ಸಾರಾಂಶ
ಉಡುಪಿ: ದೇಶದ ಬೆನ್ನುಲುಬಾದ ರೈತಾಪಿ ವರ್ಗದ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮ ಪ್ರಯೋಜನಕಾರಿ ಎಂದು ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ.
ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರದ ಯೋಜನೆಗಳ ಮಾಹಿತಿ ರೈತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಮುತುವರ್ಜಿ ವಹಿಸಿ, ರೈತರು ಗರಿಷ್ಟ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಜನರಲ್ಲಿ ಮಾಹಿತಿಯ ಕೊರತೆ ಇದ್ದಾಗ ಇಲಾಖಾಧಿಕಾರಿಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜನರಿಗೆ ಸರಿಯಾದ ಮಾಹಿತಿ ತಲುಪುತ್ತದೆ ಎಂದರು.ರೈತರು ಕೇವಲ ರೈತರಾಗಿ ಉಳಿಯದೆ, ಉದ್ದಿಮೆ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಜಾರಿಗೆ ತಂದಿರುವ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಪ್ರಯೋಜನ ಜಿಲ್ಲೆಯ ಎಲ್ಲಾ ರೈತರು ಪಡೆಯುವಂತಾಗಲಿ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಕೇಂದ್ರ ಸರ್ಕಾರದ 6 ಲಕ್ಷ ಮತ್ತು ರಾಜ್ಯ ಸರ್ಕಾರದ 9 ಲಕ್ಷ ಸಹಾಯಧನದೊಂದಿಗೆ ಯೋಜನೆಯ ಅಡಿಯಲ್ಲಿ ಶೇ. 50 ರಷ್ಟು ಅಥವಾ ಗರಿಷ್ಟ 15 ಲಕ್ಷ ರು. ಸಹಾಯಧನ ನೀಡಲಾಗುವುದು. ಈವರೆಗೂ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 6500ಕ್ಕೂ ಹೆಚ್ಚು ಉದ್ದಿಮೆದಾರರಿಗೆ ಸಾಲ ಮಂಜೂರಾಗಿದೆ ಎಂದರು.2025-26ನೇ ಸಾಲಿನ ಆಯವ್ಯಯದಲ್ಲಿ 5000 ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ 206.00 ಕೋಟಿ ಅನುದಾನ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 374 ವಿವಿಧ ಉದ್ದಿಮೆದಾರರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಪ್ರಸ್ತುತ 43 ಫಲಾನುಭವಿಗಳು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಆಹಾರ ಸಂಸ್ಕರಣಾ ಉದ್ದಿಮೆಯಲ್ಲಿರುವ ಸಾರ್ವಜನಿಕರು ಯೋಜನೆಯ ಪ್ರಯೋಜನ ಪಡೆಯಬೇಕು ಎಂದರು.
ಸೂರಜ್ ಶೆಟ್ಟಿ, ವೆಂಕಟೇಶ್ ನಾಯ್ಕ್, ರಾಜೇಶ್ ಡಿ.ಪಿ, ರೂಪಾಶ್ರೀ ಹಾಗೂ ಡಾ. ಫಜಲ್ ಯೋಜನೆಯ ಕುರಿತು ಮಾಹಿತಿ ನೀಡಿದರು.ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಜು, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಲೀಡ್ ಬ್ಯಾಂಕ್ನ ಸುಮನ್, ಕೆಪೆಕ್ ನ ಅರವಿಂದ್ ಮತ್ತಿತರರಿದ್ದರು.ಕೃಷಿ ಇಲಾಖೆಯ ಅಧಿಕಾರಿ ಶ್ರೀರಾಮ್ ಹೆಗಡೆ ವಂದಿಸಿದರು.