ಶಿಗ್ಗಾಂವಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಶಹಜಹಾನಸಾಬ ಮುದಕವಿ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗೆ ಜಾತಿನಿಂದನೆ, ಧಮಕಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಶಿಷ್ಯವೇತನಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಬುಧವಾರ ಜೀವಿಕ ಜೀತ ವಿಮುಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಸಂಘದಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಸಮಿತಿ ನಾಮನಿರ್ದೇಶಿತ ಸದಸ್ಯ ಅಶೋಕ ಕಾಳೆ ಮಾತನಾಡಿ, ಘಟನೆಯಿಂದ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಿಷ್ಯವೇತನದಂಥ ವಿಷಯಗಳಲ್ಲಿ ಸಂಶೋಧನಾ ವಿದ್ಯಾರ್ಥಿಗಳನ್ನು ಬೆದರಿಸುವುದು, ನಿಂದಿಸುವುದು ಖಂಡನೀಯ. ಪೊಲೀಸ್ ಇಲಾಖೆ ೫ ದಿನಗಳಲ್ಲಿ ಸಹಾಯಕ ಕುಲಸಚಿವ ಶಹಜಹಾನಸಾಬ ಮುದಕವಿ ಅವರ ಮೇಲೆ ಸುಮೊಟೊ ಕೇಸ್ ದಾಖಲಿಸಿಕೊಂಡು ಬಂಧಿಸಬೇಕು. ಇಲ್ಲದಿದ್ದರೆ ತಹಸೀಲ್ದಾರ್ ಕಚೇರಿ ಮುಂದೆ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ಜೀವಿಕ ಜೀತ ವಿಮುಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಸಂಘದ ವಲಯ ಅಧ್ಯಕ್ಷ ಸುರೇಶ ಹರಿಜನ, ಕಾರ್ಯದರ್ಶಿ ಸುರೇಶ ಬಡೆಪ್ಪನವರ, ಶಿವಶರಣ ಮಾದರ ಚನ್ನಯ್ಯ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಸಂತೋಷ ದೊಡ್ಡಮನಿ, ಅಬ್ದುಲಸತ್ತರ್ ತಿಳವಳ್ಳಿ ಇತರರಿದ್ದರು.