ಸಾರಾಂಶ
ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ನೋಡಿ ವಿದೇಶಗಳಲ್ಲೂ ಭಾರತೀಯರನ್ನು ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತದೆ. ಕಟ್ಟಡ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಯೋಚಿಸಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆ ರೂಪಿಸಿ ಆಡಳಿತ ನಡೆಸುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಡಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇನ್ನೇನು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ೫೦ ವರ್ಷ ತುಂಬಲಿದೆ. ಈ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಸಮಗ್ರ ಮೂಲಭೂತ ವ್ಯವಸ್ಥೆಗಳೊಂದಿಗೆ ಅಭಿವೃದ್ಧಿ ಕೆಲಸ ಪೂರ್ಣಗೊಳ್ಳಬೇಕಿದೆ. ಇಲ್ಲಿನ ರೈಲು ನಿಲ್ದಾಣದ ಬೇಡಿಕೆಗಳು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯ ಅನುದಾನದಲ್ಲಿ ಈಡೇರಲಿದೆ. ಮುಂದೆಯೂ ಇಲ್ಲಿನ ಬೇಡಿಕೆಗಳ ಬಗ್ಗೆ ಸಂಬಂಧಿಸಿದವರಲ್ಲಿ ಮನವಿ ಮಾಡಿ ಪರಿಹಾರ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.ಸುಳ್ಯ ಬಿಜೆಪಿ ಮಂಡಲದ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ವಿಭಾಗಳಲ್ಲೂ ಅಭಿವೃದ್ಧಿ ಮಾಡುವಲ್ಲಿ ಯಶಸ್ವಿಯಾಗಿದೆ. ಇದು ನಮಗೆಲ್ಲ ಹರ್ಷದಾಯಕ ಎಂದರು.ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷೆ ಶಾರದಾ ದಿನೇಶ್ ಮಾತನಾಡಿ, ಈ ಭಾಗದಲ್ಲಿ ಇನ್ನೂ ಹಳಿ ದಾಟಿ ಸಾಗಬೇಕಾದ ರಸ್ತೆಗಳಿಗೆ ಇಂತಹ ಕಡೆಗಳಲ್ಲಿ ಸೇತುವೆ ನಿರ್ಮಿಸಬೇಕಿದೆ. ಇಲ್ಲಿ ನಿಲ್ದಾಣದಲ್ಲಿ ಸ್ವಚ್ಚತೆ, ಪಾರ್ಕಿಂಗ್ಗೆ ಪೂರಕ ವ್ಯವಸ್ಥೆ ಆಗಬೇಕಿದೆ ಎಂದರು.
ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಮಾತನಾಡಿ, ಕಡಬ ಸಮೀಪದ ಕೋಡಿಂಬಾಳ ರೈಲು ನಿಲ್ದಾಣವನ್ನೂ ಅಭಿವೃದ್ಧಿ ಪಡಿಸಿದಲ್ಲಿ ಇಲ್ಲಿನ ದಟ್ಟಣೆ ನಿವಾರಣೆಯಾಗಲಿದೆ. ಅಲ್ಲದೇ ಕಡಬ ಭಾಗದ ಜನತೆಗೂ ಪ್ರಯೋಜನ ಆಗಲಿದೆ ಎಂದರು.ಜಿ.ಪಂ. ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್, ಹರೀಶ್ ಕಂಜಿಪಿಲಿ, ತಾ.ಪಂ. ಮಾಜಿ ಸದಸ್ಯ ಫಝಲ್ ಕೋಡಿಂಬಾಳ, ರೈಲ್ವೇ ಇಲಾಖೆಯ ರಾಘವೇಂದ್ರ, ನೆಟ್ಟಣ ರೈಲು ಬಳಕೆದಾರರ ಸಂಘದ ಅಧ್ಯಕ್ಷ ಕೆ.ಜಿ.ಪ್ರಸಾದ್ ನೆಟ್ಟಣ, ರೋಯಿ ಅಬ್ರಾಹಂ ಮತ್ತಿತರರು ಇದ್ದರು. ರೈಲ್ವೇ ಇಲಾಖೆಯ ಸುರೇಶ್ ನಿರೂಪಿಸಿ, ವಂದಿಸಿದರು. ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಮೋದಿ ಶಂಕುಸ್ಥಾಪನೆ;ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಅಭಿವೃದ್ಧಿ ಗೊಳ್ಳಲಿರುವ ಕಡಬ ತಾಲೂಕಿನ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ, ಬಜಕೆರೆ ರೈಲು ನಿಲ್ದಾಣ ಸಮೀಪ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ದೇಶದ ವಿವಿಧ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. ರೈಲು ನಿಲ್ದಾಣಗಳಲ್ಲಿ ಎಲ್ಇಡಿ ಪರದೆ ಮೂಲಕ ವಿಡಿಯೋ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.