ಅರಸೀಕೆರೆ: ಇತ್ತೀಚಿನ ದಿನಗಳಲ್ಲಿ ಯುವಜನತೆ ಜಂಕ್ ಫುಡ್‌ಗಳತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಪೌಷ್ಟಿಕಾಂಶಯುಕ್ತ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡರೆ ಅನೀಮಿಯಾ ಸೇರಿದಂತೆ ಹಲವು ಕಾಯಿಲೆಗಳನ್ನು ತಡೆಯಬಹುದು ಎಂದು ಆಲೂರಿನ ಹರ್ಷಿತ ಸಂಸ್ಥೆಯ ಕಾರ್ಯಕರ್ತ ಅಭಿಷೇಕ್ ಹೇಳಿದರು.

ತಾಲೂಕಿನ ಜಾಜೂರು ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕ ಹಾಗೂ ಐ.ಕ್ಯೂ.ಎ.ಸಿ. ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಮತ್ತು ಅನೀಮಿಯಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೊಟ್ಟೆ, ಬೇಳೆಕಾಳುಗಳು, ಹಸಿರು ಸೊಪ್ಪುಗಳು ಹಾಗೂ ವಿಟಮಿನ್‌ ಸಮೃದ್ಧ ಆಹಾರಗಳನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಫಾಸ್ಟ್‌ಫುಡ್‌ಗಳ ಬಳಕೆಯನ್ನು ಕಡಿಮೆ ಮಾಡಿ ಪೌಷ್ಟಿಕ ಆಹಾರದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕ ಡಾ. ಬಿ. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, “ಜಾಗತಿಕ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ದೇಹದ ನೀರಿನ ಪ್ರಮಾಣ ಸಮತೋಲನದಲ್ಲಿರಲು ಸೌತೆಕಾಯಿ, ಕಲ್ಲಂಗಡಿ, ಮಜ್ಜಿಗೆ ಸೇರಿದಂತೆ ತಂಪು ಆಹಾರ ಮತ್ತು ಪಾನೀಯಗಳನ್ನು ಹೆಚ್ಚಾಗಿ ಸೇವಿಸುವುದು ಅಗತ್ಯ,” ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಎ. ಗೀತಾ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಆರೋಗ್ಯ ಜಾಗೃತಿ ಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುನಿಲ್ ಕುಮಾರ್, ಡಾ. ಚಿತ್ರಕಲಾ, ಡಾ. ಶಿವಪ್ರಸಾದ್, ಎಚ್.ಎಂ. ಕುಮಾರ, ಡಾ. ವಸಂತಕುಮಾರಿ, ರಾಜೇಶ್ ಖನ್ನಾ ಸೇರಿದಂತೆ ಬೋಧಕ ವೃಂದ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಹಿಮೋಗ್ಲೋಬಿನ್ ಪರೀಕ್ಷೆ ನಡೆಸಲಾಗಿದ್ದು, ರಕ್ತಹೀನತೆ ಕಂಡುಬಂದವರಿಗೆ ಉಚಿತವಾಗಿ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸಲಾಯಿತು.