ಸಾರಾಂಶ
ಹಾವೇರಿ: ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಮಾತು ಕೊಟ್ಟಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ) ನೇತೃತ್ವದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.ಅಹೋರಾತ್ರಿ ಪ್ರತಿಭಟನಾ ಧರಣಿಗೆ ನೀಡಿದ್ದ ಕರೆಯ ಮೇರೆಗೆ ನಗರದ ಕಾಗಿನೆಲೆ ರಸ್ತೆಯಲ್ಲಿರುವ ಮುರುಘರಾಜೇಂದ್ರ ಮಠದ ಆವರಣದಲ್ಲಿ ಜಮಾವಣೆಗೊಂಡು ಪ್ರತಿಭಟನಾ ಪಾದಯಾತ್ರೆ ನಡೆಸಿದರು.
ನಗರದ ಕಾಗಿನೆಲೆ ವೃತ್ತ, ಪಿ.ಬಿ. ರಸ್ತೆ, ಹೊಸಮನಿ ಸಿದ್ದಪ್ಪ ವೃತ್ತ, ಗೂಗಿಕಟ್ಟಿ, ಹಳೆ ಪುರಸಭೆ ರಸ್ತೆ, ಜೆ.ಪಿ. ವೃತ್ತ, ಹಳೇ ಕೋರ್ಟ್, ಎಂಜಿ ವೃತ್ತ ಮಾರ್ಗವಾಗಿ ಸಂಚರಿಸಿ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತವನ್ನು ತಲುಪಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ವೀರೇಶ ಎನ್.ಎಸ್. ಮಾತನಾಡಿ, 2025ರ ಜನವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸರ್ಕಾರ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೂ ಯಾವ ಬೇಡಿಕೆಗಳು ಈಡೇರಿಲ್ಲ.ಬದಲಾಗಿ ಆಶಾ ಸಾಫ್ಟ್ ಎಂದು ಅವೈಜ್ಞಾನಿಕ ತಂತ್ರಜ್ಞಾನವನ್ನು ತಂದು ಆಶಾ ಕಾರ್ಯಕರ್ತೆಯರಿಗೆ ಇನ್ನಿಲ್ಲದ ಸಂಕಷ್ಟವನ್ನು ತಂದೊಡ್ಡಿದ್ದಾರೆ. ಇದು ಅವೈಜ್ಞಾನಿಕವಾಗಿದೆ. ವಿವಿಧ ಕೆಲಸಗಳನ್ನು ಆಶಾಗಳಿಂದಲೇ ಮಾಡಿಸಿಕೊಂಡು ಸಂಬಳವನ್ನು ಸರಿಯಾಗಿ ಕೊಡುವುದಿಲ್ಲ ಎಂದು ದೂರಿದರು.ಅಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ ಗ್ಯಾರಂಟಿಯನ್ನು ಕಳೆದ ಏಪ್ರಿಲ್ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. ರಾಜ್ಯ ಬಜೆಟ್ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಒಂದು ಸಾವಿರ ರು. ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.ಸಂಘದ ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪುರಮಠ ಮಾತನಾಡಿ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಆಶಾ ಕಾರ್ಯಕರ್ತೆಯರು ತಿಂಗಳಿಗೆ ₹15 ಸಾವಿರ ವೇತನ ಪಡೆಯುತ್ತಿದ್ದಾರೆಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ ವಾಸ್ತವವಾಗಿ ತಿಂಗಳಿಗೆ ₹7 ಸಾವಿರ ಪಡೆಯುತ್ತಿದ್ದೇವೆ. ಎಷ್ಟೇ ಕೆಲಸ ಮಾಡಿದರೂ ₹7 ಸಾವಿರಕ್ಕಿಂತ ಹೆಚ್ಚು ವೇತನ ನಮಗೆ ಸಿಗುವುದಿಲ್ಲ. ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯ ಅವೈಜ್ಞಾನಿಕ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. 2025ರ ಜೂನ್, ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲಿಯೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.ಸಂಘದ ಉಪಾಧ್ಯಕ್ಷೆ ಮಂಜುಳಾ ಮಾಸೂರ ಮಾತನಾಡಿದರು. ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರಾದ ರತ್ನಾ ಗಿರಣಿ, ಮಧುಲತಾ, ಪುಷ್ಪಾ ಮಡ್ಲೂರಮಠ, ರೇಖಾ ಕರಿಗಾರ, ರೇಹನಾಬಾನು, ರತ್ನಾ ಮಕರವಳ್ಳಿ, ಹೂವಕ್ಕ ಮಕರವಳ್ಳಿ, ನೀಲವ್ವ ಲಮಾಣಿ, ಮಂಗಳಾ ಚಪ್ಪರದಹಳ್ಳಿಮಠ, ಸವಿತಾ ಪಾಟೀಲ, ವಿನೋದಾ ಹೊಂಡದ, ಪ್ರೇಮಾ, ರೂಪಾ, ಗಂಗಮ್ಮ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.