ಸಾರಾಂಶ
ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರು ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಕನ್ನಡಪ್ರಭ ವಾರ್ತೆ ನವದೆಹಲಿ
ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರು ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.ಕೇಂದ್ರ ನಾಯಕರ ಭೇಟಿಗಾಗಿ ಮಂಗಳವಾರವೇ ದೆಹಲಿಗೆ ಆಗಮಿಸಿರುವ ಅಶೋಕ್, ಬುಧವಾರ ಬೆಳಗ್ಗೆ ಎಚ್ಡಿಕೆ ನಿವಾಸಕ್ಕೆ ತೆರಳಿ ಅವರ ಜೊತೆ ಮಾತುಕತೆ ನಡೆಸಿದರು. ಈ ವೇಳೆ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಜೊತೆಗಿದ್ದರು. ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಭೇಟಿಯ ವೇಳೆ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಲಾಯಿತು. ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತ ಬೆಳವಣಿಗೆಗಳು, ಆಡಳಿತಾರೂಢ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
ಎಚ್ಡಿಕೆ ಜೊತೆ ಸೋಮಣ್ಣ ಮಾತುಕತೆ:ಬಳಿಕ, ಎಚ್ಡಿಕೆ ನಿವಾಸಕ್ಕೆ ತೆರಳಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, ಕುಮಾರಸ್ವಾಮಿ ಜೊತೆ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ದೆಹಲಿಯಲ್ಲಿ ಬುಧವಾರ ನಡೆದ ಒಕ್ಕಲಿಗ ನಾಯಕರ ಈ ಭೇಟಿ, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಪ್ರಧಾನ್ ಭೇಟಿಯಾದ ಅಶೋಕ್:ಈ ಮಧ್ಯೆ, ಆರ್.ಅಶೋಕ್ ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ, ಪದಾಧಿಕಾರಿಗಳ ನೇಮಕ ಕುರಿತು ಅಶೋಕ್ ಅವರು ಕೇಂದ್ರ ಸಚಿವರ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡರು ಎಂದು ತಿಳಿದು ಬಂದಿದೆ.