9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು

| Published : Sep 29 2024, 01:34 AM IST

ಸಾರಾಂಶ

ಶತಮಾನ ಕಂಡ ಮೈಸೂರು ವೈದ್ಯಕೀಯ ಕಾಲೇಜು 9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಹೆಗ್ಗಳಿಕೆ ಹೊಂದಿದೆ

ಕನ್ನಡಪ್ರಭ ವಾರ್ತೆ ಮೈಸೂರುವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸಿದರು.ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಶತಮಾನ ಕಂಡ ಮೈಸೂರು ವೈದ್ಯಕೀಯ ಕಾಲೇಜು 9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಹೆಗ್ಗಳಿಕೆ ಹೊಂದಿದೆ. ಪ್ರಪಂಚದಾದ್ಯಂತ ಈ ಕಾಲೇಜಿನಲ್ಲಿ ಕಲಿತ ವೈದ್ಯರು ವಿಸ್ತರಿಸಿಕೊಂಡಿದ್ದಾರೆ ಎಂದರು.ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಹೆಚ್ಚು ಪರಿಣಿತಿ ಮತ್ತು ಅನುಭವ ಇರುತ್ತದೆ ಎನ್ನುವುದು ನನ್ನ ಭಾವನೆ. ಸರ್ಕಾರಿ ಆಸ್ಪತ್ರೆಗೆ ಬರುವವರು ಹೆಚ್ಚಿನವರು ಬಡವರು. ಇವರು ವೈದ್ಯರನ್ನು ದೇವರಂತೆ ಕಾಣುತ್ತಾರೆ. ವೈದ್ಯಕೀಯ ಕ್ಷೇತ್ರದ್ದು ಎರಡು ರೀತಿಯ ಜವಾಬ್ದಾರಿ ಇದೆ. ರೋಗ ಬಂದ ನಂತರ ಚಿಕಿತ್ಸೆ ಕೊಡುವುದು ಮತ್ತು ರೋಗ ಬರದಂತೆ ತಡೆಯುವುದೂ ಕೂಡ ವೈದ್ಯಕೀಯ ಕ್ಷೇತ್ರದ ಜವಾಬ್ದಾರಿ ಆಗಿದೆ ಎಂದರು. ವೈದ್ಯರು ಸಮಾಜದ ಆಸ್ತಿ. ಇನ್ನೂ ಹೆಚ್ಚಿನ ವೈದ್ಯರು ಈ ಕಾಲೇಜಿನಿಂದ ಹೊರಗೆ ಬಂದು ಜನರ ಆಸ್ತಿ ಆಗಲಿ.ಸೇವೆ, ಶುಚಿತ್ವ ಮತ್ತು ಗುಣಮಟ್ಟದಲ್ಲಿ ಯಾವುದಕ್ಕೂ ಕಡಿಮೆ ಇಲ್ಲದಂತೆ ಮೈಸೂರು ವೈದ್ಯಕೀಯ ಕಾಲೇಜು ಪ್ರಗತಿ ಕಾಣಲಿ ಎಂದು ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ಡಾ. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಐಜಿ ಬೋರಲಿಂಗಯ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಯಾಸಿನ್, ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕುಲಪತಿ ಡಾ.ಎಂ.ಕೆ. ರಮೇಶ್, ಮೈಸೂರು ವೈದ್ಯಕೀಯ ಕಾಲೇಜಿನ ಡೀನ್ ಮತ್ತು ನಿರ್ದೇಶಕಿ ಡಾ.ಕೆ.ಆರ್. ದಾಕ್ಷಾಯಣಿ ಸೇರಿ ಹಲವರು ಇದ್ದರು.