ಸಾರಾಂಶ
ಶಿವಮೊಗ್ಗ: ಭಾರತೀಯ ಸಾಮಾಜಿಕ ವ್ಯವಸ್ಥೆಯ ನಾಡಿಮಿಡಿತವನ್ನು ಅರಿತು, ಮಾನವೀಯತೆಯ ಔಷಧಿಯನ್ನು ನೀಡಿದ ಸಾಮಾಜಿಕ ವೈದ್ಯ ಡಾ. ಬಿ.ಆರ್. ಅಂಬೇಡ್ಕರ್ ಅವರದು ಅನುಭವ ರೂಪಿತ ವ್ಯಕ್ತಿತ್ವ ಎಂದು ಸಾಹಿತಿ ಡಾ.ಅರ್ಜುನ ಗೋಳಸಂಗಿ ಅಭಿಪ್ರಾಯಪಟ್ಟರು.ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಬಸವ ಸಭಾಭವನದಲ್ಲಿ ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಬುಧವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ `ಡಾ.ಬಿ.ಆರ್.ಅಂಬೇಡ್ಕರ್ ವ್ಯಕ್ತಿತ್ವ'''''''' ಕುರಿತು ಅವರು ಮಾತನಾಡಿದರು.ಅಂಬೇಡ್ಕರ್ ಅವರು ಸಾವಿರಾರು ಸಂಕಟಗಳನ್ನು ಎದುರಿಸಿದರೂ ಎಂದೂ ಸಹನೆ ಮೀರದೆ, ಸಾಧನೆಯ ಹಾದಿಯಲ್ಲಿ ಸಾಗಿದವರು. ಅವರು ಭಾರತೀಯ ಸಾಮಾಜಿಕ ಸ್ಥರ ವಿನ್ಯಾಸದ ಕೂಪದಲ್ಲಿ ನರಳಿ ಅರಳಿದ್ದು ಒಂದು ರೀತಿ ವಿಸ್ಮಯವೇ ಸರಿ ಎಂದು ಬಣ್ಣಿಸಿದ ಅವರು, ದಾರಿತಪ್ಪಿಸುತ್ತಿರುವ ಮತ್ತು ದಾರಿತಪ್ಪಿದವರಿಗೆ ದಾರಿ ತೋರಿಸಿದ ಡಾ. ಬಿ.ಆರ್.ಅಂಬೇಡ್ಕರ್ ಅವರು ಅಕ್ಷರ, ಅರಿವು, ಆಚಾರಗಳನ್ನು ಪರಿಶುದ್ಧತೆಯಿಂದ ಸಂಪಾದಿಸಿಕೊಳ್ಳಲು ಪ್ರೇರಕರಾದವರು. ಇಡೀ ಜಗತ್ತೇ ಅಚ್ಚರಿ ಪಡುವಂತಹ ಬೌದ್ಧಿಕ ಶಕ್ತಿಯನ್ನು ಅಂಬೇಡ್ಕರ್ ಅವರು ಸಂಪಾದಿಸಿದವರು ಎಂದು ತಿಳಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ.ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆಯೆಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರ್ ಅವರು ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್, ಹಣಕಾಸು ಅಧಿಕಾರಿ ಜಿ.ಬಂಗಾರಪ್ಪ, ಲೆಕ್ಕಪರಿಶೋಧನಾ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್.ಓಂಕಾರಪ್ಪ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಮಾತನಾಡಿದರು.
ಕಲಾ ನಿಕಾಯದ ಡೀನರಾದ ಪ್ರೊ.ಗುರುಲಿಂಗಯ್ಯ, ಡಾ.ಶಿವಾನಂದ ಕೆಳಗಿನಮನಿ, ವಿವಿಯ ವಿವಿಧ ವಿಭಾಗಗಳ ಸಂಶೋಧನಾರ್ಥಿಗಳು ಹಾಜರಿದ್ದರು.- - - -6ಎಸ್ಎಂಜಿಕೆಪಿ01:
ಉಪನ್ಯಾಸ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಅರ್ಜುನ ಗೋಳಸಂಗಿ ಮಾತನಾಡಿದರು.