ಸಾರಾಂಶ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಗೋಪಿವೃತ್ತದಲ್ಲಿ ಬುಧವಾರ ಮಳೆಯಲ್ಲೂ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಗೋಪಿವೃತ್ತದಲ್ಲಿ ಬುಧವಾರ ಮಳೆಯಲ್ಲೂ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಳೆದ ಜನವರಿ ತಿಂಗಳಲ್ಲಿ ರಾಜ್ಯದ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಸತತ ನಾಲ್ಕು ದಿನಗಳ ಹೋರಾಟ ಕೈಗೊಂಡಾಗ, ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಪ್ರತಿಯೊಬ್ಬರಿಗೂ ಕೇಂದ್ರದ ಭಾಗಶಃ ಪ್ರೋತ್ಸಾಹಧನ ಮತ್ತು ರಾಜ್ಯದ ಗೌರವ ಧನಗಳನ್ನು ಕ್ರೂಢೀಕರಿಸಿ ಕನಿಷ್ಠ 10 ಸಾವಿರ ರು. ಗೌರವಧನ ಗ್ಯಾರಂಟಿ ಮಾಡುತ್ತೇವೆ. ಬಜೆಟ್ನಲ್ಲಿ ಹೆಚ್ಚಳ ಘೋಷಿಸುತ್ತೇವೆ ಎಂದು ಮಾತುಕೊಟ್ಟಿದ್ದರು. ಆದರೆ ಈಗ 7 ತಿಂಗಳು ಕಳೆದಿದೆ ಕೊಟ್ಟಮಾತು ಈಡೇರಿಸದೇ ಗುಬ್ಬಿಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುವಂತೆ ನತದೃಷ್ಟ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಿ ಬೀದಿಪಾಲು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಮುಖ್ಯಮಂತ್ರಿಗಳು ಘೋಷಿಸಿದ ಕನಿಷ್ಠ 10 ಸಾವಿರ ರು. ಗೌರವ ಧನ ಏಪ್ರಿಲ್ನಿಂದಲೇ ಅನ್ವಯವಾಗುವಂತೆ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.