ಸಾರಾಂಶ
ಎಚ್ಡಿಕೆ ಮುಖ್ಯಮಂತ್ರಿಗಳಾಗಿದ್ದ ವೇಳೆ ರೈತರ ಸಾಲಮನ್ನ ಮಾಡಿ ರೈತರ ಕಷ್ಟಕ್ಕೆ ನೆರವಾಗಿದ್ದಾರೆ. ಜತೆಗೆ ಲಾಟರಿ, ಸರಾಯಿ ನಿಷೇಧಿಸಿ ಮಹಿಳೆಯರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ.
ಪಾಂಡವಪುರ : ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜಿಲ್ಲೆಗೆ ಕೃತಕ ಬರಗಾಲ ಕೊಡುಗೆಯಾಗಿ ನೀಡಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ದೂರಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಸೋಮವಾರ ಮುಖಂಡರು, ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸಿದ ವೇಳೆ ಮಾತನಾಡಿದರು.
ನಾನು ಸಚಿವನಾಗಿದ್ದ ವೇಳೆ 75 ಅಡಿ ನೀಡಿದ್ದರೂ ನಾಲೆಗೆ ನೀರು ಹರಿಸಿ ರೈತರು, ಜನಜಾನುವಾರುಗಳಿಗೆ ನೀರು ಕೊಡುವ ಕೆಲಸ ಮಾಡಿದ್ದೆ. ಈಗ 90 ಅಡಿ ನೀರಿದ್ದರೂ ಸಹ ನಾಲೆಗೆ ನೀರು ಹರಿಸದೆ ಜನಜಾನುವಾರುಗಳಿಗೂ ಕುಡಿಯುವ ನೀರಿಗೆ ಸಮಸ್ಯೆ ಅನುಭವಿಸುವಂತೆ ಸರ್ಕಾರ ಮಾಡಿದೆ ಎಂದರು.
ನಮ್ಮ ರೈತರಿಗೆ ನೀರು ಕೊಡದೆ ಇಂಡಿಯಾ ಮಿತ್ರಕೂಟದ ತಮಿಳುನಾಡಿನ ಸಿಎಂ ಸ್ಟಾಲಿನ್ನನ್ನು ಒಲಿಸಿಕೊಳ್ಳುವುದಕ್ಕಾಗಿ ತಮಿಳುನಾಡಿಗೆ ನೀರು ಹರಿಸಿದ್ದಾರೆ ಎಂದು ಕಿಡಿಕಾರಿದರು.
ಪಾಂಡವಪುರ ಟೌನ್ನ ಸಿ.ಎಸ್.ಪುಟ್ಟರಾಜು ಅವರ ನಿವಾಸದಲ್ಲಿ ಎಲ್ಲಾ ಪುರಸಭೆ ಸದಸ್ಯರು, ಮುಸ್ಲಿಂ ಸಮುದಾಯದ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಟೌನ್ನಲ್ಲಿ ಹೆಚ್ಚಿನ ಅಂತರದ ಮತ ನೀಡಬೇಕು ಎಂದು ಮನವಿ ಮಾಡಿದರು.
ಕಾವೇರಿ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಕೇಂದ್ರ ಮಟ್ಟದಲ್ಲಿ ಸರಿ ಪಡಿಸಬೇಕಾದರೆ ಮಂಡ್ಯದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಬೇಕಾಗಿದೆ ಎಂದು ಮತದಾರರಲ್ಲಿ ಮನವಿ ಮಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ನಿರಂತರವಾಗಿ ಮಂಡ್ಯ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ರೈತ ಕುಟುಂಬದ ಮನೆಗಳಿಗೆ ಭೇಟಿಕೊಟ್ಟು ಆರ್ಥಿಕ ನೆರವು ನೀಡಿ ಸಾಂತ್ವನ ಹೇಳಿದ್ದರು.
ಎಚ್ಡಿಕೆ ಮುಖ್ಯಮಂತ್ರಿಗಳಾಗಿದ್ದ ವೇಳೆ ರೈತರ ಸಾಲಮನ್ನ ಮಾಡಿ ರೈತರ ಕಷ್ಟಕ್ಕೆ ನೆರವಾಗಿದ್ದಾರೆ. ಜತೆಗೆ ಲಾಟರಿ, ಸರಾಯಿ ನಿಷೇಧಿಸಿ ಮಹಿಳೆಯರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ. ಜಿಲ್ಲೆಯ ಜತೆಗೆ ಗೆಲ್ಲಿಸಿದರೆ ಹಲವು ವರ್ಷಗಳಿಂದ ಜಿಲ್ಲೆಯ ಜನರು ಅನುಭವಿಸುತ್ತಿರುವ ಕಾವೇರಿ ನದಿ ನೀರಿನ ಸಮಸ್ಯೆಗೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದು ಎಂದು ಮನವಿ ಮಾಡಿದರು.
ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಪಂಯಿಂದ ಆರಂಭಗೊಂಡ ಪ್ರಚಾರ ಸಭೆ ಲಕ್ಷ್ಮಿಸಾಗರ, ಟಿ.ಎಸ್.ಛತ್ರ, ಸುಂಕಾತೊಣ್ಣೂರು, ಹಳೇಬೀಡು, ಮಾಣಿಕ್ಯನಹಳ್ಳಿ, ಜಕ್ಕನಹಳ್ಳಿ, ಮೇಲುಕೋಟೆ ಹಾಗೂ ನಾರಾಯಣಪುರ ಗ್ರಾಪಂ ವ್ಯಾಪ್ತಿಯಲ್ಲಿ ಮುಖಂಡರು ಕಾರ್ಯಕರ್ತರ ಸಭೆ ನಡೆಸಿದರು.
ಏ.20ರಂದು ಬಹಿರಂಗ ಸಭೆ:
ಪಟ್ಟಣದ ಕ್ರೀಡಾಂಗಣದ ಮುಂಭಾಗದ ಮೈದಾನದಲ್ಲಿ ಏ.20ರಂದು ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಬೃಹತ್ ಬಹಿರಂಗ ಪ್ರಚಾರ ಸಭೆ ಆಯೋಜಿಸಲಾಗಿದೆ. ಅದಕ್ಕೂ ಮುನ್ನ ಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರೊಟ್ಟಿಗೆ ಬೃಹತ್ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು. ಬಹಿರಂಗ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಜೆಡಿಎಸ್-ಬಿಜೆಪಿ ನಾಯಕರು, ಮುಖಂಡರು ಭಾಗವಹಿಸಲಿದ್ದಾರೆ. ಅಂದಿನ ಸಭೆಗೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.
ಸಭೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್ ಸೇರಿದಂತೆ ಹಳೇಬೀಡು ಗ್ರಾಪಂ ಅಧ್ಯಕ್ಷರು, ಸದಸ್ಯರು, ಮುಖಂಡರು ಸೇರಿದಂತೆ ಆಯಾ ಪಂಚಾಯಿತಿ ಗ್ರಾಪಂ ಅಧ್ಯಕ್ಷರು, ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.