ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಸಾ.ರಾ. ಮಹೇಶ್

| Published : Feb 07 2024, 01:46 AM IST

ಸಾರಾಂಶ

ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನೇಮಕದ ಆದೇಶ ಹೊರಬೀಳುತ್ತಿದ್ದಂತೆ ಅವರು ಮಾತನಾಡಿ, ನಾನು ಎಂದು ಕನಸು ಮನಸ್ಸಿನಲ್ಲಿಯೂ ಈ ಹುದ್ದೆ ನಿರೀಕ್ಷಿಸಿರಲಿಲ್ಲ, ಆದರೆ ನನ್ನನ್ನು ನಂಬಿ ನೀಡಿದ ಅಧಿಕಾರವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತೇನೆ, ಆದರೆ ನಾನು ಮೊದಲೇ ಹೇಳಿದಂತೆ ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ

ಎಚ್‌.ಡಿ. ದೇವೇಗೌಡ, ಎಚ್‌.ಡಿ. ಕುಮಾರಸ್ವಾಮಿ ಅವರು ತೋರಿದ ದಾರಿಯಲ್ಲಿ ನಡೆಯುತ್ತೇನೆ

ಕನ್ನಡಪ್ರಭ ವಾರ್ತೆ ಸಾಲಿಗ್ರಾಮ

ಸಂಘಟನೆ ಮತ್ತು ನಾಯಕತ್ವದ ಗುಣವನ್ನು ನೋಡಿ ನೀಡಿರುವ ಪದವಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಅಧಿಕಾರ ನೀಡಿದ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತೋರಿದ ದಾರಿಯಲ್ಲಿ ನಡೆಯುತ್ತೇನೆ ಎಂದು ಮಾಜಿ ಸಚಿವ. ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಹೇಳಿದ್ದಾರೆ.

ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನೇಮಕದ ಆದೇಶ ಹೊರಬೀಳುತ್ತಿದ್ದಂತೆ ಅವರು ಮಾತನಾಡಿ, ನಾನು ಎಂದು ಕನಸು ಮನಸ್ಸಿನಲ್ಲಿಯೂ ಈ ಹುದ್ದೆ ನಿರೀಕ್ಷಿಸಿರಲಿಲ್ಲ, ಆದರೆ ನನ್ನನ್ನು ನಂಬಿ ನೀಡಿದ ಅಧಿಕಾರವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತೇನೆ, ಆದರೆ ನಾನು ಮೊದಲೇ ಹೇಳಿದಂತೆ ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದರು.

ನನ್ನದೇನಿದ್ದರೂ ತತ್ವ ಸಿದ್ಧಾಂತ ನಿಷ್ಠೆ ರಾಜಕಾರಣವೇ ವಿನಃ ಅಧಿಕಾರಕ್ಕಾಗಿ ಸಮಯ ಸಾಧಕ ರಾಜಕಾರಣ ಮಾಡುವುದಿಲ್ಲ, ಅದರ ಅಗತ್ಯವೂ ನನಗಿಲ್ಲ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಹೊಂದಾಣಿಕೆಯಾಗಿದ್ದು, ಕ್ಷೇತ್ರಗಳ ಬಗ್ಗೆ ಅವರೇ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಅದಕ್ಕೆ ನಾವೆಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಯಾವ ಯಾವ ಕ್ಷೇತ್ರಗಳು ಎಂದು ನಿಗದಿಯಾಗಿಲ್ಲ

ಕೆಲವು ವ್ಯಕ್ತಿಗಳು ವೈಯಕ್ತಿಕ ಹಿತಾಸಕ್ತಿಗಾಗಿ ಅಧಿಕಾರದ ಆಸೆಗಾಗಿ ಈ ಕ್ಷೇತ್ರ ಬಿಟ್ಟು ಕೊಡುವುದಿಲ್ಲ, ಆ ಕ್ಷೇತ್ರ ಬಿಟ್ಟು ಕೊಡುತ್ತೇವೆ ಎಂಬ ಹೇಳಿಕೆಯಿಂದ ಪಕ್ಷದ ವರಿಷ್ಠರಿಗೆ ಬೇಸರವಾಗಿದೆ, ಆದರೆ ಇದೆಲ್ಲವನ್ನು ಗಮನಿಸುತ್ತಿರುವ ವರಿಷ್ಠರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಬಯಕೆ ಇರುವವರು ಯಾರು ಸಹ ಕ್ಷೇತ್ರ ಮತ್ತು ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಹೆಸರನ್ನು ಹೇಳದೆ ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡಿದ ಮಾಜಿ ಶಾಸಕ ಪ್ರೀತಂ ಗೌಡರ ಬಗ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಅಭಿವೃದ್ಧಿ ಮಾಡದೆ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ

ಕೇವಲ ಕೇಂದ್ರ ಸರ್ಕಾರವನ್ನು ಟೀಕಿಸುವ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಗೆ ಹಿನ್ನೆಡೆಯಾಗಿರುವುದರಿಂದ ಅದನ್ನು ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸುತ್ತಿದೆ, ಉಚಿತ ಭಾಗ್ಯಗಳನ್ನು ನೀಡುವ ನೆಪದಲ್ಲಿ ರಸ್ತೆ ಕೃಷಿ ನೀರಾವರಿ ಯೋಜನೆಗಳನ್ನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದ್ದು ಇದರಿಂದ ರಾಜ್ಯದ ಜನತೆ ಆಕ್ರೋಶಗೊಂಡಿದ್ದು ಇದರ ಪರಿಣಾಮ ಲೋಕಸಭಾ ಚುನಾವಣೆಯಲ್ಲಿ ಬೀರಬಾರದು ಎಂದು ರಾಜ್ಯದ ಜನತೆಯ ದಿಕ್ಕು ತಪ್ಪಿಸುವಂಥ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

28 ಕ್ಷೇತ್ರಗಳು ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲುವು

ಕಾಂಗ್ರೆಸ್ ಆಡಳಿತದಿಂದ ಬೇಸತ್ತಿರುವ ರಾಜ್ಯದ ಜನತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಹೊಂದಾಣಿಕೆಯಿಂದ ಸ್ಪರ್ಧಿಸುವ ಎಲ್ಲ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದ್ದು, ಕರ್ನಾಟಕ ರಾಜ್ಯದಲ್ಲಿ ಈ ಬಾರಿ ದಾಖಲೆಯನ್ನು ನಿರ್ಮಿಸುತ್ತೇವೆ ಎಂದ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಣ್ಣ ಬಯಲಾಗುತ್ತದೆ ಎಂದು ತಿಳಿಸಿದರು.