ಪ್ರತಿಭೆ ಎಲ್ಲ ವಿದ್ಯಾರ್ಥಿಗಳಲ್ಲೂ ಇರುತ್ತದೆ. ಆದರೆ ಅದನ್ನು ಗುರುತಿಸಿ, ಪ್ರದರ್ಶಿಸಲು ಸೂಕ್ತ ವೇದಿಕೆ ದೊರೆತಾಗ ಪ್ರತಿಭೆಗೆ ಮತ್ತಷ್ಟು ಶಕ್ತಿ ಸಿಗುತ್ತದೆ. ಅಂತಹ ವೇದಿಕೆಯನ್ನು ಜನತಾ ಪಿಯು ಕಾಲೇಜು ಕಲ್ಪಿಸುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಮಾಜಿ ಶಾಸಕ ಹಾಗೂ ವಿ.ವಿ.ವಿ. ಮಂಡಳಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು.
ಕುಂದಾಪುರ : ಪ್ರತಿಭೆ ಎಲ್ಲ ವಿದ್ಯಾರ್ಥಿಗಳಲ್ಲೂ ಇರುತ್ತದೆ. ಆದರೆ ಅದನ್ನು ಗುರುತಿಸಿ, ಪ್ರದರ್ಶಿಸಲು ಸೂಕ್ತ ವೇದಿಕೆ ದೊರೆತಾಗ ಪ್ರತಿಭೆಗೆ ಮತ್ತಷ್ಟು ಶಕ್ತಿ ಸಿಗುತ್ತದೆ. ಅಂತಹ ವೇದಿಕೆಯನ್ನು ಜನತಾ ಪಿಯು ಕಾಲೇಜು ಕಲ್ಪಿಸುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಮಾಜಿ ಶಾಸಕ ಹಾಗೂ ವಿ.ವಿ.ವಿ. ಮಂಡಳಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು.
ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ‘ಜನತಾ ದಿಬ್ಬಣ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಪರಿಶ್ರಮ, ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಪ್ರೋತ್ಸಾಹದಿಂದ ಜನತಾ ಪಿಯು ಕಾಲೇಜು ರಾಜ್ಯ ಮಟ್ಟದಲ್ಲಿ ಶೈಕ್ಷಣಿಕವಾಗಿ ಗುರುತಿಸಿಕೊಂಡಿದೆ. ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳೆಸುವ ಕಾರ್ಯವೂ ಇಲ್ಲಿ ನಡೆಯುತ್ತಿರುವುದು ಶ್ಲಾಘನೀಯ ಎಂದರು.ಚಿತ್ರನಟ ಪ್ರಕಾಶ್ ತುಮಿನಾಡು ಮಾತನಾಡಿ, ಪ್ರತಿಭೆಗೆ ಇರುವ ಸೌಂದರ್ಯ ಮತ್ತೊಂದರಲ್ಲಿ ಕಾಣಸಿಗದು. ಪ್ರತಿಭೆಗೆ ತನ್ನದೇ ಆದ ಶಕ್ತಿಯಿದೆ. ವಿದ್ಯೆಯ ಜತೆಗೆ ವಿನಯವನ್ನು ಬೆಳೆಸಿಕೊಂಡು ಹೆತ್ತವರನ್ನು ಗೌರವಿಸಬೇಕು. ಇಂದು ಕಲೆಯ ಮೂಲಕವೂ ಬದುಕು ಕಟ್ಟಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ತಮ್ಮ ಪ್ರತಿಭೆಯನ್ನು ಬೆಳಗಿಸಲು ದೊರೆಯುವ ಪ್ರತಿಯೊಂದು ವೇದಿಕೆಯನ್ನೂ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ, ಇಂದಿನ ದಿನಗಳಲ್ಲಿ ಅವಕಾಶಗಳು ಎಲ್ಲ ಕ್ಷೇತ್ರಗಳಲ್ಲೂ ದೊರೆಯುತ್ತಿವೆ. ಶೈಕ್ಷಣಿಕ ಕ್ಷೇತ್ರದ ಜತೆಗೆ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ವಿದ್ಯಾರ್ಥಿಗಳಿಗೆ ಅವಕಾಶಗಳಿವೆ. ಜನತಾ ವಿದ್ಯಾ ಸಂಸ್ಥೆ ಇಂತಹ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿದೆ. ಪಠ್ಯದ ಜತೆಗೆ ಸಹಪಠ್ಯ ಚಟುವಟಿಕೆಗಳಿಗೂ ಸಂಸ್ಥೆ ಮೊದಲಿನಿಂದಲೂ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಭವಿಷ್ಯದಲ್ಲಿ ಸಾಧಕರಾಗಿ ರೂಪುಗೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಪ್ರಭಾರ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಆರು ತಂಡಗಳ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಬಹುಮಾನಗಳನ್ನು ಪಡೆದು ಸಂಭ್ರಮಿಸಿದರು. ಉಪ ಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿದರು. ದೀಪಿಕಾ ಆಚಾರ್ಯ ವಂದಿಸಿದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.