ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶ

| Published : Dec 24 2024, 12:49 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಹಾಗೂ ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಹಾಗೂ ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ರಿನ್ಯೂ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯವರ ಸಹಯೋಗದಲ್ಲಿ ಆರಂಭಿಸಲಾದ ಗೋಳಗುಮ್ಮಟ ಸ್ಮಾರಕಕ್ಕೆ ಸೌರಶಕ್ತಿ ವಿದ್ಯತ್ ದೀಪಾಲಂಕರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಗರ- ಜಿಲ್ಲೆ ಸೌಂದರ್ಯಿಕರಣ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗಿದ್ದು, ಸಾರ್ವಜನಿಕರು ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು. ಐತಿಹಾಸಿಕ ಸ್ಮಾರಕಗಳಿರುವ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿಸುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಐತಿಹಾಸಿಕ ಸ್ಮಾರಕಗಳಾದ ಗೋಳಗುಮ್ಮಟ ಹಾಗೂ ಇಬ್ರಾಹಿಂ ರೋಜಾ ಸ್ಮಾರಕಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಗೊಳಿಸುವುದು ಬಹುದಿನಗಳ ಕನಸಾಗಿದೆ. ಬಾವಡಿಗಳ ಒತ್ತುವರಿ ತೆರವುಗೊಳಿಸಲು, ಸಂರಕ್ಷಣೆ ಸ್ವಚ್ಛತೆಗೆ ಭಾರತೀಯ ಸರ್ವೇಕ್ಷಣಾ ಇಲಾಖೆ ಆದ್ಯತೆ ನೀಡಬೇಕು. ಇದರೊಂದಿಗೆ ಐತಿಹಾಸಿಕ ಸ್ಮಾರಕಗಳ ರಕ್ಷಣೆಗೂ ಒತ್ತು ನೀಡಲಾಗುತ್ತಿದೆ. ಬಾವಡಿಗಳ ನೀರನ್ನು ಇನ್ನಿತರ ಬಳಕೆ ಮಾಡುವ ನಿಟ್ಟಿನಲ್ಲಿ ಐತಿಹಾಸಿಕ ಬಾವಡಿಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ನಗರದ ಪ್ರಮುಖ ಸ್ಥಳವಾದ ಗಗನ್ ಮಹಲ್‌ನ ಕಂದಕ ಸ್ವಚ್ಛಗೊಳಿಸಿ, ವಾತಾವರಣ ಉನ್ನತೀಕರಣಕ್ಕೆ ಸರ್ಕಾರ ₹ 1.5 ಕೋಟಿ ಬಿಡುಗಡೆ ಮಾಡಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ₹ 50 ಲಕ್ಷ ವೆಚ್ಚದಲ್ಲಿ ಆನಂದ ಮಹಲ್ ಉದ್ಯಾನವನ ಸೇರಿ ಇತರೆ ಅಭಿವೃದ್ಧಿ ಕಾಮಗಾರಿಗೆ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ನೀಡಲಾಗಿದೆ. ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ತಾಣಗಳ ಅಭಿವೃದ್ದಿಪಡಿಸಲಾಗುತ್ತಿದೆ. ಆಲಮಟ್ಟಿಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿವಿಧ ಚಟುವಟಿಕೆಗಳನ್ನು ನೀರಾವರಿ ಇಲಾಖೆ ಮೂಲಕ ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು.

ನಗರದಲ್ಲಿ ಐತಿಹಾಸಿಕ ತಾಜ್‌ಬಾವಡಿ ₹ 8 ಕೋಟಿ ವೆಚ್ಚದಲ್ಲಿ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ ಸಿಎಸ್‌ಆರ್‌ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಚಿವರ ಪ್ರಯತ್ನದಿಂದ ಕುಮಟಗಿ ಬೇಸಿಗೆ ಅರಮನೆಯನ್ನು ಇನ್ಫೋಸಿಸ್ ಫೌಂಡೇಶನ್ ಸಿಎಸ್‌ಆರ್‌ ಅನುದಾನದಲ್ಲಿ ₹ 2 ಕೋಟಿ ವೆಚ್ಚದಲ್ಲಿ ಪುನಶ್ಚೇತನ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮೇಯರ್ ಮಹೇಜಬಿನ ಹೊರ್ತಿ, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಉಪ ಮೇಯರ್ ದಿನೇಶ ಹಳ್ಳಿ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯಾ ಬಾಪಟ್, ರಿನ್ಯೂ ಎನರ್ಜಿ ಪ್ರೈ.ಲಿ. ರಾಜ್ಯ ಮುಖಸ್ಥ ಮಧುಸೂಧನ, ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್

ವಿಶ್ವದ 2ನೇ ದೊಡ್ಡ ಗೋಪುರ

400 ವರ್ಷಗಳ ಐತಿಹಾಸಿಕ ಗೋಳಗುಮ್ಮಟಕ್ಕೆ ರಿನಿವೆಬಲ್ ಎನರ್ಜಿ ಸಿಎಸ್‌ಆರ್ ಅನುದಾನದಡಿ ದೀಪಾಲಂಕಾರ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ವಿಜಯಪುರ ನಗರ-ಜಿಲ್ಲೆಯ ಆಕರ್ಷಣೀಯ ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಪ್ರವಾಸೋದ್ಯಮದಿಂದ ಜಿಲ್ಲೆಯ ವ್ಯಾಪಾರ-ವಹಿವಾಟಿಗೆ ಉತ್ತೇಜನ ದೊರೆತು, ಉದ್ಯೋಗ ಸೃಷ್ಟಿಯೊಂದಿಗೆ ಆರ್ಥಿಕ ಸುಧಾರಣೆಯಾಗಲಿದೆ. ವ್ಯಾಟಿಕನ್ ಸಿಟಿಯಲ್ಲಿರುವ ಸೇಂಟ್ ಪೀಟರ‍್ಸ ಚರ್ಚ್ ನಂತರ ವಿಶ್ವದ 2ನೇ ಅತಿ ದೊಡ್ಡ ಗೋಪುರ ಹೊಂದಿರುವ ಗೋಳಗುಮ್ಮಟ ವಿಜಯಪುರದಲ್ಲಿರುವುದು ಅತ್ಯಂತ ಹೆಮ್ಮೆ. ಈ ಐತಿಹಾಸಿಕ ಗೋಳಗುಮ್ಮಟಕ್ಕೆ ರೆನ್ಯೂ ಎನರ್ಜಿ ಪ್ರೈ.ಲಿ ಸಿಎಸ್‌ಆರ್‌ ಅನುದಾನದಲ್ಲಿ ₹ 40 ಲಕ್ಷ ವೆಚ್ಚದಲ್ಲಿ ಸೌರಶಕ್ತಿ ದೀಪಾಲಂಕಾರ ಅಳವಡಿಸಲಾಗಿದೆ ಎಂದು ಎಂ.ಬಿ.ಪಾಟೀಲ ಹೇಳಿದರು.ಕನ್ನಡಪ್ರಭ ವಾರ್ತೆ ವಿಜಯಪುರಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಹಾಗೂ ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.