ಸಾರಾಂಶ
ಕನ್ನಡಪ್ರಭ ವಾರ್ತೆ ರಾಮನಗರ
ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಬಹುದಿನಗಳ ಬೇಡಿಕೆ ಎನ್ಪಿಎಸ್ನಿಂದ ಒಪಿಎಸ್ ಪಿಂಚಣಿ ವ್ಯವಸ್ಥೆಗೆ ಬದಲಾವಣೆ ಮಾಡುವುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವುದಾಗಿ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ 2025ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ 2023ನೇ ಸಾಲಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಸರ್ಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಪಿಎಸ್ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕೆಂಬ ಸರ್ಕಾರಿ ನೌಕರರ ಮನವಿಯನ್ನು ಸಿಎಂ ಮತ್ತು ಡಿಸಿಎಂ ಅವರಿಗೆ ಶಿಫಾರಸ್ಸು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸರ್ಕಾರಿ ಕೆಲಸ ದೇವರ ಕೆಲಸ ಇದನ್ನು ಅರಿತು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಜವಾಬ್ದಾರಿಯುತರಾಗಿ ಕಾರ್ಯ ನಿರ್ವಹಿಸಬೇಕು. ಸಮಾಜದಲ್ಲಿ ಕೋಟ್ಯಂತರ ಜನರು ವಾಸಿಸುತ್ತಿದ್ದಾರೆ. ಅದರಲ್ಲಿ ಕೆಲವರಿಗೆ ಮಾತ್ರ ಸರ್ಕಾರಿ ಕೆಲಸ ಮಾಡುವ ಭಾಗ್ಯ ಲಭಿಸುತ್ತದೆ. ಅಧಿಕಾರಿ ಎನಿಸಿಕೊಳ್ಳಲು ಅವಕಾಶ ಸಿಗುತ್ತದೆ. ಆದ್ದರಿಂದ ತಮಗೆ ದೊರೆತ ಕೆಲಸವನ್ನು ಜವಾಬ್ದಾರಿಯುತವಾಗಿ, ಪ್ರಾಮಾಣಿಕವಾಗಿ, ಗೌರವದೊಂದಿಗೆ ಕರ್ತವ್ಯ ನಿರ್ವಹಿಸಿ ಕೊಟ್ಟಂತಹ ಸ್ಥಾನವನ್ನು ಉಳಿಸಿಕೊಳ್ಳುವಂತೆ ತಿಳಿಸಿದರು.ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಹಾಗೂ ಸಾರ್ವಜನಿಕರ ಒತ್ತಡಗಳಿಂದ ಕರ್ತವ್ಯ ನಿರ್ವಹಿಸುವಂತಾಗಿದೆ ನಿಮಲ್ಲಿಗೆ ಕೆಲಸಕ್ಕೆಂದು ಬರುವ ಸಾರ್ವಜನಿಕರಿಗೆ ಗೌರವ ನೀಡಿ ಪ್ರೀತಿಯಿಂದ ಕಾಣಿ ಹಾಗೂ ಸಂಬಳ ಪಡೆಯುವ ಉದ್ದೇಶದಿಂದ ಕಾರ್ಯ ನಿರ್ವಹಿಸಬೇಡಿ ಸೇವಾ ಮನೋಭಾವದಿಂದ ಕರ್ತವ್ಯವನ್ನು ನಿರ್ವಹಿಸುವಂತೆ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಮಾತನಾಡಿ, ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಹಾಗೂ ಜನರೊಂದಿಗೆ ಬೆರೆತು ಮಾಡಬೇಕು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿ ಸಿಗುವ ತೃಪ್ತಿಗಿಂತ ಸರ್ಕಾರಿ ಅಧಿಕಾರಿಯಾಗಿ ಜನರ ಸೇವೆ ಮಾಡಿದ ತೃಪ್ತಿ ಹೆಚ್ಚಾಗಿರುತ್ತದೆ. ಆದುದರಿಂದ ನೀವು ಸಹ ಜನಸೇವೆ ಮಾಡಬೇಕು. ಪ್ರಶಸ್ತಿಗೆ ಇನ್ನು ಹೆಚ್ಚು ಅಧಿಕಾರಿ ನೌಕರರು ಅರ್ಹರಿದ್ದು ಮುಂದಿನ ದಿನಗಳಲ್ಲಿ ಅವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷ ರಾಜು, ವಿಜಯ ಕಾಲೇಜಿನ ಪ್ರಾಧ್ಯಾಪಕ ಶಾಂತರಾಜು ಉಪನ್ಯಾಸ ನೀಡಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಸತೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ನಟರಾಜ್ ಗಾಣಕಲ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್, ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಪಂ ಉಪ ಕಾರ್ಯದರ್ಶಿ ಧನರಾಜ್, ಸಿಡಿಪಿಒ ಚಿಕ್ಕಸುಬ್ಬಯ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
2023ನೇ ಸಾಲಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ:ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಜಿ.ಎಲ್ ಪದ್ಮಾ, ರಾಮನಗರ ತಹಸೀಲ್ದಾರ್ ತೇಜಸ್ವಿನಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗವೇಣಿ, ಹಿರಿಯ ಆರೋಗ್ಯ ತಪಾಸಣಾಧಿಕಾರಿ ಬಿ.ಎಸ್.ಗಂಗಾಧರ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ನಂದೀಶ್, ಜಿಲ್ಲಾ ಖಜಾನಾ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಲೋಕೇಶ್, ಬಿಸಿಎಂ ಇಲಾಖೆ ಮೇಲ್ವಿಚಾರಕಿ ಎಚ್.ಯು.ಗೀತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಜಿ.ರಮೇಶ್ ಬಾಬು, ಆರ್ಡಿಪಿಆರ್ ಇಲಾಖೆ ಪಿಡಿಒ ನರಸಿಂಹಮೂರ್ತಿ ಹಾಗೂ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಕೆ.ಎಸ್.ನಿತೀನ್ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.