ಅಂಬಿಕಾ ಶಿಕ್ಷಣ ಸಂಸ್ಥೆಗೆ ರಜತ ಸಂಭ್ರಮ: ವಿವಿಧ ಸಾಮಾಜಿಕ ಯೋಜನೆಗಳ ರೂಪುರೇಷೆ

| Published : Oct 07 2025, 01:03 AM IST

ಅಂಬಿಕಾ ಶಿಕ್ಷಣ ಸಂಸ್ಥೆಗೆ ರಜತ ಸಂಭ್ರಮ: ವಿವಿಧ ಸಾಮಾಜಿಕ ಯೋಜನೆಗಳ ರೂಪುರೇಷೆ
Share this Article
  • FB
  • TW
  • Linkdin
  • Email

ಸಾರಾಂಶ

ಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಸಂಸ್ಥೆಗಳ ವತಿಯಿಂದ ಶನಿವಾರ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಹೆತ್ತವರ ಹಾಗೂ ಹಿರಿಯ ವಿದ್ಯಾರ್ಥಿಗಳ ‘ಪುನರ್ಮಿಲನ’ ಸಭೆ ಸಂಪನ್ನಗೊಂಡಿತು.

ಪುತ್ತೂರು: ಅಂಬಿಕಾ ಶಿಕ್ಷಣ ಸಂಸ್ಥೆ ಆರಂಭಗೊಂಡು ೨೫ ವರ್ಷಗಳು ಪೂರ್ಣಗೊಂಡು ರಜತಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ರಕ್ತದಾನ ಶಿಬಿರ, ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವಂತಹ ಸಾಮಾಜಿಕ ಕಾರ್ಯಗಳನ್ನು ನಡೆಸಲು ಯೋಜನೆ ರೂಪಿಸಲಾಗುತ್ತಿದೆ. ಹಿರಿಯ ವಿದ್ಯಾರ್ಥಿಗಳು ಸದಾ ಒಬ್ಬರಿಗೊಬ್ಬರು ಸಹಕಾರ ಮನೋಭಾವನೆ ನೀಡುವ ಉದ್ದೇಶದಿಂದ ಸಂಘಟನಾತ್ಮಕವಾಗಿ ಹೆಚ್ಚು ಸಕ್ರಿಯಗೊಳ್ಳಬೇಕಿದೆ ಎಂದು ಅಂಬಿಕಾ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಅಜಯ್ ರಾಮ್ ಹೇಳಿದ್ದಾರೆ.

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಸಂಸ್ಥೆಗಳ ವತಿಯಿಂದ ಶನಿವಾರ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಹೆತ್ತವರ ಹಾಗೂ ಹಿರಿಯ ವಿದ್ಯಾರ್ಥಿಗಳ ‘ಪುನರ್ಮಿಲನ’ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಂಬಿಕಾ ಸಂಸ್ಥೆ ರಾಷ್ಟ ನಿರ್ಮಾಣ ಹಾಗೂ ಭಾರತದ ಸಾಂಸ್ಕೃತಿಯನ್ನು ಪಸರಿಸುವ ಕೊಂಡಿಯಂತೆ ಕಾರ್ಯ ನಿರ್ವಹಿಸುತ್ತಿದ್ದು, ರಜತಮಹೋತ್ಸವ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಇದನ್ನು ಸಾಕ್ಷೀಕರಿಸಲು ಸರ್ವ ಪ್ರಯತ್ನ ನಡೆಸಬೇಕು. ಡಿಸೆಂಬರ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಪೂರ್ಣ ಮನಸ್ಸಿನಿಂದ ಸಿದ್ಧತೆ ನಡೆಸಿ ಪಾಲ್ಗೊಳ್ಳಬೇಕು ಎಂದರು. ಹಲವು ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಉದ್ಯೋಗಿಗಳಾಗಿರುವುದರಿಂದ ಅವರ ಅನುಕೂಲಕ್ಕಾಗಿ ಅ.೧೧ ರಂದು ಬೆಂಗಳೂರಿನಲ್ಲಿಯೂ ಹಿರಿಯ ವಿದ್ಯಾರ್ಥಿಗಳ ಸಭೆ ಆಯೋಜಿಸಲಾಗಿದೆ. ರಾಜರಾಜೇಶ್ವರಿ ನಗರದ ದೇಸೀ ಮಸಾಲ ಕಟ್ಟಡದಲ್ಲಿ ಹಿರಿಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ನಡೆಯಲಿದ್ದು, ಅಲ್ಲಿಗೆ ಅಂಬಿಕಾ ಕೋಚಿಂಗ್, ಪಿ.ಯು., ಪದವಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳು ಆಗಮಿಸಿ ರಜತ ಮಹೋತ್ಸವ ವಿಭಿನ್ನವಾಗಿ ನಡೆಯುವ ನಿಟ್ಟಿನಲ್ಲಿ ತಮ್ಮ ಸಲಹೆ, ಸೂಚನೆ ನೀಡಬೇಕು ಎಂದರು. ಅಂಬಿಕಾ ಕೋಚಿಂಗ್ ಸೆಂಟರ್ ಪ್ರಥಮ ವರ್ಷದ ವಿದ್ಯಾರ್ಥಿನಿ ನಂದಿನಿ ಆಚಾರ್ಯ ಮಾತನಾಡಿ, ರಜತಮಹೋತ್ಸವದ ಯಶಸ್ಸಿಗೆ ಸರ್ವ ರೀತಿಯ ಸಹಕಾರ ನೀಡಲು ಸಿದ್ಧ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸಂಸ್ಥೆ ಆರಂಭಗೊಂಡು ೨೫ ವರ್ಷಗಳು ಪೂರ್ಣಗೊಂಡ ಹಿನ್ನೆಲೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಭಾಗವಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯ, ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳು ಹಾಗೂ ಈ ಹಿಂದೆ ಅಂಬಿಕಾ ವಿದ್ಯಾಲಯ ಕೋಚಿಂಗ್ ಸೆಂಟರ್‌ನಲ್ಲಿ ಅಧ್ಯಯನ ನಡೆಸಿದ್ದ ವಿದ್ಯಾರ್ಥಿಗಳ ಮಹಾ ಸಮ್ಮಿಲನ ಇದಾಗಲಿದೆ. ರಜತಮಹೋತ್ಸವ ಆಚರಣೆ ಮಾತ್ರವಲ್ಲದೆ ಸಂಸ್ಥೆ ಹಾಗೂ ವಿದ್ಯಾರ್ಥಿಗಳ ನಂಟನ್ನು ಬಲಪಡಿಸುವ ಪ್ರಯತ್ನ. ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಬೆಳೆಯಬೇಕು, ದೇಶಕ್ಕೆ ಕೊಡುಗೆ ನೀಡಬೇಕು ಎನ್ನುವ ಉದ್ದೇಶದಿಂದ ಅವರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸಗಳೂ ನಡೆಯಲಿದೆ ಎಂದರು.

ಹಿರಿಯವಿದ್ಯಾರ್ಥಿ ಸ್ಟರೂಪ್ ಮಾತನಾಡಿದರು. ಭಾರತೀಯ ಸೇನೆಯಲ್ಲಿ ಉದ್ಯೋಗ ಪಡೆದ ಅನುಜ್ಞಾ ಪಿ.ವಿ. ಅವರನ್ನು ಗೌರವಿಸಲಾಯಿತು. ವೈದ್ಯಕೀಯ ಸೇವೆ, ಎಂಜಿನಿಯರಿಂಗ್, ವಕೀಲರು, ಉದ್ಯಮಿಗಳು, ಸ್ಟಾರ್ಟಪ್‌ ಸಂಸ್ಥೆ ಸೇರಿದಂತೆ ವಿವಿಧೆಡೆ ಕೆಲಸ ನಿರ್ವಹಿಸುವ ಹಾಗೂ ವಿವಿಧೆಡೆ ವಿದ್ಯಾರ್ಜನೆ ಮಾಡುತ್ತಿರುವ 100ಕ್ಕೂ ಹೆಚ್ಚು ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಸಲಹೆ ನೀಡಿದರು. ಆಗಮಿಸಿದ ಎಲ್ಲಾ ಹಿರಿಯ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ಹಿರಿಯ ವಿದ್ಯಾರ್ಥಿಗಳಾದ ಅನ್ಮಯ್ ಭಟ್ ಹಾಗೂ ಅಶ್ವಿನಿ ಕ್ವಿಝ್ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಖಜಾಂಚಿ ರಾಜಶ್ರೀ ಎಸ್. ನಟ್ಟೋಜ, ಬಪ್ಪಾಲಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್. ಇದ್ದರು.

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಉಪನ್ಯಾಸಕಿ ಸುಕನ್ಯಾ ಎಂ. ಎಸ್. ಪ್ರಾರ್ಥಿಸಿದರು. ಉಪನ್ಯಾಸಕಿ ಅಶ್ವಿನಿ ಯು. ನಾಯಕ್ ನಿರೂಪಿಸಿ, ವಂದಿಸಿದರು.