ಶಿರ್ವ: ಎಂಎಸ್ ಆರ್ ಎಸ್ ಕಾಲೇಜಿನ ವಾರ್ಷಿಕೋತ್ಸವ

| Published : Jun 06 2024, 12:31 AM IST

ಸಾರಾಂಶ

ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯ ಅರಿವು ಅಗತ್ಯ. ಕಾಲೇಜಿನಲ್ಲಿ ಸ್ಪರ್ಧೆ ನಡೆಸುವುದು ಶ್ಲಾಘನೀಯ ಎಂದು ಮುಖ್ಯ ಪ್ರಬಂಧಕ ಪ್ರದೀಪ್‌ ಕುಮಾರ್‌ ಕೆ. ಆರ್‌. ಹೇಳಿದರು.

ಕನ್ನಡಪ್ರಭ ವಾರ್ತೆ, ಕಾಪು

ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜುನಲ್ಲಿ ಇತ್ತೀಚಿಗೆ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿಯ ಕರ್ನಾಟಕ ಬ್ಯಾಂಕಿನ ಮುಖ್ಯ ಪ್ರಬಂಧಕ ಪ್ರದೀಪ್ ಕುಮಾರ್ ಕೆ. ಆರ್. ಇವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯ ಅರಿವು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದೆ, ಕಾಲೇಜಿನಲ್ಲಿ ಸ್ಪರ್ಧೆಗಳನ್ನು ನಡೆಸುವುದು ಶ್ಲಾಘನೀಯ ಎಂದು ನುಡಿದರು.

ಕಾಲೇಜಿನ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಬಹುಮಾನ ಪಡೆದು ಆತ್ಮವಿಶ್ವಾಸ ಹೆಚ್ಚಿಸಿಕೊಂಡ ವಿದ್ಯಾರ್ಥಿಗಳಿಗೆ ಅವರು ಅಭಿನಂದನೆ ಸಲ್ಲಿಸಿ, ಕರ್ಣಾಟಕ ಬ್ಯಾಂಕ್ ಸದಾ ಶೈಕ್ಷಣಿಕ ಚಟುವಟಿಕೆಗಳಿಗೆ ಸಹಾಯ ಹಸ್ತ ನೀಡುತ್ತಿದೆ ಎಂದರು.

ಮತ್ತೋರ್ವ ಅತಿಥಿಯಾಗಿ ಭಾಗವಹಿಸಿದ್ದ ಕರ್ಣಾಟಕ ಬ್ಯಾಂಕ್ ಉಜಿರೆ ಶಾಖೆಯ ಮುಖ್ಯ ಪ್ರಬಂಧಕ ಜನಾರ್ಧನ್ ಇವರು ಬಹುಮಾನ ವಿತರಿಸಿ ವಿದ್ಯಾರ್ಥಿಗಳಿಗೆ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಿಥುನ್ ಚಕ್ರವರ್ತಿ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳ ಸಾಧನೆಗಳ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಸೋನಾ ಎಚ್.ಸಿ. ಕಾರ್ಯಕ್ರಮದಲ್ಲಿ ನೆರೆದ ಎಲ್ಲರನ್ನೂ ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಅಭಿಲಾಷ್ ವಿದ್ಯಾರ್ಥಿ ಸಂಘದ ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವರ್ಷಾ, ಕಾರ್ಯಕ್ರಮ ನಿರೂಪಿಸಿ, ಜೊತೆ ಕಾರ್ಯದರ್ಶಿ ಶ್ರೇಯಾ ವಂದಿಸಿದರು.