ಕನ್ನಡಪ್ರಭ ವಾರ್ತೆ ಬೆಳಗಾವಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರ ಪೊಲೀಸರು ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಮೂಲಕ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಆಯುಧಗಳನ್ನು ವಶಪಡಿಸಿಕೊಂಡಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರ ಪೊಲೀಸರು ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಮೂಲಕ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಆಯುಧಗಳನ್ನು ವಶಪಡಿಸಿಕೊಂಡಿದೆ.ನಗರದ ಕಾಕತಿವೇಸ್ ಪ್ರದೇಶದಲ್ಲಿ ಜೇಬಿನಲ್ಲಿ ಚಾಕು ಇಟ್ಟುಕೊಂಡು ಸಂಚರಿಸುತ್ತಿದ್ದ ವ್ಯಕ್ತಿಯನ್ನು ಈ ತಂಡ ಬಂಧಿಸಿದೆ. ಶಶಿಕಾಂತ ಶಿವರಾಜ ಅರಕೇರಿ (27) ಬಂಧಿತ ಆರೋಪಿ. ನಗರದ ಕೊನವಾಳ ಗಲ್ಲಿಯಲ್ಲಿ ತಂಡಗಳು ಪರಿಶೀಲನೆ ನಡೆಸುತ್ತಿದ್ದ ವೇಳೆ ಶಶಿಕಾಂತ ತನ್ನ ಜೇಬಿನಲ್ಲಿ ಚಾಕು ಇಟ್ಟುಕೊಂಡು ತಿರುಗಾಡುತ್ತಿರುವುದು ಪತ್ತೆಯಾಯಿತು. ತಕ್ಷಣ ಕಾರ್ಯಾಚರಣೆ ನಡೆಸಿದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಆನಂದ ಅದಗೊಂಡ ಹಾಗೂ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ಚಾಕುವನ್ನು ಜಪ್ತಪಡಿಸಿಕೊಂಡಿದ್ದಾರೆ. ಈ ಕುರಿತು ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ನಗರದ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯ ಕಣಬರ್ಗಿಯ ಜ್ಯೋತಿರ್ಲಿಂಗ ಗಲ್ಲಿಯಲ್ಲಿ ತಲ್ವಾರ್ ಹಿಡಿದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೋಲ ಶ್ರೀಕಾಂತ ವಾಫೆ(30) ಬಂಧಿತ ಆರೋಪಿ. ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಜಳಪಿಸುತ್ತಿದ್ದು, ಯಾವುದೋ ಅಪರಾಧಿಕ ಕೃತ್ಯ ಎಸಗುವ ಉದ್ದೇಶದಿಂದ ನಿಂತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಮಾಳಮಾರುತಿ ಠಾಣೆಯ ಪಿಎಸ್ಐ ಪಿ.ಎಂ.ಮೋಹಿತೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ತಲ್ವಾರ್ ಸಮೇತ ವಶಕ್ಕೆ ಪಡೆದಿದ್ದಾರೆ.-