ಕನ್ನಡಪ್ರಭ ವಾರ್ತೆ ಜಮಖಂಡಿಕುಂದಾಪುರದ ‘ಕನ್ನಡಪ್ರಭ’ ದಿನಪತ್ರಿಕೆಯ ವರದಿಗಾರ ಶ್ರೀಕಾಂತ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ವೈದ್ಯರಿಂದ ನಡೆದ ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣವನ್ನು ಖಂಡಿಸಿ, ಕರ್ನಾಟಕ ಪ್ರೆಸ್‌ ಕ್ಲಬ್‌ ಜಮಖಂಡಿ ಘಟಕದ ವತಿಯಿಂದ ತಹಸೀಲ್ದಾರ ಅನಿಲ ಬಡಿಗೇರ ಅವರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಜಮಖಂಡಿ

ಕುಂದಾಪುರದ ‘ಕನ್ನಡಪ್ರಭ’ ದಿನಪತ್ರಿಕೆಯ ವರದಿಗಾರ ಶ್ರೀಕಾಂತ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ವೈದ್ಯರಿಂದ ನಡೆದ ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣವನ್ನು ಖಂಡಿಸಿ, ಕರ್ನಾಟಕ ಪ್ರೆಸ್‌ ಕ್ಲಬ್‌ ಜಮಖಂಡಿ ಘಟಕದ ವತಿಯಿಂದ ತಹಸೀಲ್ದಾರ ಅನಿಲ ಬಡಿಗೇರ ಅವರಿಗೆ ಮನವಿ ಸಲ್ಲಿಸಲಾಯಿತು.

ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಭ್ರಷ್ಟಾಚಾರದ ಕುರಿತು ಸಾರ್ವಜನಿಕ ಹಿತದೃಷ್ಟಿಯಿಂದ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ವರದಿಗಾರ ಶ್ರೀಕಾಂತ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ಆಸ್ಪತ್ರೆಯ ಸರ್ಜನ ಡಾ.ಮಹೇಂದ್ರ ಕುಮಾರ ಶೆಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ವರದಿಯಾಗಿದೆ. ಪತ್ರಕರ್ತರು ಸಮಾಜದಲ್ಲಿನ ಅಕ್ರಮ, ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಬೆಳಕಿಗೆ ತರುವ ಜವಾಬ್ದಾರಿ ಹೊಂದಿದ್ದಾರೆ. ಸಾರ್ವಜನಿಕ ಹಿತದ ಸುದ್ದಿಗಳನ್ನು ವರದಿ ಮಾಡಿದ ಕಾರಣಕ್ಕೆ ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಮತ್ತು ಬೆದರಿಕೆ ಹಾಕುವುದು ಪತ್ರಿಕಾ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೃತ್ಯವಾಗಿದೆ ಎಂದು ಕರ್ನಾಟಕ ಪ್ರೆಸ್‌ ಕ್ಲಬ್‌ ಪದಾಧಿಕಾರಿಗಳು ಹೇಳಿದರು.

ಪ್ರಕರಣದಲ್ಲಿ ಆರೋಪಿತ ಸರ್ಕಾರಿ ವೈದ್ಯರನ್ನು ಸೇವೆಯಿಂದ ಅಮಾನತುಗೊಳಿಸಿರುವ ಕ್ರಮವನ್ನು ಸ್ವಾಗತಿಸಿದ ಪ್ರೆಸ್‌ ಕ್ಲಬ್‌, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಪತ್ರಕರ್ತರು ಯಾವುದೇ ಭಯ ಅಥವಾ ಒತ್ತಡವಿಲ್ಲದೆ ತಮ್ಮ ವೃತ್ತಿ ಕರ್ತವ್ಯ ನಿರ್ವಹಿಸಲು ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಪ್ರೆಸ್‌ ಕ್ಲಬ್‌ ಜಮಖಂಡಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.