ಅಣ್ಣಿಗೇರಿ ತಾಲೂಕಿನ ಶಿಕ್ಷಕರಿಗೆ ಮೂರು ತಿಂಗಳಿಂದ ವೇತನ ತೀವ್ರ ತೊಂದರೆಯಾಗಿದ್ದು ತಕ್ಷಣ ಬಿಡುಗಡೆ ಮಾಡಬೇಕೆಂದು ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಧಾರವಾಡ:

ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗೆ ಕಳೆದ ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ವೇತನ ಬಿಡುಗಡೆ ಮಾಡುವಂತೆ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣ ಭಜಂತ್ರಿ ಮಾತನಾಡಿ, ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ, ನಲವಡಿ, ಶಲವಡಿ, ನಾವಳ್ಳಿ, ಶಿರೂರ, ಇಬ್ರಾಹಿಂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಅಣ್ಣಿಗೇರಿಯ ಸರ್ಕಾರಿ ಕನ್ನಡ ಪ್ರೌಢಶಾಲೆ ಮತ್ತು ಸರ್ಕಾರಿ ಉರ್ದು ಪ್ರೌಢಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಪರಿಣಾಮ ಸಾಲದ ಕಂತು, ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ವೈದ್ಯಕೀಯ ವೆಚ್ಚ ಸೇರಿದಂತೆ ಕುಟುಂಬ ನಿರ್ವಹಣೆಯೇ ದುಸ್ತರವಾಗಿದೆ ಎಂದು ಮನವಿ ಮೂಲಕ ವಿವರಿಸಿದರು.

ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ವಿಷಯವನ್ನು ತಂದಿದ್ದರೂ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಹೀಗಾಗಿ ರಾಜ್ಯ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಿ ಬಾಕಿ ವೇತನವನ್ನು ಬಿಡುಗಡೆಗೊಳಿಸಬೇಕು. ಅಲ್ಲದೆ, ವೇತನ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಡಾ, ಪ್ರಭಾಕರ ಲಗಮಣ್ಣವರ, ಬಿ ಜಿ ಬಶೆಟ್ಟಿ ಇದ್ದರು.