ತಂದೆ-ತಾಯಿ ನೀಡುವ ಸಂಸ್ಕಾರ ಹಾಗೂ ಗುರುಗಳು ಬೋಧಿಸುವ ವಿದ್ಯೆ ವ್ಯಕ್ತಿಯ ಜೀವನದ ಅತ್ಯಮೂಲ್ಯ ಸಂಪತ್ತಾಗಿದ್ದು, ಅದನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದು ಶಿಕಾರಿ ರಾಮು ಹೇಳಿದರು.

ಕಂಪ್ಲಿ: ತಂದೆ-ತಾಯಿ ನೀಡುವ ಸಂಸ್ಕಾರ ಹಾಗೂ ಗುರುಗಳು ಬೋಧಿಸುವ ವಿದ್ಯೆ ವ್ಯಕ್ತಿಯ ಜೀವನದ ಅತ್ಯಮೂಲ್ಯ ಸಂಪತ್ತಾಗಿದ್ದು, ಅದನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದು ಶಿಕಾರಿ ರಾಮು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಂಪ್ಲಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಹಮ್ಮಿಕೊಂಡಿದ್ದ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿನಿಯರಲ್ಲಿ ಅಡಗಿರುವ ಕಲಾ ಪ್ರತಿಭೆಯನ್ನು ಹೊರತರುವಲ್ಲಿ ಇಂತಹ ತರಬೇತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ. ಸಂಗೀತ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ವಿದ್ಯಾರ್ಥಿನಿಯರು ದೊರೆಯುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಸತಿ ನಿಲಯದ ಪಾಲಕ ವಿರೂಪಾಕ್ಷ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿಕೊಂಡು ಶಿಸ್ತು ಮತ್ತು ಪರಿಶ್ರಮದಿಂದ ಸಾಧನೆ ಮಾಡಬೇಕು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆತಾಗ ಅದನ್ನು ಸಮರ್ಥವಾಗಿ ಬಳಸಿಕೊಂಡರೆ ಶಾಲೆ, ಕುಟುಂಬ ಹಾಗೂ ಸಮಾಜಕ್ಕೆ ಕೀರ್ತಿ ತರುವ ಅವಕಾಶ ಸಿಗುತ್ತದೆ. ನಮ್ಮ ವಿದ್ಯಾರ್ಥಿ ನಿಲಯದಲ್ಲಿ ಈ ತರಬೇತಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅಭಿನಂದನೆ ಸಲ್ಲಿಸಿದರು.

ಶೈಲಾ ದೇವರುಮನಿ ಮಾತನಾಡಿ, ಆರು ತಿಂಗಳ ಕಾಲ ನಡೆಯುವ ಈ ಸುಗಮ ಸಂಗೀತ ತರಬೇತಿಯು ವಿದ್ಯಾರ್ಥಿನಿಯರಿಗೆ ಕಲೆಯನ್ನು ಕಲಿಯುವ ಅಪೂರ್ವ ಅವಕಾಶವಾಗಿದೆ. ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಶಿಕ್ಷಕರು, ವಿದ್ಯಾರ್ಥಿನಿಯರು, ವಸತಿ ನಿಲಯದ ಸಿಬ್ಬಂದಿ ಉಪಸ್ಥಿತರಿದ್ದರು.