ಸರ್ವರೂ ಸಮಾನರೆಂಬ ಅಂಬೇಡ್ಕರ್‌ ತತ್ವ ಪಾಲಿಸಿ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್

| Published : Apr 15 2024, 01:20 AM IST

ಸರ್ವರೂ ಸಮಾನರೆಂಬ ಅಂಬೇಡ್ಕರ್‌ ತತ್ವ ಪಾಲಿಸಿ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
Share this Article
  • FB
  • TW
  • Linkdin
  • Email

ಸಾರಾಂಶ

ದೇಶವೇ ಹೆಮ್ಮೆ ಪಡುವಂತೆ ಎತ್ತರಕ್ಕೆ ಬೆಳೆದವರು ಅಂಬೇಡ್ಕರ್. ಇವರು ನೀಡಿರುವ ಸಂವಿಧಾನದಿಂದಲೇ ದೇಶವು ಇಂದಿಗೂ ಸುಭಿಕ್ಷ, ನ್ಯಾಯಯುತವಾಗಿ ಸಾಗುತ್ತಿದೆ

ಕನ್ನಡಪ್ರಭ ವಾರ್ತೆ ತುಮಕೂರುಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ದೃಷ್ಟಿಯಲ್ಲಿ ಸಮಾನರು. ಎಲ್ಲರನ್ನೂ ಸಮಾನತೆಯಿಂದ ಕಾಣಬೇಕೆಂಬ ಬಾಬಾ ಸಾಹೇಬರ ಸಮಾನತೆಯ ಸಿದ್ಧಾಂತವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಭಿಪ್ರಾಯ ಪಟ್ಟರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ 133ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸತಿ ಸಹಗಮನ ಪದ್ಧತಿ, ಬಾಲ್ಯ ವಿವಾಹ, ದೇವದಾಸಿ ಪದ್ಧತಿಗಳ ವಿರುದ್ಧ ಹೋರಾಡಿ ಮಹಿಳೆಯರಿಗೆ ಆತ್ಮ ಗೌರವವನ್ನು ತಂದು ಕೊಟ್ಟು ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಕ್ತವಾಗಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನಾನು ಇಂದು ಒಬ್ಬ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂದಿನ ಬಾಬಾ ಸಾಹೇಬರ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೆ ಸಂತಸ ಹಾಗೂ ಹೆಮ್ಮೆ ಉಂಟು ಮಾಡಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಮಾತನಾಡಿ, ಭಾರತಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆ ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ಶತಮಾನಗಳ ಕಾಲ ಶಾಶ್ವತವಾಗಿ ಉಳಿಯುವಂತ ಸಂವಿಧಾನ ನಮ್ಮದಾಗಿದೆ. ಪ್ರತಿಯೊಬ್ಬರೂ ಅಂಬೇಡ್ಕರ್ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬಡತನದಲ್ಲಿ ಹುಟ್ಟಿ ಪ್ರಪಂಚವೇ ತಿರುಗಿ ನೋಡುವಂತೆ, ದೇಶವೇ ಹೆಮ್ಮೆ ಪಡುವಂತೆ ಎತ್ತರಕ್ಕೆ ಬೆಳೆದವರು ಅಂಬೇಡ್ಕರ್. ಇವರು ನೀಡಿರುವ ಸಂವಿಧಾನದಿಂದಲೇ ದೇಶವು ಇಂದಿಗೂ ಸುಭಿಕ್ಷ, ನ್ಯಾಯಯುತವಾಗಿ ಸಾಗುತ್ತಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಭಾರತ ಸಂವಿಧಾನ ರಚನೆಯಲ್ಲಿ ಡಾ.ಅಂಬೇಡ್ಕರ್ ಅವರ ಪಾತ್ರ ಬಹಳ ಮುಖ್ಯವಾಗಿದ್ದು, ಸಂವಿಧಾನದಲ್ಲಿರುವ ತತ್ವಗಳನ್ನು ನಮ್ಮ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಸೀಲ್ದಾರ್ ಎಂ.ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಬೆಂಗಳೂರು ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಚ್. ನಾರಾ ಯಣಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ದಲಿತ ಸಂಘದ ಹೋರಾಟಗಾರರು, ಪ್ರಗತಿಪರ ಹೋರಾಟಗಾರರು, ಸಾರ್ವಜನಿಕರು ಸೇರಿ ಮತ್ತಿತರರು ಹಾಜರಿದ್ದರು.