ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾಮಗಾರಿ ಡಿಸೆಂಬರ್‌ಗೆ ಪೂರ್ಣ

| Published : Jun 17 2025, 05:15 AM IST

ಸಾರಾಂಶ

ಅಂಜನಾದ್ರಿ ಅಭಿವೃದ್ಧಿಗೆ 2022-23ರಲ್ಲಿ ಸರ್ಕಾರ ₹ 100 ಕೋಟಿ ಅನುದಾನ ಮೀಸಲಿಟ್ಟಿದ್ದು ಬೆಟ್ಟದ ಕೆಳಗೆ ವಿವಿಧ ಕಾಮಗಾರಿ ಆರಂಭಿಸಲಾಗಿದೆ. ಡಿ. 15ರ ವೇಳೆ ಪ್ರದಕ್ಷಿಣೆ ಪಥ, ಸಮುಚ್ಚಯ, ವಸತಿ ಗೃಹ, ಶೌಚಾಲಯ, ಸ್ನಾನಗೃಹ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಳ್ಳಲಿದ್ದು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಗಂಗಾವತಿ:

ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರದೇಶದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಡಿ. 15ರೊಳಗೆ ಪೂರ್ಣಗೊಳ್ಳಲಿವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ಅಂಜನಾದ್ರಿ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಅಂಜನಾದ್ರಿ ಅಭಿವೃದ್ಧಿ ಕುರಿತು ಪಿಪಿಟಿ ಪ್ರಾತ್ಯಕ್ಷಿಕೆ ಸಭೆಯಲ್ಲಿ ಮಾತನಾಡಿದರು.

ಅಂಜನಾದ್ರಿ ಅಭಿವೃದ್ಧಿಗೆ 2022-23ರಲ್ಲಿ ಸರ್ಕಾರ ₹ 100 ಕೋಟಿ ಅನುದಾನ ಮೀಸಲಿಟ್ಟಿದ್ದು ಬೆಟ್ಟದ ಕೆಳಗೆ ವಿವಿಧ ಕಾಮಗಾರಿ ಆರಂಭಿಸಲಾಗಿದೆ. ಡಿ. 15ರ ವೇಳೆ ಪ್ರದಕ್ಷಿಣೆ ಪಥ, ಸಮುಚ್ಚಯ, ವಸತಿ ಗೃಹ, ಶೌಚಾಲಯ, ಸ್ನಾನಗೃಹ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಳ್ಳಲಿದ್ದು, ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದ ಅವರು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ, ಕಂದಾಯ ಇಲಾಖೆ, ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರೋಪ್ ವೇ ಮಾರ್ಚ್‌ನಲ್ಲಿ ಪೂರ್ಣ:

ಅಂಜನಾದ್ರಿ ಬೆಟ್ಟ ಹತ್ತಲು ವೃದ್ಧರಿಗೆ ಮತ್ತು ಮಕ್ಕಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ರೋಪ್ ವೇ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಮಾರ್ಚ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದ ಸಚಿವರು, ಪ್ರದಕ್ಷಿಣಿ ಪಥ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಭೂ ಸ್ವಾಧೀನವಾಗಬೇಕಾಗಿದೆ. ಅರಣ್ಯ ಇಲಾಖೆ ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಿದರೆ ಈ ಕಾರ್ಯವು ಪೂರ್ಣಗೊಳ್ಳುತ್ತದೆ ಎಂದರು.

ಸಚಿವ ಶಿವರಾಜ ತಂಗಡಗಿ ಮಾತನಾಡಿ, ಪ್ರವಾಸಿಗರು ಬೆಟ್ಟದ ಮೇಲೆಯೂ ಪ್ರದಕ್ಷಣಿ ಹಾಕುತ್ತಿದ್ದು ಅವರಿಗೂ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಮನವಿ ಮಾಡಿದರು. ಇದಕ್ಕಿಂತ ಪೂರ್ವದಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಅಂಜನಾದ್ರಿ ಸೇರಿದಂತೆ ಜಿಲ್ಲೆಯ ಪ್ರವಾಸೋದ್ಯಮ ಪ್ರದೇಶದ ಬಗ್ಗೆ ವಿವರಿಸಿದರು.

ಈ ವೇಳೆ ಸಂಸದ ರಾಜಶೇಖರ್ ಹಿಟ್ನಾಳ್, ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ರಾಜವಶಂಸ್ಥೆ ಲಲಿತರಾಣಿ ಶ್ರೀರಂಗದೇವರಾಯಲು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಹೀಮಾ, ಆಯುಕ್ತ ರಾಜೇಂದ್ರ, ಜಿಲ್ಲಾಧಿಕಾರಿ ನಳಿನ್ ಆತುಲ್, ಪ್ರಾಚ್ಯವಸ್ತು ಇಲಾಖೆಯ ಆಯುಕ್ತ ದೇವರಾಜ್, ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಎಸ್‌ಪಿ ಡಾ. ಎಂ. ರಾಮ್ ಎಲ್. ಅರಿಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಸಹಾಯಕ ಆಯುಕ್ತ ಕ್ಯಾ. ಮಹೇಶ ಮಾಲಗಿತ್ತಿ, ಉದ್ಯಮಿ ಕೆ. ಕಾಳಪ್ಪ, ಮುಜರಾಯಿ ಇಲಾಖೆಯ ಇಒ ಪ್ರಕಾಶ, ತಹಸೀಲ್ದಾರ್‌ ನಾಗರಾಜ್, ಹುಲಿಗೆಮ್ಮ ಪೂರ್ಣಿಮಾ, ಅನ್ನಪೂರ್ಣಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.ಅಂಜನಾದ್ರಿಯಲ್ಲಿ ಪೂಜೆ

ಅಂಜನಾದ್ರಿ ಬೆಟ್ಟದ ಕೆಳಗೆ ಇರುವ ಆಂಜನೇಯಸ್ವಾಮಿ ಪಾದುಕೆಗಳಿಗೆ ಸಚಿವ ಎಚ್.ಕೆ. ಪಾಟೀಲ್ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ್ ಹಿಟ್ನಾಳ್, ವಿಪ ಸದಸ್ಯೆ ಹೇಮಲತಾ ನಾಯಕ, ಮಾಜಿ ಸಚಿವ ಅಮರೇಗೌಡ ಭಯ್ಯಾಪುರ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ಕರಿಯಣ್ಣ ಸಂಗಟಿ ಜಿಲ್ಲಾಧಿಕಾರಿ ನಳಿನ್ ಆತುಲ್ ಇದ್ದರು.