ಕನ್ನಡಪ್ರಭ ವಾರ್ತೆ ಹೊಸಕೋಟೆ

ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಧ್ಯೇಯವಾಗಿದ್ದು, ಕಳೆದ ೫೩ ವರ್ಷಗಳಿಂದ ಹೊಸಕೋಟೆಯಲ್ಲಿ ನಿರಂತರವಾಗಿ ಜನಪರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ ಎಂದು ಲಯನ್ಸ್ ಮಾಜಿ ರಾಜ್ಯಪಾಲ ಸಿ.ಎಂ.ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿ ನಡೆದ ಲಯನ್ಸ್ ಕ್ಲಬ್ ಹೊಸಕೋಟೆ 2026- 27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಿ ಮಾತನಾಡಿದರು.

ವಿಶ್ವದ ಅತಿದೊಡ್ಡ ಸೇವಾ ಸಂಸ್ಥೆ ಲಯನ್ಸ್ ಇಂಟರ್‌ನ್ಯಾಷನಲ್ 108 ವರ್ಷಗಳ ಇತಿಹಾಸ ಹೊಂದಿದ್ದು, ದೃಷ್ಟಿ ಸಂರಕ್ಷಣೆ, ಮಧುಮೇಹ ನಿಯಂತ್ರಣ, ಪರಿಸರ ಸಂರಕ್ಷಣೆ, ಹಸಿವು ನಿವಾರಣೆ, ಬಾಲ್ಯ ಕ್ಯಾನ್ಸರ್, ಮಾನವೀಯ ಸೇವೆ, ಯುವಜನ ಅಭಿವೃದ್ಧಿ, ಪ್ರಕೃತಿ ವಿಕೋಪ ಪರಿಹಾರ ಹಾಗೂ ಮಾನಸಿಕ ಆರೋಗ್ಯ ಸೇರಿ ಹಲವು ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದೆ. ಲಯನ್ಸ್ ಕ್ಲಬ್ ಹೊಸಕೋಟೆ ಹೊಸ ತಲೆಮಾರಿನ ನಾಯಕತ್ವವನ್ನು ಬೆಳೆಸುವ ಉದ್ದೇಶದಿಂದ 10 ನೂತನ ಸದಸ್ಯರನ್ನು ಸೇರ್ಪಡೆಗೊಳಿಸಿರುವುದು ಶ್ಲಾಘನೀಯ. ಹೊಸ ಸದಸ್ಯರ ಹೊಸ ಆಲೋಚನೆಗಳು ಸಮಾಜಸೇವೆಗೆ ಮತ್ತಷ್ಟು ಬಲ ನೀಡಲಿವೆ ಎಂದರು.

ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಅನಿಲ್ ಕುಮಾರ್ ಮಾತನಾಡಿ, ಕಳೆದ ಅವಧಿಯಲ್ಲಿ 12 ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ಆಯೋಜಿಸಿ, ಮೂರು ಸಾವಿರಕ್ಕೂ ಹೆಚ್ಚು ಮಂದಿಗೆ ತಪಾಸಣೆ ನಡೆಸಲಾಗಿದ್ದು, 150ಕ್ಕೂ ಹೆಚ್ಚು ಜನರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ, ವಿದ್ಯಾರ್ಥಿವೇತನ, ಅಂಗನವಾಡಿ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ, ಬಡವರಿಗೆ ಆಹಾರ ನೆರವು, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಚಿಕಿತ್ಸೆಗಾಗಿ ಆರ್ಥಿಕ ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.


ಇದೇ ವೇಳೆ ಆರಂಭಿಸಿರುವ ಶಾಶ್ವತ ಸೇವಾ ಯೋಜನೆಗಳನ್ನು ಈ ವರ್ಷವೂ ಮುಂದುವರಿಸಿ, ಇನ್ನಷ್ಟು ಜನರಿಗೆ ಸೇವೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಲಯನ್ಸ್ ಪಿಆರ್‌ಒ ಜಿ.ಎಸ್ ಮಂಜುನಾಥ್ ಮಾತನಾಡಿ, ಕಳೆದ ಸಾಲಿನ ಅಧ್ಯಕ್ಷ ಅನಿಲ್ ಕುಮಾರ್ 2025- 26ನೇ ಸಾಲಿನಲ್ಲಿ ಕ್ಲಬ್ ಸದಸ್ಯರು ಹಾಗೂ ಟ್ರಸ್ಟ್ ಸಹಕಾರದಿಂದ ₹1 ಕೋಟಿಗೂ ಅಧಿಕ ಮೌಲ್ಯದ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದು ೨ನೇ ಬಾರಿಗೆ ಅಧ್ಯಕ್ಷರಾಗಲು ಸಾಧ್ಯವಾಗಿದೆ. ಹೊಸಕೋಟೆಯಲ್ಲಿ ಲಯನ್ಸ್ ೫೩ ವರ್ಷಗಳಿಂದ ಸಮಾಜ ಮುಖಿ ಕಾರ್ಯ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ರಾಜ್ಯಪಾಲ ಎಚ್‌.ಕೆ ಗಿರಿಧರ್, ಪ್ರಾಂತೀಯ ಅಧ್ಯಕ್ಷ ರಮೇಶ್, ಪಿಆರ್‌ಓ ಜಿ.ಎಸ್ ಮಂಜುನಾಥ್, ಲಯನ್ಸ್ ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸಯ್ಯ, ಅಧ್ಯಕ್ಷ ಎಚ್.ಎಸ್.ಅನಿಲ್ ಕುಮಾರ್ ಸೇರಿ ಲಯನ್ಸ್ ಪಧಾಧಿಕಾರಿಗಳು ಹಾಜರಿದ್ದರು.