ಚಿಕ್ಕಮಗಳೂರುಹಿಂದೂ ದಲಿತ ಕುಟುಂಬದ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಕೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಜಿಲ್ಲಾ ಎಸ್ಪಿ ಜಿತೇಂದ್ರ ಕುಮಾರ್ ದಯಾಮಗೆ ಮನವಿ ಸಲ್ಲಿಸಿ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಹಿಂದೂ ದಲಿತ ಕುಟುಂಬದ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಕೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ದಲಿತರು, ಹಿಂದುಳಿದ ವರ್ಗದವರು ಬಹಳಷ್ಟು ಸಂಕಟ ಎದುರಿಸುತ್ತಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಪದೆ ಪದೇ ದಲಿತರ ಮೇಲೆ ಶೋಷಣೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು.

ನಗರದ ಸುಧಾ ಎಂಬುವವರ ಮನೆ ಮೇಲೆ ಕೆಲವು ಅಪ್ರಾಪ್ತ ವಯಸ್ಸಿನ ಮುಸ್ಲಿಂ ಯುವಕರು ಕಲ್ಲು ತೂರಿದ್ದಾರೆ. ಇದರಿಂದ ಸುಧಾ ಹಾಗೂ ಪುತ್ರಿ ಗಾನವಿ ತೀವ್ರ ಗಾಬರಿಗೊಂಡಿದ್ದರು. ಈ ವೇಳೆ ದಲಿತ ಕುಟುಂಬಕ್ಕೆ ಸಹಾಯ ಮಾಡಿದವರ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದೂರಿದರು.

ಸರ್ಕಾರಿ ಉದ್ಯೋಗಿ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದಾದರೆ, ಸಾಮಾನ್ಯರ ಗತಿಯೇನು ಎಂದು ಪ್ರಶ್ನಿಸಿದರು. ತಕ್ಷಣವೇ ಘಟನಾ ಸ್ಥಳದಲ್ಲಿ ಸಹಕಾರ ನೀಡಿದ ಹಿಂದೂ ಕಾರ್ಯಕರ್ತರ ಎಫ್‌ಐಆರ್ ಹಿಂಪಡೆಯಬೇಕು. ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸುಧಾ ಮತ್ತು ಕುಟುಂಬದವರಿಗೆ ಸೂಕ್ತ ರಕ್ಷಣೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ ಮಹಿಳೆಯರು, ಹೆಣ್ಣುಮಕ್ಕಳು ಸಂಚರಿಸುವ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿ ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಎಸ್ಸಿ ಮೋರ್ಚಾ ಮುಖಂಡರಾದ ಹಂಪಯ್ಯ, ರೇವನಾಥ್, ಎಚ್.ಕೆ. ಕೇಶವಮೂರ್ತಿ, ಮಂಜು, ಧರ್ಮರಾಜ್, ಹಾಲಪ್ಪ, ಪ್ರಕಾಶ್, ಜೆ.ಡಿ.ಲೋಕೇಶ್, ಕನಕರಾಜ್ ಮೊದಲಾದವರಿದ್ದರು.ಫೋಟೋ

ಹಿಂದೂ ಮಹಿಳೆ ಮನೆ ಮೇಲೆ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಜಿಲ್ಲಾ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.