, ಪೂಜಾ ಸಮಿತಿಯ ಎಲ್ಲಾ ಸದಸ್ಯರು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.