ವಿದ್ಯಾರ್ಥಿ ವೇತನ ಬಿಡುಗಡೆಗೆ ಮುಖ್ಯಮಂತ್ರಿಗೆ ಮನವಿ

| Published : Jan 07 2024, 01:30 AM IST

ವಿದ್ಯಾರ್ಥಿ ವೇತನ ಬಿಡುಗಡೆಗೆ ಮುಖ್ಯಮಂತ್ರಿಗೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಅಗತ್ಯ ಅನುದಾನ ನೀಡುವಂತೆ ಒತ್ತಾಯಿಸಿ ಶುಕ್ರವಾರ ಇಸ್ಲಾಮಿಕ್ ಸ್ಟೂಡೆಂಟ್ ಅರ್ಗನೈಜೇಷನ್ ಅಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರು

ರಾಜ್ಯದಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಅಗತ್ಯ ಅನುದಾನ ನೀಡುವಂತೆ ಒತ್ತಾಯಿಸಿ ಶುಕ್ರವಾರ ಇಸ್ಲಾಮಿಕ್ ಸ್ಟೂಡೆಂಟ್ ಅರ್ಗನೈಜೇಷನ್ ಅಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇಸ್ಲಾಮಿಕ್ ಸ್ಟೂಡೆಂಟ್ ಅರ್ಗನೈಜೇಷನ್ ಅಫ್ ಇಂಡಿಯಾದ ತುಮಕೂರು ಜಿಲ್ಲಾಧ್ಯಕ್ಷ ಮೊಹಮದ್ ಖಲೀಲ್ ಖಾನ್, ಕಾರ್ಯದರ್ಶಿ ಮೊಹಮದ್ ಕೈಫ್, ಪದಾಧಿಕಾರಿಗಳಾದ ಜೈದ್ ಅಹಮದ್, ಇಬ್ರಾಹಿಂ ಸಯೀದ್ ಅವರ ನಿಯೋಗವೂ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿ ಶುಭಾ ಕಲ್ಯಾಣ ಅವರಿಗೆ ಸಲ್ಲಿಸಿದರು.

ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಜಾರಿಗೊಳ್ಳುತ್ತಿರುವ ವಿವಿಧ ರೀತಿಯ ವಿದ್ಯಾರ್ಥಿವೇತನ, ಶಿಷ್ಯವೇತನ, ಪ್ರೋತ್ಸಾಹ ಧನ, ಉತ್ತೇಜನದಂತಹ ಕಾರ್ಯಕ್ರಮ, ಯೋಜನೆಗಳಿಗೆ ಸೂಕ್ತ ಅನುದಾನ ಸಿಗದೆ ಸಮರ್ಪಕ ಜಾರಿಯಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

2023-24 ರ ಜುಲೈ ತಿಂಗಳಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗಾಗಿ ಸುಮಾರು 2100 ಕೋಟಿ ರು. ಅನುದಾನವನ್ನು ಒದಗಿಸಲಾಗಿತ್ತು, ಇದರಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಅಂದಾಜು 1700 ಕೋಟಿ ರು. ಹಂಚಿಕೆ ಮಾಡಿತ್ತು. ಈ ಅನುದಾನದಲ್ಲಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ, ಮೆರಿಟ್ ಕಮ್ ಮೀನ್ಸ್(ಒಅಒ), ನ್ಯಾಷನಲ್ ಓವರ್ಸೀಸ್ ಸ್ಕಾಲರ್‌ಶಿಪ್ ಹಾಗೂ ಎಂ.ಫಿಲ್ ಮತ್ತು ಪಿಎಚ್‌ಡಿ ಫೆಲೋಶಿಪ್ ಅನ್ನು ನೀಡಲು 160 ಕೋಟಿ ರು. ನಿಯೋಜಿಸಲಾಗಿದೆ. ಆದರೆ ಕಳೆದ ೬ ತಿಂಗಳ ಅವಧಿಯಲ್ಲಿ ನಿರ್ದೇಶನಾಲಯಕ್ಕೆ ಬಿಡುಗಡೆಗೊಂಡಿದ್ದು ಕೇವಲ 73.32 ಕೋಟಿ ರು. ಇದರಲ್ಲಿ ವೆಚ್ಚವಾದದ್ದು, ಖರ್ಚಾದದ್ದು 7.21 ಕೋಟಿ ರು. ಮಾತ್ರ. ಇದು ಒಟ್ಟು ಮೀಸಲಿದ್ದ ಅನುದಾನದ ಪೈಕಿ ಶೇ.1 ರಷ್ಟು ಮಾತ್ರ ಅನುದಾನ ಬಳಕೆಯಾಗಿದೆ.

ಕಳೆದ ವರ್ಷ ಕೇಂದ್ರ ಸರಕಾರವು ಎನ್‌ಎಸ್‌ಪಿ ಅಡಿಯಲ್ಲಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಿ ಆದೇಶ ಹೊರಡಿಸಿತು. ಇದಕ್ಕಾಗಿ ಆರ್‌ಟಿಇ ಕಾಯ್ದೆಯನ್ನು ತಪ್ಪಾಗಿ ವ್ಯಾಖ್ಯಾನಿಸಿತ್ತು, ಅರ್ಜಿ ಸಲ್ಲಿಸಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲು ಸುಮಾರು 110ಕೋಟಿ ರು.ಗಳ ಅಗತ್ಯತೆಯಿತ್ತು. ಈ ಬಾರಿಯ ಜುಲೈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 60 ಕೋಟಿ ರು. ನೀಡಿ ಎಸ್ಎಸ್‌ಪಿ ಅಡಿಯಲ್ಲಿ ನೀಡಲು ಸಂಪೂರ್ಣ ರಾಜ್ಯ ಪ್ರಾಯೋಜಿತ ಕಾರ್ಯಕ್ರಮವನ್ನಾಗಿ ಮುಂದುವರಿಸುವುದಾಗಿ ಘೋಷಿಸಿದರು, ಆದರೆ ಕಳೆದ ವರ್ಷ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ಸ್ಕಾಲರ್‌ಶಿಪ್ ತಲುಪಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಚಾಲ್ತಿಯಲ್ಲಿರುವ ವಿವಿಧ ವಿದ್ಯಾರ್ಥಿ ವೇತನದ ಕಾರ್ಯಕ್ರಮಗಳಿಗೆ ಅಗತ್ಯ ಮತ್ತು ತುರ್ತು ಅನುದಾನ ಬಿಡುಗಡೆ ಮಾಡಿ, ವಿದ್ಯಾರ್ಥಿಗಳ ಕಲಿಕೆಗೆ ಸಹಕರಿಸುವಂತೆ ಮನವಿಯಲ್ಲಿ ಕೋರಿದ್ದಾರೆ.