ಸುಗಮ‌ ಅಧಿವೇಶನಕ್ಕಾಗಿ ಸಕಲ‌ ಸಿದ್ಧತೆ

| Published : Dec 07 2024, 12:31 AM IST

ಸಾರಾಂಶ

ಪ್ರಸಕ್ತ ಸಾಲಿನ ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ‌ ಸಂಬಂಧಿಸಿದಂತೆ ವಸತಿ, ಸಾರಿಗೆ, ಊಟೋಪಹಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತದಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪ್ರಸಕ್ತ ಸಾಲಿನ ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ‌ ಸಂಬಂಧಿಸಿದಂತೆ ವಸತಿ, ಸಾರಿಗೆ, ಊಟೋಪಹಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತದಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸುಗಮ‌‌ ಅಧಿವೇಶನಕ್ಕಾಗಿ ಈಗಾಗಲೇ ಹತ್ತು ಸಮಿತಿಗಳನ್ನು ರಚಿಸಲಾಗಿದೆ. ಶಾಸಕರು, ಸಚಿವರು, ಅಧಿಕಾರಿಗಳು, ಸಿಬ್ಬಂದಿ ವಸತಿಗಾಗಿ ಖಾಸಗಿ ಹೋಟೆಲ್, ಅತಿಥಿಗೃಹ, ಪ್ರವಾಸಿಮಂದಿರಗಳಲ್ಲಿ ಒಟ್ಟಾರೆ 2756 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದರು.ಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಎಂಟು ಕಡೆಗಳಲ್ಲಿ ಪಾವತಿ ಆಧಾರದ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಸ್ವ-ಸಹಾಯ ಸಂಘಗಳು ಸೇರಿದಂತೆ ವಿವಿಧ ಬಗೆಯ ಸಂಸ್ಥೆಗಳಿಗೆ 38 ಸ್ಟಾಲ್‌ಗಳಿಗೂ ಅವಕಾಶ ಮಾಡಿಕೊಡಲಾಗುತ್ತಿದೆ. ಸುವರ್ಣ ವಿಧಾನಸೌಧದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಎಲ್ಲ ಖಾಸಗಿ ಸಂಸ್ಥೆಗಳಿಂದ ಅತ್ಯುತ್ತಮ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.ಅಧಿವೇಶನ ಕಾರ್ಯಕ್ಕೆ ವಿವಿಧ ಜಿಲ್ಲೆಗಳಿಂದ ವಿವಿಧ ಮಾದರಿ‌ ವಾಹನಗಳನ್ನು ತರಿಸಲಾಗುತ್ತದೆ. ವಾಹನ ಚಾಲಕರಿಗೆ ಡಿ.ಟಿ.ಐ ಕ್ರೀಡಾ ಹಾಸ್ಟೆಲ್ ಹಾಗೂ ಅಂಬೇಡ್ಕರ್ ಭವನದಲ್ಲಿ‌ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಜೊತೆಗೆ ಖಾಸಗಿ ವಾಹನಗಳನ್ನು ಕೂಡ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.

ಜನಪ್ರತಿನಿಧಿಗಳ ಭೇಟಿಗೆ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆನ್‌ಲೈನ್ ಪಾಸ್ ವ್ಯವಸ್ಥೆ ಮಾಡಲಾಗಿದೆ. ಜನಪ್ರತಿನಿಧಿಗಳ ಸಿಬ್ಬಂದಿಗೆ ಪಾಸ್ ನೀಡಲು ಪೋರ್ಟಲ್ ಸೃಷ್ಟಿಸಲಾಗಿದೆ ಎಂದು ತಿಳಿಸಿದರು. ಗಾಂಧೀ‌ ಭಾರತ ಛಾಯಾಚಿತ್ರ ಪ್ರದರ್ಶನ:

1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಛಾಯಾಚಿತ್ರ ಪ್ರದರ್ಶನ ಕೂಡ ಆಯೋಜಿಸಲಾಗಿದೆ. ಶಾಲಾ ಮಕ್ಕಳಿಗೆ ಆಡಿಟೋರಿಯಂನಲ್ಲಿ ಚರ್ಚಾಕೂಟ, ಭಾಷಣ, ಕಿರುಚಿತ್ರ ಪ್ರದರ್ಶನ ಸೇರಿದಂತೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.ಅಲ್ಲದೇ ಬೆಳಗಾವಿ‌ ನಗರದ‌ ಮೂವತ್ತು ವೃತ್ತಗಳಲ್ಲಿ ಡಿ.9ರಿಂದಲೇ ಮೈಸೂರು ದಸರಾ ಮಾದರಿ ದೀಪಾಲಂಕಾರ‌ ಮಾಡಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಶತಮಾನೋತ್ಸವ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿಗಳು ₹24 ಕೋಟಿ ವೆಚ್ಚದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು ಅಲ್ಪಾವಧಿ ಮತ್ತು ದೀರ್ಘಾವಧಿಯ ವಿವಿಧ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.ಸುವರ್ಣ ವಿಧಾನ‌ಸೌಧ ಬಳಿ ಸೈನ್ಸ್ ಪಾರ್ಕ್ ಉದ್ಘಾಟನೆಗೆ ಸಿದ್ಧಗೊಳಿಸಲಾಗಿದ್ದು, ಇದರಲ್ಲಿ ಚಟುವಟಿಕೆ ಆಧಾರಿತ ಕಲಿಕೆಗೆ ಅನುಕೂಲವಾಗುವಂತೆ ವಿಜ್ಞಾನ ಪಾರ್ಕ್‌ ವಿನ್ಯಾಸಗೊಳಿಸಲಾಗಿದೆ. ಪ್ರತಿಭಟನೆಗೆ ಸಿದ್ಧರಾಗಿದ್ದ ವಿವಿಧ ಸಂಘಟನೆಗಳ ಜತೆ ಚರ್ಚಿಸಿ ಅವರ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಕೆಲ ಸಂಘಟನೆಗಳ ಜತೆ ಚರ್ಚಿಸಿ ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲಾಗಿದೆ ಎಂದು‌‌ ತಿಳಿಸಿದರು.ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ಅಧಿವೇಶನದ ಭದ್ರತೆಗಾಗಿ 6000ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ‌ನ್ನು ನಿಯೋಜನೆ‌ ಮಾಡಲಾಗುತ್ತಿದೆ. ಅಧಿವೇಶನ‌ ಭದ್ರತೆಗಾಗಿ ನಿಯೋಜಿತ ಅಧಿಕಾರಿ ಸಿಬ್ಬಂದಿಗೆ ಸೂಕ್ತ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಪ್ರತಿಭಟನೆ ಕುರಿತು 55 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ‌ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.