ಸಾರಾಂಶ
ಕನ್ನಡಪ್ರಭ ವಾರ್ತೆ ಅಥಣಿರಾಷ್ಟ್ರೀಯ ಹಬ್ಬ ಎಂದರೇ ರಜಾ ದಿನವಲ್ಲ, ಜ.26 ರಂದು ಜರಗುವ ಗಣರಾಜ್ಯೋತ್ಸವದಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ತಾಲೂಕು ಪಂಚಾಯತಿ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ತಾಲೂಕಿನ ವಿವಿಧ ಇಲಾಖೆಯ ಕಚೇರಿಗಳಲ್ಲಿ ಕಡ್ಡಾಯವಾಗಿ ಮಹಾತ್ಮ ಗಾಂಧೀಜಿ ಮತ್ತು ಡಾ.ಅಂಬೇಡ್ಕರ್ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಬೇಕು. ನಂತರ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭವಾಗುವ ಮೆರವಣಿಗೆಯಲ್ಲಿ ಎಲ್ಲರೂ ಭಾಗವಹಿಸಬೇಕು. ಭೋಜರಾಜ ಕ್ರೀಡಾಂಗಣದಲ್ಲಿ ನಡೆಯುವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಅವರ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಬಹುತೇಕ ಅಧಿಕಾರಿಗಳು ರಾಷ್ಟ್ರೀಯ ಹಬ್ಬದ ದಿನವನ್ನು ರಜಾ ದಿನ ಎಂದು ಭಾವಿಸಿದ್ದಾರೆ. ರಾಷ್ಟ್ರೀಯ ಹಬ್ಬಗಳನ್ನು ಎಲ್ಲರೂ ಕೂಡಿಕೊಂಡು ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸದ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ತಹಸೀಲ್ದಾರ್ ಅವರಿಗೆ ಶಾಸಕರು ಸೂಚನೆ ನೀಡಿದರು.ತಾಲೂಕು ತಹಸೀಲ್ದಾರ್ ವಾಣಿ.ಯು ಮಾತನಾಡಿ ಭೋಜರಾಜ ಕ್ರೀಡಾಂಗಣದಲ್ಲಿ ಜರುಗುವ ಸಾರ್ವಜನಿಕ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುವುದು. ಪೊಲೀಸ್ ಇಲಾಖೆ, ಎನ್ಸಿಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸೇರಿದಂತೆ ವಿವಿಧ ಶಾಲೆಯ ಮಕ್ಕಳು ಪೆರೇಡ್ ನಲ್ಲಿ ಭಾಗವಹಿಸುವರು. ಅದಕ್ಕಾಗಿ ಕ್ರೀಡಾಂಗಣದ ಸ್ವಚ್ಛತೆ, ವೇದಿಕೆಯ ಸಿದ್ಧತೆ, ಆಸನ ಮತ್ತು ಪೆಂಡಾಲ್ ವ್ಯವಸ್ಥೆ, ಧ್ವನಿವರ್ಧಕ, ಕುಡಿಯುವ ನೀರು ಮತ್ತು ಉಪಹಾರದ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಮತ್ತು ಮೆರವಣಿಗೆ ಸಾಗುವ ದಾರಿಯುವುದಕ್ಕೂ ಸ್ವಚ್ಛತೆ ಕೈಗೊಳ್ಳಬೇಕು. ಅಂಗಡಿಕಾರರು ಮುಂಚಿತವಾಗಿ ಅಂಗಡಿಗಳನ್ನು ತೆರೆದು ರಂಗೋಲಿ ಬಿಡಿಸಿ ಅಲಂಕಾರಗೊಳಿಸುವಂತೆ ಸಲಹೆ ನೀಡಬೇಕು. ಪಟ್ಟಣದಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಕಂಡು ಬಂದರೆ ಅವುಗಳನ್ನ ವಶಪಡಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ಪುರಸಭೆ ಮುಖ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪಥಸಂಚಲನ ಜವಾಬ್ದಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ವಹಿಸಿಕೊಂಡು ಅವುಗಳನ್ನು ಮುಂಚಿತವಾಗಿ ಪರಿಶೀಲನೆ ಮಾಡಬೇಕು. ರಾಷ್ಟ್ರಗೀತೆ ಮತ್ತು ನಾಡಗೀತೆಗಳನ್ನು ಪ್ರಸ್ತುತಪಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೂ ಆದ್ಯತೆ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಉಪತಹಸೀಲ್ದಾರ್ ಮಹದೇವ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿ, ಅಭಿಯಂತರ್ ವೀರಣ್ಣ ವಾಲಿ, ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ, ಪಿಎಸೈ ಶಿವಾನಂದ ಕಾರಜೋಳ, ಸಮಾಜ ಕಲ್ಯಾಣ ಅಧಿಕಾರಿ ಬಸವರಾಜ ಯಾದವಾಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಅಶೋಕ ಕಾಂಬಳೆ, ನೀರಾವರಿ ಇಲಾಖೆ ಅಧಿಕಾರಿ ಶ್ರೀಕಾಂತ ಮಾಕಾಣಿ, ಪುರಸಭೆ ಮುಖ್ಯ ಅಧಿಕಾರಿ ಅಶೋಕ ಗುಡಿಮನಿ, ಪ್ರವೀಣ ಹುಣಸಿಕಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಕ್ಯಾಲೆಂಡರ್ ಬಿಡುಗಡೆ:
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಸರ್ಕಾರಿ ನೌಕರರ ಸಹಕಾರಿ ಸಂಘದ 2024ರ ಕ್ಯಾಲೆಂಡರ್ ಮತ್ತು ಡೈರಿಗಳನ್ನು ಶಾಸಕ ಲಕ್ಷ್ಮಣ ಸವದಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಮಗೊಂಡ ಪಾಟೀಲ, ನ್ಯಾಯವಾದಿ ಕಲ್ಲಪ್ಪ ವಣಜೋಳ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.