ಅರಸೀಕೆರೆ: ತಾಲೂಕಿನ ಯಳವಾರೆ ಸಮೀಪ ತಹಸೀಲ್ದಾರ್‌ ಸಂತೋಷ್ ಕುಮಾರ್ ಅವರ ಅಧಿಕೃತ ಸರ್ಕಾರಿ ವಾಹನ ಅಪಘಾತಕ್ಕೀಡಾಗಿ ಪಲ್ಟಿ ಹೊಡೆದ ಘಟನೆ ನಡೆದಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸಿದ ಸಮಯದಲ್ಲಿ ವಾಹನದಲ್ಲಿ ಚಾಲಕ ಹಾಗೂ ವಿದ್ಯಾರಣ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಶಿಕುಮಾರ್‌ ಇದ್ದರು. ಅವರು ಹಾಸನಕ್ಕೆ ಪಿಯು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಹಸ್ತಾಂತರಿಸಿ ಮರಳುತ್ತಿರುವಾಗ ಈ ಘಟನೆ ನಡೆದಿದೆ. ಅಕಸ್ಮಾತ್ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿದರು. ಅದೃಷ್ಟವಶಾತ್ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳಷ್ಟೇ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ಅರಸೀಕೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.