ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಸಮಿತಿಯ ಅಧ್ಯಕ್ಷ ವಿ.ಎಂ.ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿ ಮಂಡಿಸಿ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳ ಜತೆಗೆ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮುಖರಾಗಿದ್ದಾರೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.ಪಡಿತರ ಚೀಟಿ ನೀಡಲು ಮನವಿ
ಸಮಿತಿಯ ಅಧ್ಯಕ್ಷ ವಿ.ಎಂ ಮುನಿಯಪ್ಪ ಮಾತನಾಡಿ, ಕೆಲವು ಕಾರಣಾಂತರಗಳಿಂದ ಅರ್ಹ ಫಲಾನುಭವಿಗಳು ರೇಷನ್ ಕಾರ್ಡ್ ಮಾಡಿಸಲು ಸಾಧ್ಯವಾಗಿಲ್ಲ ಕೂಡಲೇ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣರಿಗೆ ಪತ್ರ ಬರೆದು ರಾಜ್ಯಾದ್ಯಂತ ಕಾರ್ಡ್ ಮಾಡಿಕೊಳ್ಳಲು ಅವಕಾಶ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಲಾಗುವುದು ಎಂದರು.ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಯೋಜನೆಯು ಎಲ್ಲ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಇಲಾಖೆಯ ಮುಂದೆ ಪ್ರಚಾರದ ನಾಮಫಲಕಗಳನ್ನು ಅಳವಡಿಸಬೇಕು ಎಂದು ಹೇಳಿದರು.
ಯೋಜನೆ ಎಲ್ಲರಿಗೂ ತಲುಪಬೇಕುಬಡಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿದೆ. ಯೋಜನೆಯ ಲಾಭ ಎಲ್ಲರ ಮನೆಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು. ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಲಕಾಲಕ್ಕೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಮಸ್ಯೆ ಇದ್ದರೆ ಕೂಡಲೇ ಬಗೆಹರಿಸಬೇಕು ಎಂದರು.
ಪ್ರಚಾರಾಂದೋಲನ ಅಗತ್ಯಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್ ಮಾತನಾಡಿ, ಸರ್ಕಾರದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ತಲುಪಬೇಕು ಇದರಲ್ಲಿ ಲೋಪ ದೋಷಗಳ ಇದ್ದರೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ. ಜನರಿಗೆ ತೊಂದರೆ ಕೊಡುವ ಪಡಿತರ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಬೇಕು ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾಗದಂತೆ ಕ್ರಮ ವಹಿಸಬೇಕು. ಕೋಲಾರ ನಗರ ಸಾರಿಗೆ ಬಗ್ಗೆ ಪ್ರಚಾರಾಂದೋಲನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಪಂ ಇಒ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಇದಾಹಿತ್ ಉಲ್ಲಾ ಷರೀಫ್ ಇದ್ದರು.