ಹುಬ್ಬಳ್ಳಿ:
ಹು-ಧಾ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ರಾಜೀಯಾಗುವ ಪ್ರಶ್ನೆಯೇ ಇಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ತಿಳಿಸಿರುವ ಶಾಸಕ ಪ್ರಸಾದ ಅಬ್ಬಯ್ಯ, ಇದೇ ವೇಳೆ ಅವಳಿ ನಗರದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಗೃಹ ಸಚಿವರಿಗೆ ಒತ್ತಾಯಿಸಲಾಗಿದೆ ಎಂದರು.ಈ ಮೂಲಕ ಪೊಲೀಸ್ ಆಯುಕ್ತ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಎತ್ತಂಗಡಿ ಮಾಡುವಂತೆ ಪರೋಕ್ಷವಾಗಿ ಅವರು ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಪೊಲೀಸರಿಂದ ನೊಂದ ಜನರಿಗೆ ರಕ್ಷಣೆ ಸಿಗುತ್ತಿಲ್ಲ. ಪೊಲೀಸರೇ ತಪ್ಪು ಹೆಜ್ಜೆ ಇಡುತ್ತಿದ್ದಾರೆ. ಆದರೆ, ನಮ್ಮ ಸರ್ಕಾರ ಇದಕ್ಕೆ ಸೊಪ್ಪು ಹಾಕುವ ಮಾತೇ ಇಲ್ಲ. ಮಹಾನಗರದಲ್ಲಿ ಪೊಲೀಸರ ಲೋಪದೋಷದ ಬಗ್ಗೆ ಈಗಾಗಲೇ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಡ್ರಗ್ಸ್ ಮತ್ತು ಗಾಂಜಾ ಹಾವಳಿ ನಗರದಲ್ಲಿ ಬೇರು ಬಿಟ್ಟಿದೆ. ಕ್ರಿಕೆಟ್ ಬೆಟ್ಟಿಂಗ್ ಎಗ್ಗಿಲ್ಲದೇ ನಡೆಯುತ್ತಿದೆ. ಹೊಸ ಗನ್ ಲೈಸೆನ್ಸ್ ಮತ್ತು ರಿನೀವಲ್ಗೆ ಪೊಲೀಸರು ದುಡ್ಡು ಫಿಕ್ಸ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ ಎಂದರು.ಧಾರವಾಡದಲ್ಲಿ ನಡೆದ ವಿದ್ಯಾರ್ಥಿಯ ಸಾವಿನ ತನಿಖೆ ಸರಿಯಾದ ರೀತಿಯಲ್ಲಿ ನಡೆಯಬೇಕು ಎಂದಿರುವ ಅವರು, ಅವಳಿ ನಗರದಲ್ಲಿ ಹಾಲಿ ಇರುವ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕೆಂದು ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಸದ್ಯದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹು-ಧಾ ಅವಳಿ ನಗರಕ್ಕೆ ಖಡಕ್ ಅಧಿಕಾರಿ ನೇಮಿಸುವಂತೆ ಒತ್ತಾಯಿಸುತ್ತೇನೆ. ಯಾವುದೇ ಒತ್ತಡಕ್ಕೆ ಮಣಿಯದೇ, ಸರ್ಕಾರ ಸೂಕ್ತ ಕ್ರಮಕೈಗೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಅಬ್ಬಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.