ಅಂಬಿಗರ ಚೌಡಯ್ಯನವರು 12ನೇ ಶತಮಾನದಲ್ಲಿನ ಶಿವಶರಣರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದ್ದಾಗಿತ್ತು.
ಗದಗ: ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂಬಿಗರ ಚೌಡಯ್ಯನವರು 12ನೇ ಶತಮಾನದಲ್ಲಿನ ಶಿವಶರಣರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದ್ದಾಗಿತ್ತು. ಬಸವಣ್ಣನವರಿಂದ ಲಿಂಗದೀಕ್ಷೆಯನ್ನು ಪಡೆದರು. ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಇವರ ವಚನಗಳ ಅಂಕಿತವಾಗಿದೆ. ಅಂಬಿಗರ ಚೌಡಯ್ಯನವರು ನೇರವಾದ ನುಡಿ ದಿಟ್ಟವಾದ ನಡೆಗೆ ಹೆಸರಾಗಿದ್ದರು. ನಿಷ್ಠುರವಾದಿಗಳಾಗಿದ್ದು, ಸಮಾಜದಲ್ಲಿನ ಮೂಢನಂಬಿಕೆ, ಕಂದಾಚಾರ ಹೊಡೆದೊಡಿಸಿ ಸಮಾಜ ಸುಧಾರಣೆಗೆ ಶ್ರಮಿಸಿದವರು. ನಾವು ವೈಚಾರಿಕವಾಗಿ ಬದುಕಲು ಕಲಿಯಬೇಕು. ಸ್ವಾಭಿಮಾನದಿಂದ ಹಾಗೂ ಆತ್ಮವಿಶ್ವಾಸದಿಂದ ಬದುಕಬೇಕು. ಅಂಬಿಗರ ಚೌಡಯ್ಯನವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಅಂಬಿಗರ ಚೌಡಯ್ಯನವರು ನೇರ ನಿಷ್ಠುರವಾದಿಗಳಾಗಿದ್ದರು. ಡೋಣಿ ನಡೆಸುವ ಕಾಯಕ ಇವರದಾಗಿತ್ತು. ಕಾಯಕನಿಷ್ಠೆಗೆ ಹೆಸರಾದ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಿ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದರು. ಸಮಾಜ ಸುಧಾರಣೆಯಾಗಬೇಕಾದರೆ ಶಿಕ್ಷಣವೊಂದೇ ಮಾರ್ಗವಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದರು.ಈ ವೇಳೆ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು.
ಉಪನ್ಯಾಸಕ ಶಿವಾನಂದ ಗೋಗೇರಿ ಅವರು ಅಂಬಿಗರ ಚೌಡಯ್ಯನವರ ಕುರಿತು ಉಪನ್ಯಾಸ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಡಿವೈಎಸ್ಪಿ ವಿದ್ಯಾಧರ ನಾಯಕ, ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾಧ್ಯಕ್ಷ ಜೆ.ಬಿ. ಗಾರವಾಡ, ಉಪಾಧ್ಯಕ್ಷ ಸಿ.ಪಿ. ಬಾರಕೇರ, ತಾಲೂಕಾಧ್ಯಕ್ಷ ಡಾ. ಗಣೇಶ ಸುಲ್ತಾನಪುರ, ಪ್ರಮುಖರಾದ ಯಶೋದಾ ಜಾಲಗಾರ, ಶಕುಂತಲಾ ಜಕನೂರ, ಪ್ರೇಮಾ ಮನಗೂಳಿ, ಕೀರ್ತಿ ಜಕನೂರ, ಪ್ರಕಾಶ ಪೂಜಾರ, ಕೆ.ಎನ್. ಸುಣಗಾರ, ಮಂಜುನಾಥ ಸುಣಗಾರ, ಸುಭಾಸ ಕದಡಿ, ಮಾಲತೇಶ ಬಾರ್ಕಿ, ಮಾರುತಿ ಕೌದಿ, ಚಂದ್ರಶೇಖರ ಅಂಬಿಗೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಪ್ರಮುಖರು, ಗಣ್ಯರು, ಹಿರಿಯರು ಇದ್ದರು. ಬಾಹುಬಲಿ ಜೈನರ ನಿರೂಪಿಸಿ, ವಂದಿಸಿದರು.