ಕನ್ನಡಪ್ರಭ ವಾರ್ತೆ ಬಾಗಲಕೋಟೆ ಗುರಿ ಮುಟ್ಟುವಲ್ಲಿ ಗುರುವಿನ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಜಗತ್ತನ್ನು ಆವರಿಸುತ್ತಿದ್ದರೂ, ಗುರುವಿನ ಸ್ಥಾನವನ್ನು ಯಾವುದೇ ತಂತ್ರಜ್ಞಾನವೂ ತುಂಬಲು ಸಾಧ್ಯವಿಲ್ಲ. ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಅತ್ಯಗತ್ಯ ಎಂದು ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜೆ.ವಿ.ಚವ್ಹಾಣ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಗುರಿ ಮುಟ್ಟುವಲ್ಲಿ ಗುರುವಿನ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಜಗತ್ತನ್ನು ಆವರಿಸುತ್ತಿದ್ದರೂ, ಗುರುವಿನ ಸ್ಥಾನವನ್ನು ಯಾವುದೇ ತಂತ್ರಜ್ಞಾನವೂ ತುಂಬಲು ಸಾಧ್ಯವಿಲ್ಲ. ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಅತ್ಯಗತ್ಯ ಎಂದು ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜೆ.ವಿ.ಚವ್ಹಾಣ ಹೇಳಿದರು.

ಬಿವಿವಿ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಭಾರತೀಯ ಶಿಕ್ಷಣ ಮಂಡಳಿ, ಬಾಗಲಕೋಟೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದವರು, ಗುರುಗಳು ಕೇವಲ ಪಠ್ಯ ವಿಷಯವನ್ನು ಬೋಧಿಸುವವರಲ್ಲ; ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಮಾರ್ಗದರ್ಶಕರಾಗಿದ್ದಾರೆ. ಜೀವನದಲ್ಲಿ ಯಶಸ್ಸು ಸಾಧಿಸಲು ಜ್ಞಾನ, ಶಿಸ್ತು, ಮೌಲ್ಯಗಳು ಹಾಗೂ ಉತ್ತಮ ಸಂಸ್ಕಾರ ಅಗತ್ಯವಾಗಿದ್ದು, ಇವುಗಳನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ತರವಾಗಿದೆ ಎಂದರು.

ಕಾರ್ಯಕ್ರಮದ ಗೌರವಾನ್ವಿತ ಅತಿಥಿ ಹಾಗೂ ಭಾರತೀಯ ಶಿಕ್ಷಣ ಮಂಡಳಿಯ ಅಧ್ಯಕ್ಷ ಎಸ್.ಆರ್. ಮನಹಳ್ಳಿ ಮಾತನಾಡಿ, ಭಾರತೀಯ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳನ್ನು ಹೆಣ್ಣುಮಕ್ಕಳಲ್ಲಿ ಬೆಳೆಸುವುದು ಅತ್ಯವಶ್ಯಕವಾಗಿದೆ. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ; ಅದು ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸುವ ಅಮೂಲ್ಯ ಅವಕಾಶವಾಗಿದೆ. ಬುದ್ಧಿ, ಭಾವನೆ ಹಾಗೂ ಮನಸ್ಸಿನ ಸಮಗ್ರ ವಿಕಾಸದ ಮೂಲಕ ಸುಂದರ ಮತ್ತು ಮೌಲ್ಯಯುತ ಸಮಾಜವನ್ನು ನಿರ್ಮಿಸಬಹುದು ಎಂದರು.

ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಜೆ.ಒಡೆಯರ ಮಾತನಾಡಿ, ಭಾರತೀಯ ಶಿಕ್ಷಣ ಪದ್ಧತಿಯು ಜಗತ್ತಿನಲ್ಲಿಯೇ ವಿಶಿಷ್ಟ ಸ್ಥಾನ ಹೊಂದಿದೆ. ಗುರು-ಶಿಷ್ಯ ಪರಂಪರೆಯು ಭಾರತೀಯ ಸಂಸ್ಕೃತಿಯ ಮಹತ್ವದ ಭಾಗವಾಗಿದ್ದು, ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜತೆಗೆ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿನಿ ಸೌಜನ್ಯ ಪೂಜಾರ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಅಡಗಿರುವ ಕೌಶಲ್ಯ ಹಾಗೂ ಸಾಮಥ್ರ್ಯವನ್ನು ಗುರುತಿಸಿ ಬೆಳೆಸುವ ಶಕ್ತಿ ಗುರುವಿಗಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಗುರುವಿನ ಮಾರ್ಗದರ್ಶನ ಹಾಗೂ ಪ್ರೋತ್ಸಾಹದ ಮಹತ್ವ ಅಪಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತೀಯ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ಡಾ.ವಿಜಯಲಕ್ಷ್ಮಿ ಪಿ. ಹೊಸಕೇರಿ ಹಾಗೂ ಕಾರ್ಯದರ್ಶಿ ಲಿಂಗರಾಜ ವೈದ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನಿತಾ ನಾಯಕ ಪ್ರಾರ್ಥಿಸಿದರು. ಐಕ್ಯೂಎಸಿ ಸಂಯೋಜಕಿ ಪಿ.ಕೆ.ಚೌಗುಲಾ ಸ್ವಾಗತಿಸಿದರು. ಎನ್ಎಸ್ಎಸ್ ಅ ಘಟಕದ ಕಾರ್ಯಕ್ರಮಾಧಿಕಾರಿ ಎಸ್.ಐ. ಪತ್ತಾರ ಅತಿಥಿಗಳನ್ನು ಪರಿಚಯಿಸಿದರು. ಎನ್ಎಸ್ಎಸ್ ಬ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಎಸ್.ಎಂ.ಸಂಗಮ ವಂದಿಸಿದರು. ಕುಮಾರಿ ಸೌಮ್ಯ ಮಹೇಂದ್ರಕರ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.