ಮಂಗಳೂರು: ದೇಶಾದ್ಯಂತ ನಡೆಯುವ ಸಮಾದಾನ ಸಮಾರೋಹ್ 2026 ಹೆಸರಿನ ವಿಶೇಷ ಲೋಕ ಅದಾಲತ್ ಆ.21ರಿಂದ 23ರ ವರೆಗೆ ಮತ್ತು ಚೆಕ್ ಬೌನ್ಸ್ ಪ್ರಕರಣಗಳಿಗೆ ವಿಶೇಷ ಲೋಕ ಅದಾಲತ್ ಜು.18 ಮತ್ತು ನ.21ರಂದು ದ.ಕ. ಜಿಲ್ಲಾ ನ್ಯಾಯಾಲಯ ಹಾಗೂ ಸುಳ್ಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ನ್ಯಾಯಾಲಯಗಳಲ್ಲಿ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದರು.
ಅವರು ಮಂಗಳವಾರ ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಮಾದಾನ ಸಮಾರೋಹ್ ವಿಶೇಷ ಲೋಕ ಅದಾಲತ್ನಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣವನ್ನು ರಾಜೀ ಸಂಧಾನ ಮಾಡಿಕೊಳ್ಳಬಹುದಾಗಿದೆ. ರಾಜ್ಯದ 4378 ಪ್ರಕರಣಗಳು ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿದ್ದು, ಇದರಲ್ಲಿ ದ.ಕ.ಜಿಲ್ಲೆಯ 43 ಪ್ರಕರಣಗಳಿದ್ದು, ಪ್ರಕರಣಗಳಿಗೆ ನೋಟೀಸ್ ಜಾರಿ ಮಾಡಿ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಿ ಮಧ್ಯಸ್ಥಿಕೆಗೆ ಸ್ಥಳಾವಕಾಶವನ್ನು ಒದಗಿಸಲಾಗುತ್ತದೆ. ಪಕ್ಷಾಕಾರರಿಗೆ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳ ರಾಜಿ ಬಗ್ಗೆ ಯಾವುದೇ ಅನುದಾನ ಇದ್ದರೆ, ಸ್ಥಳೀಯ ತಾಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದರು.ಅದೇ ರೀತಿ ದೇಶಾದ್ಯಂತ ಚೆಕ್ಬೌನ್ಸ್ ಪ್ರಕರಣಗಳು ಹೆಚ್ಚಾಗಿರುವುದರಿಂದ ಈ ಸಂಬಂಧ ಜು.18 ಮತ್ತು ನ.27ರಂದು ಎನ್.ಐ. ಆಕ್ಟ್ ಕಲಂ 138 ಅಂದರೆ ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ಲೋಕ ಅದಾಲತ್ ನಡೆಯಲಿದೆ. ಜಿಲ್ಲೆಯಲ್ಲಿ 13,357 ಚೆಕ್ ಬೌನ್ಸ್ ಪ್ರಕರಣಗಳು ಬಾಕಿ ಇದೆ ಎಂದು ಮಾಹಿತಿ ನೀಡಿದರು.ಜು.11ರಂದು ರಾಷ್ಟ್ರೀಯ ಲೋಕ ಅದಾಲತ್: ಜು.11ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ನ್ಯಾಯಾಲಯ ಹಾಗೂ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದೆ. ಈ ಅದಾಲತ್ನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಕೊಳ್ಳಲು ಅವಕಾಶ ಇದೆ.
ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಇದ್ದರು.