ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ರಾಜ್ಯಾದ್ಯಂತ ಗ್ರಾಮೀಣ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1030 ಶಾಲೆಗಳಿಗೆ ಧರ್ಸಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ಎಸ್.ಎಸ್. ತಿಳಿಸಿದ್ದಾರೆ.ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಪ್ರದೇಶದ ಆರ್ಥಿಕ ಹಿಂದುಳಿದ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿಯೇ ಕಳೆದ 30 ವರ್ಷಗಳ ಹಿಂದೆ ‘ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ’ ಜಾರಿಗೆ ತಂದರು.
ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣಮಟ್ಟ ಸುಧಾರಣೆ ಹಾಗೂ ಕಲಿಕಾ ವಾತಾವರಣ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರಂತೆ ಶಾಲಾ ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಶೌಚಾಲಯ, ಆಟದ ಮೈದಾನ, ಶಾಲಾ ಆವರಣ, ವಿದ್ಯುದ್ಧೀಕರಣ, ಕುಡಿಯುವ ನೀರು, ರಂಗಮಂದಿರ, ಶಾಲಾ ಕಟ್ಟಡಗಳ ದುರಸ್ತಿ, ಡೆಸ್ಕ್- ಬೆಂಚ್ಗಳ ವಿತರಣೆ ಮೊದಲಾದವುಗಳಿಗೆ ಈ ಕಾರ್ಯಕ್ರಮದ ಮೂಲಕ ಪೂರಕ ಸಹಾಯಧನ ನೀಡಲಾಗುತ್ತಿದೆ. ಇದರಂತೆ ಇದುವರೆಗೆ ಒಟ್ಟು 61.16 ಕೋಟಿ ರು. ಮೊತ್ತದ ಸಹಾಯಧನ ನೀಡಲಾಗಿದೆ.ಶಾಲೆಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಂಖ್ಯೆಯ ಅನುಪಾತವನ್ನು ಗಮನಿಸಿ ತೀರಾ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ‘ಜ್ಞಾನದೀಪ ಅತಿಥಿ ಶಿಕ್ಷಕರ’ ನಿಯೋಜನೆ ಮಾಡಲಾಗುತ್ತಿದೆ. ಈ ಶಿಕ್ಷಕರಿಗೆ ಮಾಸಿಕ ಗೌರವಧನವನ್ನು ಸಂಸ್ಥೆಯ ವತಿಯಿಂದ ಪಾವತಿಸಲಾಗುತ್ತಿದ್ದು, ಇದಕ್ಕಾಗಿಯೇ ಸಂಸ್ಥೆಯಿಂದ ಇದುವರೆಗೆ ಒಟ್ಟು 21.33 ಕೋಟಿ ರು. ಮೊತ್ತ ವಿನಿಯೋಗಿಸಲಾಗಿದೆ.
ಜ್ಞಾನದೀಪ ಶಿಕ್ಷಕರ ಮೂಲಕ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಶಾಲೆ ಬಿಟ್ಟ 6 ರಿಂದ 14 ವರ್ಷ ಪ್ರಾಯದ ಮಕ್ಕಳ ಮನೆ ಸಂದರ್ಶಿಸಿ, ಕಾರಣ ತಿಳಿಯುವುದು ಹಾಗೂ ಕುಟುಂಬದ ಸಂಪರ್ಕ ಬೆಳೆಸಿ ಅವರನ್ನು ಮತ್ತೆ ಶಾಲೆಗೆ ಸೇರ್ಪಡೆಗೊಳಿಸಲು ಶ್ರಮಿಸಲಾಗುವುದು. ಗ್ರಾಮೀಣ ಪ್ರದೇಶದ ಪ್ರತಿ ವಿದ್ಯಾರ್ಥಿಯೂ ಶಿಕ್ಷಣ ಪಡೆಯಲು ಪ್ರೇರಣೆ ನೀಡುವಂತೆ ಹೆತ್ತವರ ಮನವೊಲಿಸಲಾಗುವುದು.ರಾಜ್ಯಾದ್ಯಂತ ವಿವಿಧ ಶಾಲೆಗಳಿಗೆ ಈ ಶೈಕ್ಷಣಿ ಕವರ್ಷದಲ್ಲಿ ಸುಮಾರು 1030 ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಪೈಕಿ 240 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿರುವುದು ಉಲ್ಲೇಖನೀಯವಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಈ ಶಿಕ್ಷಕರು ಆಯಾ ಶಾಲೆಗಳಿಗೆ ಮಹತ್ತರ ಕೊಡುಗೆ ನೀಡಲಿದ್ದಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.