ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಡಾ. ಅಂಶುಮಂತ್

| Published : Dec 07 2024, 12:31 AM IST

ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಡಾ. ಅಂಶುಮಂತ್
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ತ್ವ, ಸಿದ್ಧಾಂತ, ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದರು.

- ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನಾಚರಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ತ್ವ, ಸಿದ್ಧಾಂತ, ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆ ಯಲ್ಲಿ ಮಾತನಾಡಿ, ದೇಶಕ್ಕೆ ಎಲ್ಲರೂ ಒಪ್ಪುವಂತಹ ಶ್ರೇಷ್ಠವಾದ ಸರ್ವ ಧರ್ಮಗಳಿಗೆ ಅನ್ವಯವಾಗುವಂತಹ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿದ್ದಾರೆ. ಸಂವಿಧಾನವನ್ನು ದ್ವೇಷಿಸುವವರು ಇಂದು ಅವರನ್ನು ಆರಾಧಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮಾತ್ರ ಸಂವಿಧಾನದಡಿ ರಾಜಕಾರಣ ಮಾಡುತ್ತಿದೆ ಎಂದರು.

ದೇಶದಲ್ಲಿ ಸಾಮಾನ್ಯ ಜನರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ದಲಿತರು ಸಮನಾಗಿ ಅಧಿಕಾರ ಹಿಡಿಯಲು ಸಂವಿಧಾನ ಕಾರಣ. ಅವರ ತ್ಯಾಗ ಬಲಿದಾನದಿಂದ ಇಂದು ನಾವು ಸ್ವತಂತ್ರವಾಗಿ ಸಮಾಜದಲ್ಲಿ ಬದುಕಲು ಸಹಕಾರಿಯಾಗಿದೆ. ನಮ್ಮ ದೇಶದ ಸಂವಿಧಾನವನ್ನು ಇತರೆ ದೇಶಗಳು ಪಾಲನೆ ಮಾಡುವುದನ್ನು ಕಾಣುತ್ತಿದ್ದೇವೆ ಎಂದು ಹೇಳಿದರು.

ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ದೇಶದ ಇಂದಿನ ಪರಿಸ್ಥಿತಿಯಲ್ಲಿ ಅಂಬೇಡ್ಕರ್ ವಿಚಾರಧಾರೆಯನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು. ಅವರು ಸಕಲ ಅಧಿಕಾರ ಕೊಟ್ಟಿದ್ದಾರೆ, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.ಅಂಬೇಡ್ಕರ್ ಹಾಕಿಕೊಟ್ಟಿರುವ ದಾರಿಯಲ್ಲಿ ಪ್ರತಿಯೊಬ್ಬರೂ ಸಾಗಬೇಕಾಗಿದೆ. ಸಮಾಜದಲ್ಲಿನ ಬದುಕು ಮತ್ತು ಹೋರಾಟ ಅವರಿಂದ ಪ್ರೇರಣೆಯಾಗಿದೆ. ಬಾಬಾ ಸಾಹೇಬರು ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ಚೇತನ ಎಂದು ಹೇಳಿದರು.ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ನಯಾಜ್ ಮಾತನಾಡಿ, ದೇಶದ ಕಾನೂನು ಎಲ್ಲರಿಗೂ ಒಂದೇ. ಅಂಬೇಡ್ಕರ್ ಬರೆದಿರುವ ಸಂವಿಧಾನಕ್ಕೆ ಎಲ್ಲರೂ ತಲೆಬಾಗಿಸಬೇಕು. ಅಂಬೇಡ್ಕರ್ ಜೀವಿತಾವಧಿಯಲ್ಲಿ ಬಹಳ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರ ಫಲವಾಗಿ ಇಂದು ಜನಸಾಮಾನ್ಯರು ಅಧಿಕಾರ ನಡೆಸಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ ಮಾತನಾಡಿ, ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ನವ ಭಾರತ ನಿರ್ಮಾಣಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ. ಸ್ತ್ರೀ ಸಮಾನತೆ, ಮೀಸಲಾತಿ, ಜನಸಾಮಾನ್ಯರು ಪ್ರತಿಯೊಬ್ಬರೂ ಪ್ರಜಾಪ್ರಭುತ್ವದಲ್ಲಿ ಮತ ಚಲಾಯಿಸಬೇಕು ಎಂಬುದು ಅವರ ದೊಡ್ಡ ಕನಸಾಗಿತ್ತು ಎಂದು ಹೇಳಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರೆಲ್ಲರೂ ಸಾಮೂಹಿಕವಾಗಿ ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್ ನಾಯ್ಡು, ಕೆಪಿಸಿಸಿ ಎಸ್.ಸಿ ಘಟಕ ರಾಜ್ಯ ಸಂಚಾಲಕಿ ನೇತ್ರಾವತಿ, ಮಹಿಳಾ ಕಾಂಗ್ರೆಸ್ ಸದಸ್ಯೆ ಕುಸುಮಾ ಭರತ್, ಕಾಂಗ್ರೆಸ್ ಮುಖಂಡರಾದ ಎಚ್.ಎಸ್.ಜಗದೀಶ್, ಡಿ.ಸುರೇಶ್ ಅಂಬೇಡ್ಕರ್‌ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಮುನೀರ್, ಶಾದಬ್ ಆಲಂ ಖಾನ್, ಖಲಂದರ್, ಕೀರ್ತಿ ಶೇಟ್, ನಗರ ಆಶ್ರಯ ಸಮಿತಿ ಸದಸ್ಯ ಪ್ರಸಾದ್ ಅಮಿನ್, ಕೆಡಿಪಿ ಸದಸ್ಯ ಸಂತೋಷ್ ಲಕ್ಯಾ, ಜಿಲ್ಲಾ ಎಸ್ಸಿ.ಎಸ್ಟಿ. ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ರಮೇಶ್, ಮುಖಂಡರಾದ ಶಾಂತಕುಮಾರ್, ನಾಗಭೂಷಣ್, ನಾಗೇಶ್ ಶಬುದ್ದೀನ್ ಉಪಸ್ಥಿತರಿದ್ದರು. 6 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ನಡೆದ ಶುಕ್ರವಾರ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಡಾ.ಅಂಶುಮತ್‌, ಮಂಜೇಗೌಡ, ಮಲ್ಲೇಶಸ್ವಾಮಿ, ತನೋಜ್‌ ಕುಮಾರ್‌, ಜಗದೀಶ್‌, ಶಾದಬ್‌ ಆಲಂ ಖಾನ್‌, ಕುಸುಮಾ ಭರತ್‌ ಇದ್ದರು.