ಹೊಸ ವೇತನ ಶ್ರೇಣಿ ಅನುಷ್ಠಾನಕ್ಕೆ ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ದಾವಣಗೆರೆ ಹೊಸ ವೇತನ ಶ್ರೇಣಿ ಅನುಷ್ಠಾನಕ್ಕೆ ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ಮನವಿ ಸಲ್ಲಿಸಲಾಯಿತು.
ಇಲಾಖೆಗಳ ಅಧಿಕಾರಿಗಳನ್ನು ಭೇಟಿ ಮಾಡಿದ ಸಂಘಟನೆ ಮುಖಂಡರು, ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾ ಸಿಬ್ಬಂದಿ ಹಾಗೂ ಕಾವಲುಗಾರರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.ಕರ್ನಾಟಕ ಸರ್ಕಾರ ಮೇ 22ರಂದು ರಾಜ್ಯದ 81 ನಿಗದಿತ ಉದ್ಯೋಗಗಳಿಗೆ ಕನಿಷ್ಠ ವೇತನವನ್ನು ಪರಿಷ್ಕರಿಸಿ ಅಂತಿಮ ಕ್ರೋಢಿಕೃತ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ವಿವಿಧ ಇಲಾಖೆಗಳ ಹಾಸ್ಟೆಲ್ ಕಾರ್ಮಿಕರು ಸೇರಿದ್ದು, ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದೀರ್ಘಕಾಲದ ದಾವೆಗಳ ಕಾರಣದಿಂದಾಗಿ 7 ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆ ನ್ಯಾಯಾಲಯದ ನಿರ್ದೇಶನದಂತೆ ಹೊಸ ಲೆಕ್ಕಾಚಾರ ಮತ್ತು ಕಾನೂನು ಪ್ರಕ್ರಿಯೆ ಪೂರೈಸಿ ಈಗ ಅಂತಿಮಗೊಂಡಿದೆ. ಈ ಹೊಸ ವೇತನ ಶ್ರೇಣಿಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಸಂಘಟನೆ ಮುಖಂಡರು ಮನವಿ ಮಾಡಿದರು.
2023ರ ಪರಿಷ್ಕೃತ ಕನಿಷ್ಠ ವೇತನಗಳು ಇಲಾಖೆಯಲ್ಲಿ ಕೆಲಸ ಮಾಡುವ ಎಲ್ಲ ಗುತ್ತಿಗೆ ಕಾರ್ಮಿಕರಿಗೂ ಸಮಾನವಾಗಿ ಅನ್ವಯಿಸುತ್ತವೆ. ವೇತನ ಸಂಹಿತೆ 2019 ಮತ್ತು ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ರದ್ದತಿ) ಕಾಯ್ದೆ 1970ರ ಪ್ರಕಾರ ಪ್ರತಿಯೊಬ್ಬ ಗುತ್ತಿಗೆ ಕಾರ್ಮಿಕರಿಗೂ ಸೂಚಿಯ ಕನಿಷ್ಠ ವೇತನಕ್ಕಿಂತ ಕಡಿಮೆ ಇಲ್ಲದಂತೆ ವೇತನ ದೊರೆಯುವುದನ್ನು ಖಚಿತಪಡಿಸಿಕೊಳ್ಳುವ ಅಂತಿಮ ಜವಾಬ್ದಾರಿ ಮುಖ್ಯ ಉದ್ಯೋಗದಾತರಾದ ಇಲಾಖೆಗಳ ಅಧಿಕಾರಿಗಳ ಮೇಲಿದೆ. ಆದ್ದರಿಂದ 2019ರಡಿಯಲ್ಲಿ ಹೊರಡಿಸಲಾದ ಅಧಿಸೂಚನೆ ಪ್ರಕಾರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ 2026 ಮೇ 22ರಿಂದ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.ಕಾರ್ಮಿಕರಿಗೆ ಪಿಎಫ್, ಇಎಸ್ಐ, ಹೆಚ್ಚುವರಿ ಕೆಲಸದ ವೇತನ, ರಾಷ್ಟ್ರೀಯ ಹಬ್ಬದ ರಜೆ ವೇತನ, ಗ್ರಾಚ್ಯುಟಿ ಸೇರಿದಂತೆ ಎಲ್ಲಾ ಕಾನೂನುಬದ್ಧ ಸೌಲಭ್ಯಗಳನ್ನು ಪರಿಷ್ಕೃತ ವೇತನದ ಆಧಾರದ ಮೇಲೆ ಪಾವತಿಸಬೇಕು. ಸರ್ಕಾರದ ಅಧಿಸೂಚನೆಯನ್ನು ತಕ್ಷಣ ಜಾರಿಗೊಳಿಸಿ, ಕಾರ್ಮಿಕ ಕಾನೂನು ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಮುಖಂಡರಾದ ತಿಪ್ಪೇಸ್ವಾಮಿ ಅಣಬೇರು, ನಿಂಗರಾಜು, ರವಿನಾಯ್ಕ, ಮನೋಹರ್, ಸರೋಜಮ್ಮ, ಪ್ರಸನ್ನ, ಜ್ಯೋತಿ, ಶಾಂತಕುಮಾರ ಹಾಜರಿದ್ದರು.- - -
-2ಕೆಡಿವಿಜಿ38, 39:ಹೊಸ ವೇತನ ಶ್ರೇಣಿ ಅನುಷ್ಠಾನಕ್ಕೆ ಒತ್ತಾಯಿಸಿ ದಾವಣಗೆರೆಯಲ್ಲಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಸಲ್ಲಿಸಿದರು.