ಸಾರಾಂಶ
ಸಮ್ಮೇಳನದ ಲಾಂಭನ ಬಿಡುಗಡೆ
ಸಕಲೇಶಪುರ: ಜನರಲ್ಲಿ ಭಾಷಭಿಮಾನ ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲ್ಲೇಶ್ಗೌಡ ಹೇಳಿದರು.ಗುರುವಾರ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಪ್ರತಿಯೊಬ್ಬ ಕನ್ನಡಿಗನಲ್ಲೂ ಕನ್ನಡದ ವೈಶಿಷ್ಟ್ಯದ ಬಗ್ಗೆ ಅರಿವು ಮೂಡಿಸುವುದು ಹಾಗೂ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದೆ. ೨೨ನೇ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಹೆತ್ತೂರು ಗ್ರಾಮದಲ್ಲಿ ಮಾ.೨೩ ಹಾಗೂ ೨೪ ರಂದು ನಡೆಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೊಡಿಸುವ ಮೂಲಕ ಭಾಷಾಭಿಮಾನ ಮೆರೆಯಬೇಕು ಎಂದು ಹೇಳಿದರು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, ಜಿಲ್ಲಾ ಸಾಹಿತ್ಯ ಸಮ್ಮೇಳನ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಕಾರ್ಯಕ್ರಮದ ಯಶಸ್ಸಿಗಾಗಿ ತನುಮನ ಅರ್ಪಿಸಿ ಕೆಲಸ ಮಾಡಲಾಗುವುದು ಎಂದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷೆ ಶಾರದ ಗುರುಮೂರ್ತಿ ಮಾತನಾಡಿ, ಜಿಲ್ಲಾ ಮಟ್ಟದ ಸಮ್ಮೇಳನ ನಡೆಸುವುದಕ್ಕೆ ಬಲಿಷ್ಠ ಸಂಘಟನೆ ಹಾಗೂ ಬದ್ಧತೆಯಿರುವ ಪದಾಧಿಕಾರಿಗಳಿರುವುದು ಅಗತ್ಯ. ಹೆತ್ತೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಬಲಿಷ್ಠವಾಗಿರುವುದರಿಂದಲೇ ಜಿಲ್ಲಾ ಘಟಕ ಇಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಿದ್ದು ಸಮ್ಮೇಳನ ಯಶಸ್ಸುಗೊಳಿಸುವ ಮೂಲಕ ಜಿಲ್ಲೆಯಲ್ಲಿ ಹೆತ್ತೂರು ಗ್ರಾಮದ ಹೆಸರು ಪಸರಿಸುವಂತೆ ಮಾಡಬೇಕಿದೆ ಎಂದು ತಿಳಿಸಿದರು.
ಈ ವೇಳೆ ಹೆತ್ತೂರು ಗ್ರಾಪಂ ಅಧ್ಯಕ್ಷ ನಾಗರಾಜ್, ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಬೊಮ್ಮೆಗೌಡ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮದನ್ ಗೌಡ, ಹೆತ್ತೂರು ಹೋಬಳಿ ಕಸಾಪ ಅಧ್ಯಕ್ಷ ರವಿಕುಮಾರ್, ಶಂಕರ್, ಉಜ್ಮರುಜ್ವಿ, ನೇತ್ರಾವತಿ ಮಂಜುನಾಥ್, ಇತರರು ಇದ್ದರು.ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ಸಾಹಿತ್ಯ ಪರಿಷತ್ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಲಾಯಿತು.