ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿ ಆವರಣದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಆಳ್ವಾಸ್ ಪ್ರಗತಿ-2023’ ಬೃಹತ್ ಉದ್ಯೋಗ ಮೇಳ ಶುಕ್ರವಾರ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ ವ್ಯಕ್ತಿಯೊಬ್ಬನಿಗೆ ಕೆಲಸ ಕೊಡಿಸುವುದು ಕುಟುಂಬವೊಂದಕ್ಕೆ ಬದುಕು ನೀಡಿದಂತೆ. ಅಂತಹ ಸರ್ಕಾರದ ಕೆಲಸವನ್ನು ಆಳ್ವಾಸ್ ಮಾಡುತ್ತಿದೆ ಎಂದು ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ಲಾಘಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿ ಆವರಣದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಆಳ್ವಾಸ್ ಪ್ರಗತಿ-2023’ ಬೃಹತ್ ಉದ್ಯೋಗ ಮೇಳವನ್ನು ಶುಕ್ರವಾರ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಔದ್ಯೋಗಿಕ ಸರ್ವೆಯನ್ನು ಮಾಡಿಸಿದ್ದರು. ಆ ಸರ್ವೆ ಪ್ರಕಾರ ದೇಶದ ಪ್ರತಿ 10 ಲಕ್ಷ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ, 5 ಲಕ್ಷ ವಿದ್ಯಾರ್ಥಿಗಳು ಉದ್ಯೋಗ ಪಡೆದರೆ, ಉಳಿದ 5 ಲಕ್ಷ ಮಂದಿ ಉದ್ಯೋಗ ಅರಸುತ್ತಾ ಅಲೆಯುತ್ತಾರೆ. ಇಂತಹ ನಿರುದ್ಯೋಗ ಸಮಸ್ಯೆ ಬಗೆಹರಿಸುವ ಸಲುವಾಗಿ ಮೋದಿ ಅವರು ಜಿಲ್ಲೆಗೊಂದು ಉದ್ಯೋಗ ಮೇಳದ ಕಲ್ಪನೆ ತಂದಿದ್ದರು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶದ ಕನಸು ನನಸು ಮಾಡುತ್ತಿದೆ. ಯುವಜನತೆ ತಮ್ಮ ಜೀವನವನ್ನು ದೇಶಕ್ಕೆ ಮೀಸಲು ಇಡಬೇಕು ಎಂಬ ಆಶಯ ಸಾಕಾರಗೊಳಿಸುತ್ತಿದೆ ಎಂದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಉದ್ಯೋಗಕ್ಕಾಗಿ ಅರ್ಹತೆಯ ಜೊತೆ ವ್ಯಕ್ತಿತ್ವವೂ ಮುಖ್ಯ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ, ಜ್ಞಾನದ ಜೊತೆ ಕೌಶಲ ವೃದ್ಧಿ ಪಡಿಸಿದಾಗ ಉದ್ಯೋಗ ಪಡೆಯಲು ಸಾಧ್ಯ ಎಂದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಇದ್ದರು. ಯುಎಇ ಮೂಲದ ಬುರ್ಜಿಲ್ ಹೋಲ್ಡಿಂಗ್ಸ್ನ ಮಾನವ ಸಂಪನ್ಮೂಲದ ಸಮೂಹ ಮುಖ್ಯಸ್ಥ ಡಾ. ಸಂಜಯ್ಕುಮಾರ್, ಅಲೆಂಬಿಕ್ ಫಾರ್ಮಾಸ್ಯುಟಿಕಲ್ಸ್ ಮಾನವ ಸಂಪನ್ಮೂಲದ ಸಹ ಉಪಾಧ್ಯಕ್ಷ ಅರವಿಂದ ತ್ರಿಪಾಠಿ, ಫ್ಯಾಕ್ಟ್ಸೆಟ್ ಸಿಸ್ಟಮ್ ಇಂಡಿಯಾ ಪ್ರೈ. ಲಿ. ಹಾಗೂ ಭಾರತ ಮತ್ತು ಫಿಲಿಫೈನ್ಸ್ ಟಾಲೆಂಟ್ ಅಕ್ವಸಿಷನ್ ಉಪಾಧ್ಯಕ್ಷ ಅನುಪ್ ರಂಜನ್ ಇದ್ದರು. ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು. ಮೊದಲ ದಿನದ ‘ಪ್ರಗತಿ’ ಮೇಳದಲ್ಲಿ...! ಆನ್ಲೈನ್ ನೋಂದಣಿ ಮಾಡಿಸಿದ ಉದ್ಯೋಗಾಕಾಂಕ್ಷಿಗಳು: 9018 ಸ್ಪಾಟ್ ನೋಂದಣಿ ಮಾಡಿಸಿದ ಅಭ್ಯರ್ಥಿಗಳು: 1432 ಉದ್ಯೋಗ ಮೇಳಕ್ಕೆ ಆಗಮಿಸಿದ ಕಂಪನಿಗಳು: 198 ಆಗಮಿಸಿದ ಉದ್ಯೋಗಕಾಂಕ್ಷಿಗಳು: 7986 143 ಕಂಪೆನಿಗಳು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳು 2014 ಸ್ಥಳದಲ್ಲೇ ಉದ್ಯೋಗದ ಆಫರ್ ಪಡೆದವರು: 889
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.