ಈಗಾಗಲೇ ಆಲೂರು, ಆಲೂರುದೊಡ್ಡಿ, ಬೂದಗುಪ್ಪೆ, ನೀಲಕಂಠನಹಳ್ಳಿ ಸೇರಿದಂತೆ ಇನ್ನಿತರ ವ್ಯಾಪ್ತಿಯ ಗ್ರಾಮಸ್ಥರು ತಮಗೆ ಬೆಂಬಲ ನೀಡಲು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷ ಸಂಘಟನೆಗೂ ಹೆಚ್ಚಿನ ಒತ್ತು ನೀಡುವ ಮೂಲಕ ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರಲು ನಿರಂತರವಾಗಿ ಶ್ರಮಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಇತರೆ ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ನನಗೆ ಮತ್ತಷ್ಟು ಬಲಬಂದಂತಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಅಭಿಪ್ರಾಯಪಟ್ಟರು.

ತಾಲೂಕಿನ ಹೂತಗೆರೆ ಗ್ರಾಮದಲ್ಲಿ ವಿಶ್ವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಹೂತಗೆರೆ ದಿಲೀಪ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ತಮ್ಮ ಕಾರ್ಯ ವೈಖರಿ ಮೆಚ್ಚಿ ಇತರೆ ಪಕ್ಷದ ಕಾರ್ಯಕರ್ತರು, ಮುಖಂಡರು ಸೇರ್ಪಡೆಗೊಳ್ಳುತ್ತಿರುವುದು ತಮಗೆ ಮತ್ತಷ್ಟು ಆನೆ ಬಲ ಬಂದಂತಾಗಿದೆ ಎಂದರು.

ಈಗಾಗಲೇ ಆಲೂರು, ಆಲೂರುದೊಡ್ಡಿ, ಬೂದಗುಪ್ಪೆ, ನೀಲಕಂಠನಹಳ್ಳಿ ಸೇರಿದಂತೆ ಇನ್ನಿತರ ವ್ಯಾಪ್ತಿಯ ಗ್ರಾಮಸ್ಥರು ತಮಗೆ ಬೆಂಬಲ ನೀಡಲು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷ ಸಂಘಟನೆಗೂ ಹೆಚ್ಚಿನ ಒತ್ತು ನೀಡುವ ಮೂಲಕ ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರಲು ನಿರಂತರವಾಗಿ ಶ್ರಮಿಸಲಿದ್ದಾರೆ ಎಂದರು.

ಈ ವೇಳೆ ಮುಖಂಡ ಹೂತಗೆರೆ ದಿಲೀಪ್‌ಕುಮಾರ್ ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ಶಾಸಕರು ಸುಮಾರು ಎರಡು ಸಾವಿರ ಕೋಟಿಗೂ ಹೆಚ್ಚಿನ ಅನುದಾನ ತಂದು ಮಾದರಿ ಕ್ಷೇತ್ರವನ್ನಾಗಿ ಶ್ರಮಿಸುತ್ತಿದ್ದಾರೆ. ಕಳೆದ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬ್ಯಾಲದಕೆರೆ ಗ್ರಾಮದಲ್ಲಿ ಶಿಂಷಾ ನದಿಗೆ ಅಡ್ಡಲಾಗಿ ಚೆಕ್‌ಡ್ಯಾಂ ನಿರ್ಮಾಣ ಮತ್ತು ಸೇತುವೆ ನಿರ್ಮಿಸಲು 30 ಕೋಟಿ ರೂ.ಗಳ ಅನುದಾನ ತಂದು ಈ ಭಾಗದ ಜನರ ಬಹುದಿನದ ಬೇಡಿಕೆಯನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಸುತ್ತಮುತ್ತಲಿನ ಗ್ರಾಮಸ್ಥರು ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು.

ಈ ವೇಳೆ ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ದಾಸೇಗೌಡ, ತಾಪಂ ಮಾಜಿ ಅಧ್ಯಕ್ಷ ನಾಗೇಗೌಡ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕರಾದ ಶಂಕರಲಿಂಗಯ್ಯ, ಚಂದ್ರನಾಯಕ್, ತಗ್ಗಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವಿಜಯ್.ಎಸ್.ಗೌಡ, ಸ್ಥಳೀಯ ಮುಖಂಡರು ಹಾಜರಿದ್ದರು.