ಕೆಲ ತಿಂಗಳ ಹಿಂದೆ ಮಳವಳ್ಳಿ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ಶೋಷಣೆಗೆ ಒಳಗಾದವರಿಂದ ದೂರು ಸ್ವೀಕರಿಸಲಾಗಿದ್ದು, ಕಂದಾಯ, ಎಸ್ಸಿಪಿ ಟಿಎಸ್ಪಿ ಹಣ ಬಳಕೆ, ತಾಪಂ, ಪುರಸಭೆ, ಸಾಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧ ದೂರುಗಳು ಬಂದಿವೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ರಾಜ್ಯ ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ ಆಯೋಗಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜಿಲ್ಲಾ ಹಾಗೂ ತಾಲೂಕುಗಳಿಗೆ ವಿಂಗಡಣೆ ಮಾಡಲಾಗಿದೆ ಎಂದು ಅಧ್ಯಕ್ಷ ಡಾ.ಎಲ್.ಮೂರ್ತಿ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆಯೋಗಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಈಗಾಗಲೇ ಆಯೋಗ ತಹಸೀಲ್ದಾರ್ ಮೂಲಕ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳಿಗೆ ವರ್ಗಾಯಿಸಿದ್ದು, ಶೀಘ್ರ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಹಂತ ಹಂತವಾಗಿ ಸಮಸ್ಯೆ ಪರಿಹರಿಸಲಾಗುವುದು ಎಂದರು.
ಮಂಡ್ಯ ಜಿಲ್ಲೆಯಲ್ಲಿ 150ಕ್ಕೂ ಪ್ರಕರಣಗಳು ಆಯೋಗದಲ್ಲಿ ದಾಖಲಾಗಿವೆ. ಪ್ರಸ್ತುತ ಮಳವಳ್ಳಿಯಲ್ಲಿ 38 ದೂರುಗಳು ಸಲ್ಲಿಕೆಯಾಗಿವೆ. 2014-15ರಿಂದ 2024-25ರವರೆಗೆ ಹಲವು ಪ್ರಕರಣಗಳು ಬಾಕಿ ಇವೆ. ಎಲ್ಲಾ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು ಎಂದರು.ಕೆಲ ತಿಂಗಳ ಹಿಂದೆ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ಶೋಷಣೆಗೆ ಒಳಗಾದವರಿಂದ ದೂರು ಸ್ವೀಕರಿಸಲಾಗಿದ್ದು, ಕಂದಾಯ, ಎಸ್ಸಿಪಿ ಟಿಎಸ್ಪಿ ಹಣ ಬಳಕೆ, ತಾಪಂ, ಪುರಸಭೆ, ಸಾಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧ ದೂರುಗಳು ಬಂದಿವೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಗೊಂದಲ ಇಲ್ಲದ ಪ್ರಕರಣ ಇತ್ಯರ್ಥ ಮಾಡಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ತಾಲೂಕಿನ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಿ ಹಲವು ಸಲಹೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಕೂಡ ಸಮಸ್ಯೆ ಬಗೆಹರಿಸುವ ಬಗ್ಗೆ ಭರವಸೆ ನೀಡಿದ್ದಾರೆ. ಅದಾಲತ್ ಅಡಿಯಲ್ಲಿ ಅರ್ಜಿದಾರರು ಮತ್ತು ಅಧಿಕಾರಿಗಳ ನೇರವಾರಿ ಚರ್ಚಿಸುವ ಅವಕಾಶ ಮಾಡಿಕೊಟ್ಟು ಸ್ಥಳದಲ್ಲಿಯೇ ಸಮಸ್ಯೆ ಬಗೆರಿಹರಿಸಲಾಗುವುದು ಎಂದರು.ಇದೇ ವೇಳೆ ಡಾ.ಮೂರ್ತಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಮುಖಂಡರು ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು. ಈ ವೇಳೆ ತಾಪಂ ಇಒ ಎಚ್.ಜಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ ಉಮಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಂತೋಷ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ ನಾಗರತ್ನ ಶೀರಸ್ತೇದಾರ್ ಗುರುಪ್ರಸಾದ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.